ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ಆರೋಪ ಪ್ರಕರಣ: ನ್ಯಾಯಾಧೀಶರಿಂದ ವಿವರಣೆ ಕೇಳಿದ ಹೈಕೋರ್ಟ್

Update: 2022-01-27 16:26 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಜ.27: ರಾಯಚೂರಿನ ಜಿಲ್ಲಾ ಕೋರ್ಟ್ ಸಂಕೀರ್ಣದಲ್ಲಿ ಗಣರಾಜ್ಯೋತ್ಸವದ ದಿನ ಧ್ವಜಾರೋಹಣಕ್ಕೆ ಮುನ್ನ ಸ್ಥಳದಲ್ಲಿ ಇರಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ನ್ಯಾಯಾಧೀಶರು ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವರದಿ ಕೇಳಿದೆ.

ಈ ಕುರಿತು ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಶಿವಶಂಕರೇಗೌಡ ಅವರು ಮಾಹಿತಿ ನೀಡಿದ್ದು, ಘಟನೆ ಕುರಿತು ವಾಸ್ತವಿಕ ಸಂಗತಿಗಳನ್ನು ತಿಳಿಯಲು ವರದಿ ಕೇಳಲಾಗಿದೆ. ವರದಿ ಪರಿಶೀಲಿಸಿ ಹೈಕೋರ್ಟ್ ಕ್ರಮಕ್ಕೆ ಮುಂದಾಗಲಿದೆ ಎಂದು ತಿಳಿಸಿದ್ದಾರೆ.

ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನು ನ್ಯಾಯಾಂಗ ಇಲಾಖೆಯ ಕಾರ್ಯಕ್ರಮದಲ್ಲಿ ಇಡುವುದಕ್ಕೆ ಸಂಬಂಧಿಸಿದಂತೆ ಪೂರ್ಣ ಪೀಠವು ಹಿಂದೆಯೇ ಗೊತ್ತುವಳಿ ಅಂಗೀಕರಿಸಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ನ್ಯಾಯಾಂಗ ಇಲಾಖೆಯ ಕಾರ್ಯಕ್ರಮದಲ್ಲಿ ಇಡುವುದಕ್ಕೆ ಸಂಬಂಧಿಸಿದ ವಿಚಾರ ಪೂರ್ಣ ಪೀಠದ ಮುಂದೆ ಪರಿಗಣನೆಗೆ ಬಾಕಿ ಇದೆ ಎಂದು ತಿಳಿಸಿದ್ದಾರೆ. ಅಲ್ಲದೇ, ಸರಕಾರದ ಸುತ್ತೋಲೆಗಳನ್ನು ನ್ಯಾಯಾಂಗ ಅಳವಡಿಸಿಕೊಂಡ ಮೇಲೆ ಅದು ಇಲ್ಲಿಗೆ ಅನ್ವಯಿಸುತ್ತದೆ. ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಹೈಕೋರ್ಟ್ ಪೂರ್ಣಪೀಠವು ಈ ಪ್ರಕ್ರಿಯೆ ಕೈಗೊಳ್ಳುತ್ತದೆ. ಆ ಬಳಿಕ ಸಂಬಂಧಪಟ್ಟ ಎಲ್ಲರಿಗೂ ಸುತ್ತೋಲೆ ರವಾನಿಸಲಾಗುತ್ತದೆ ಎಂದು ರಿಜಿಸ್ಟ್ರಾರ್ ಜನರಲ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಡಾ.ಅಂಬೇಡ್ಕರ್‌ ಭಾವಚಿತ್ರಕ್ಕೆ ಅಗೌರವ ಆರೋಪದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಗಣರಾಜ್ಯೋತ್ಸವದ ದಿನ ಧ್ವಜಾರೋಹಣ ಸಮಾರಂಭದಲ್ಲಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇರಿಸಲಾಗಿತ್ತು. ಆದರೆ ರಾಯಚೂರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ್ ಭಾವಚಿತ್ರವನ್ನು ಧ್ವಜಾರೋಹಣ ಸ್ಥಳದಿಂದ ಎತ್ತಿಟ್ಟರು ಎಂಬ ಆರೋಪ ಕೇಳಿಬಂದಿತ್ತು. ಆ ಮೂಲಕ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದಿವೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News