ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

Update: 2022-01-24 12:06 GMT
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜ. 24: `ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ. ಸಹಜವಾಗಿ ಆಕಾಂಕ್ಷಿಗಳು ಇರುತ್ತಾರೆ, ಇದರಲ್ಲಿ ತಪ್ಪೇನಿಲ್ಲ. ಯಾವಾಗ, ಯಾವ ರೀತಿ ಮಾಡಬೇಕೆನ್ನುವುದು ಪಕ್ಷದ ವರಿಷ್ಠರ ಗಮನದಲ್ಲಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಸಂಪುಟ ವಿಸ್ತರಣೆ ಸಂಬಂಧ ನಾನೂ ಕೂಡ ಪಕ್ಷದ ವರಿಷ್ಠರ ಗಮನಕ್ಕೆ ಈ ವಿಷಯವನ್ನು ತಂದಿದ್ದೇನೆ. ವರಿಷ್ಠರು ಕರೆದು ಮಾತನಾಡಿದ ಸಂದರ್ಭದಲ್ಲಿ ಎಲ್ಲ ವಿವರಗಳನ್ನು ನೀಡಲಾಗುವುದು' ಎಂದು ತಿಳಿಸಿದರು. `ನಿಗಮ, ಮಂಡಳಿಗಳಿಗೆ ನೇಮಕಾತಿಯು ಪಕ್ಷದಲ್ಲಿ ಈ ಕುರಿತ ಚರ್ಚೆಯ ಮೇಲೆ ಅವಲಂಬಿತವಾಗಿದೆ' ಎಂದರು. 

`ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಂದಿನ ವಾರ ಆಗಲಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, `ಇದು ಪಕ್ಷದ ವರಿಷ್ಠರ ಮೇಲೆ ಅವಲಂಬಿಸಿದೆ. ಅದರ ಆಧಾರದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದರು.

ನಿಗಮ, ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಸಿಎಂ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ. ಪಕ್ಷದವರು ಪರಾಮರ್ಶೆ ಮಾಡಿ ವರದಿ ನೀಡುತ್ತಾರೆ. ಅದರ ಆಧಾರದ ಮೇಲೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. 

ಆಯವ್ಯಯಕ್ಕೆ ಸಿದ್ಧತೆ: `ಬಜೆಟ್ ಸಿದ್ಧತೆಗಳು ಪ್ರಾರಂಭವಾಗಿದೆ. ಡಿಸೆಂಬರ್ ತಿಂಗಳಲ್ಲಿ ಹಣಕಾಸು ಹಾಗೂ ಆದಾಯ ಬರುವ ಇಲಾಖೆಗಳೊಂದಿಗೆ ಆಂತರಿಕ ಸಭೆಗಳನ್ನು ನಡೆಸಲಾಗಿದ್ದು, ಗುರಿಗಳನ್ನು ತಲುಪಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿದೆ. ಡಿಸೆಂಬರ್ ಅಂತ್ಯದಿಂದ ಕೋವಿಡ್ ಬಂದಿರುವ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಯೊಂದಿಗೆ ಮತ್ತೊಂದು ಸಭೆಯನ್ನು ಇದೇ 25ರಂದು ಮಾಡಲಿದ್ದೇನೆ. ನಂತರ ಎಲ್ಲ ಇಲಾಖೆಗಳ ಪ್ರಸ್ತಾವನೆಗಳು, ಸಂಘ-ಸಂಸ್ಥೆಗಳ ಬಗ್ಗೆ ಚರ್ಚೆ ಮಾಡಿ ಬಜೆಟ್ ಸಿದ್ಧಪಡಿಸಲಾಗುವುದು ಎಂದು ಅವರು ನುಡಿದರು.

ರಹಸ್ಯ ಸಭೆ ಬಗ್ಗೆ ನನಗೆ ಗೊತ್ತಿಲ್ಲ: `ಬೆಳಗಾವಿಯಲ್ಲಿ ಸಚಿವ ಉಮೇಶ್ ಕತ್ತಿ ಅವರ ಮನೆಯಲ್ಲಿ ರಹಸ್ಯ ಸಭೆ ಜರುಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, `ಈ ಬಗ್ಗೆ ನನಗೆ ಗೊತ್ತಿಲ್ಲ. ನಾಯಕರು ಬೇರೆ ಬೇರೆ ಸಂದರ್ಭದಲ್ಲಿ ಸೇರುತ್ತಾರೆ. ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಬಿಜೆಪಿಯವರೂ ಸಭೆ ಸೇರುತ್ತಾರೆ. ಅದಕ್ಕೆ ಮಾಧ್ಯಮಗಳು ನೀಡಿರುವ ವ್ಯಾಖ್ಯಾನ ಸರಿಯಿಲ್ಲ ಎಂದು ಆಕ್ಷೇಪಿಸಿದರು.

ಆರು ತಿಂಗಳ ಸಾಧನೆಗಳ ಪುಸ್ತಕ: `ಜ.28ಕ್ಕೆ ಸರಕಾರ ಆರು ತಿಂಗಳು ಪೂರೈಸುತ್ತಿದ್ದು, ಈವರೆಗಿನ ಹಾದಿ ನೆಮ್ಮದಿ ಹಾಗೂ ಯಶಸ್ಸು ತಂದಿದೆಯೇ? ಎಂಬ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿ, ಈ ಕುರಿತು ಪತ್ರಿಕಾಗೋಷ್ಠಿ ಕರೆದು ಉತ್ತರ ನೀಡಲಾಗುವುದು. ಆರು ತಿಂಗಳ ಸಾಧನೆಗಳನ್ನು ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು. 

ಕೋವಿಡ್ ಸ್ಥಿತಿಗತಿ: `ಕೋವಿಡ್ ಬಗ್ಗೆ ಈಗಾಗಲೇ ಹಲವು ನಿರ್ಣಯಗಳನ್ನು ಕೈಗೊಂಡಿದ್ದು, ವಾರಾಂತ್ಯದ ಕರ್ಫ್ಯೂ ಹಿಂಪಡೆಯಲಾಗಿದೆ. ರಾಜ್ಯದಲ್ಲಿ ಕೋವಿಡ್ ಯಾವ ರೀತಿ ಮುಂದುವರಿದಿದೆ, ಸೋಂಕಿತರ ಸ್ಥಿತಿಗತಿ ಏನು ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ. ಪರಿಸ್ಥಿತಿ ಅವಲೋಕಿಸಿ ಯಾವುದೇ ತೀರ್ಮಾನಕ್ಕೆ ಬರಲಾಗುವುದು. ನಾಲ್ಕು ದಿನಗಳಿಂದ ಉಡುಪಿ ಕಾಲೇಜಿನಲ್ಲಿ ಆಗುತ್ತಿರುವ ಬೆಳವಣಿಗೆಯ ಬಗ್ಗೆ ಶಿಕ್ಷಣ ಸಚಿವರು ಪರಿಶೀಲಿಸಲು ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News