ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ 13 ಕೋಟಿ ಪರಿಹಾರ ಬಿಡುಗಡೆ: ಹೈಕೋರ್ಟ್ ಗೆ ಮಾಹಿತಿ

Update: 2022-01-25 17:52 GMT

ಬೆಂಗಳೂರು, ಜ.25: ಸಂತ್ರಸ್ತರ ಪರಿಹಾರ ಯೋಜನೆ ಅಡಿ ಅತ್ಯಾಚಾರಕ್ಕೆ ಒಳಗಾದ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಿಲುಕಿದ ಸಂತ್ರಸ್ತರಿಗೆ ಪರಿಹಾರ ಮೊತ್ತ ಪಾವತಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ(ಕೆಎಸ್‍ಎಲ್‍ಎಸ್‍ಎ) 13 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ರಾಜ್ಯ ಸರಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

ಲೈಂಗಿಕ  ದೌರ್ಜನ್ಯಕ್ಕೆ ಸಿಲುಕಿದ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಸೂಕ್ತ ಮಾರ್ಗಸೂಚಿ ರಚಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಪೀಪಲ್ಸ್ ಮೂವ್‍ಮೆಂಟ್ ಅಗೇನಸ್ಟ್ ಸೆಕ್ಷ್ಯುಯಲ್ ಅಸಾಲ್ಟ್(ಪಿಎಂಎಎಸ್‍ಎ) ಎಂಬ ಮಹಿಳಾ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠಕ್ಕೆ ಸರಕಾರ ಈ ಮಾಹಿತಿ ನೀಡಿದೆ.

ವಿಚಾರಣೆ ವೇಳೆ ಸರಕಾರದ ಪರ ವಕೀಲ ರಾಜಶೇಖರ್ ವಾದ ಮಂಡಿಸಿ, ಸಂತ್ರಸ್ತರ ಪರಿಹಾರ ಯೋಜನೆ ಜಾರಿಗೆ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 20 ಕೋಟಿ ರೂ. ಬಿಡುಗಡೆ ಮಾಡಲು 2020ರ ಮಾ.19ರಂದು ಹೈಕೋರ್ಟ್ ಆದೇಶಿಸಿತ್ತು. ಅದರಂತೆ, ಈವರೆಗೂ ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಉಳಿದ 7 ಕೋಟಿ ರೂ. ಹಣವನ್ನು ಮನವಿ ಬಂದ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲರು, ಸರಕಾರ ಬಿಡುಗಡೆ ಮಾಡಿರುವ ಹಣದಲ್ಲಿ ಸಂತ್ರಸ್ತೆಯರಿಗೆ ಎಷ್ಟು ಪರಿಹಾರ ವಿತರಿಸಲಾಗಿದೆ ಎಂಬ ವಿವರ ಒಳಗೊಂಡ ಮೆಮೋ ಸಲ್ಲಿಸಲಾಗಿದೆ. ಅಲ್ಲದೇ, 15 ಕೋಟಿ ರೂ. ಹಣ ಬಿಡುಗಡೆ ಕೋರಿ ಜ.10ರಂದು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಬಾಕಿ 7 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಸರಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಸಂತ್ರಸ್ತ ಪರಿಹಾರ ಯೋಜನೆ ಅಡಿಯಲ್ಲಿ 2020-21ನೆ ಸಾಲಿನಲ್ಲಿ ಪರಿಹಾರ ವಿತರಿಸಲು ಕೆಎಸ್‍ಎಲ್‍ಎಸ್‍ಎಗೆ ಹಣ ಬಿಡುಗಡೆ ಮಾಡಿದ ಬಗ್ಗೆ ವರದಿ ಸಲ್ಲಿಸಬೇಕು. ತಪ್ಪಿದರೆ ಮುಂದಿನ ವಿಚಾರಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಿರಬೇಕು ಎಂದು ಹೈಕೋರ್ಟ್ ಜ.4ರಂದು ನಿರ್ದೇಶಿಸಿತ್ತು. ಅದರಂತೆ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಮಂಜುಳಾ ವಿಸಿ ಮೂಲಕ ವಿಚಾರಣೆಗೆ ಹಾಜರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News