ಜಿಲ್ಲಾ ಉಸ್ತುವಾರಿ ಬದಲಾವಣೆ: ಸಚಿವ ಆನಂದ್ ಸಿಂಗ್ ಅಭಿಮಾನಿಗಳ ಆಕ್ರೋಶ

Update: 2022-01-24 17:35 GMT

ಹೊಸಪೇಟೆ, ಜ. 24: `ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ಮಾಡಿ ಸಚಿವ ಆನಂದ್ ಸಿಂಗ್ ಅವರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಅಸಮಾಧಾನಗೊಂಡಿರುವ ಅವರ ಅಭಿಮಾನಿಗಳು ನಗರದಲ್ಲಿ ಟೈಯರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನಂದ್ ಸಿಂಗ್ ಅವರಿಗೆ ಈ ಹಿಂದೆ ನೀಡಿದ್ದ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ನೀಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಸಚಿವ ಆನಂದ್ ಸಿಂಗ್, ಅಭಿಮಾನಿಗಳ ಮನವೊಲಿಸಲು ಪ್ರಯತ್ನ ನಡೆಸಿದರು. ಅಲ್ಲದೆ, `ನೂತನ ಜಿಲ್ಲೆ ವಿಜಯನಗರ ಮಾತ್ರವಲ್ಲ, ರಾಜ್ಯವನ್ನು ಅಭಿವೃದ್ಧಿ ಮಾಡುತ್ತೇವೆ. ಪ್ರತಿಭಟನೆ ಕೈ ಬಿಡಿ' ಎಂದು ಮನವಿ ಮಾಡಿದರು.

ಆನಂದ್ ಸಿಂಗ್ ಅವರ ಬಳಿಯಿದ್ದ ಬಳ್ಳಾರಿ, ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆಯನ್ನು ಬದಲಾವಣೆ ಮಾಡಿ ಅವರಿಗೆ ಕೊಪ್ಪಳ ಜಿಲ್ಲೆ ಉಸ್ತುವಾರಿ ನೀಡಲಾಗಿದೆ. ಶಶಿಕಲಾ ಜೊಲ್ಲೆ ಅವರಿಗೆ ವಿಜಯನಗರ ಜಿಲ್ಲೆ ಉಸ್ತುವಾರಿ, ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಜಿಲ್ಲೆ ಉಸ್ತುವಾರಿ ನೀಡಿರುವುದು ಆನಂದ್ ಸಿಂಗ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News