ಉತ್ತರಪ್ರದೇಶ: ಕ್ಷುಲ್ಲಕ ಕಾರಣಕ್ಕೆ ಪತ್ರಕರ್ತನ ಥಳಿಸಿ ಹತ್ಯೆ

Update: 2022-01-27 18:06 GMT

ಶಹರಣಪುರ, ಜ. 27: ಶಹರಣಪುರದ ರಸ್ತೆಯಲ್ಲಿ ನಡೆದ ವಾಗ್ವಾದದ ಹಿನ್ನೆಲೆಯಲ್ಲಿ ಮೂವರು ದುಷ್ಕರ್ಮಿಗಳು ಪತ್ರಕರ್ತರೋರ್ವರನ್ನು ಥಳಿಸಿ ಹತ್ಯೆಗೈದಿದ್ದಾರೆ. ಘಟನೆಗೆ ಸಂಬಂಧಿಸಿ ಉತ್ತರಪ್ರದೇಶ ಪೊಲೀಸರು ಗುರುವಾರ ಇಬ್ಬರನ್ನು ಬಂಧಿಸಿದ್ದಾರೆ.

ಮೃತಪಟ್ಟ ಪತ್ರಕರ್ತನನ್ನು ಚಿಲ್ಕಾನದ ನಿವಾಸಿ ಸುಧೀರ್ ಸೈನಿ ಎಂದು ಗುರುತಿಸಲಾಗಿದೆ. ಅವರು ಸ್ಥಳೀಯ ಪತ್ರಿಕೆಯೊಂದರ ವರದಿಗಾರರಾಗಿದ್ದರು ಎಂದು ಶಹರಣಪುರ ಪೊಲೀಸ್ ಅಧೀಕ್ಷಕ ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಶಹರಣಪುರದಿಂದ ಬೈಕ್ ನಲ್ಲಿ ಆಗಮಿಸುತ್ತಿದ್ದ ಸುಧೀರ್ ಸೈನಿ ಅವರು ಆಲ್ಟೊ ಕಾರೊಂದನ್ನು ಓವರ್ ಟೇಕ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅದರಲ್ಲಿದ್ದ ಮೂವರು ಆಕ್ರೋಶಗೊಂಡು ಸೈನಿ ಅವರೊಂದಿಗೆ ಜಗಳ ಆಡಿದ್ದಾರೆ, ಅನಂತರ ಥಳಿಸಿದ್ದಾರೆ. ಇದರಿಂದ ಅವರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಅದಾಗಲೇ ಮೃತಪಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ.

ಘಟನೆ ನಡೆದ ಬಳಿಕ ಕಾರಿನಲ್ಲಿದ್ದ ಮೂವರೂ ಪರಾರಿಯಾಗಿದ್ದರು. ಆದರೆ, ನಾವು ಇಬ್ಬರನ್ನು ಬಂಧಿಸಿದ್ದೇವೆ. ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಶಹರಣಪುರದ ಸಿಕ್ರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸಂಬಂಧಿಸಿದ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News