×
Ad

ಅಂಗನವಾಡಿ ಮಂಜೂರು ಬಗ್ಗೆ ಮಾಹಿತಿ ನೀಡಿ: ಕೇಂದ್ರ ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2022-01-29 20:19 IST

ಬೆಂಗಳೂರು, ಜ.29: ಕರ್ನಾಟಕ ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮೂರು ವಾರಗಳಲ್ಲಿ ಮಾಹಿತಿ ನೀಡುವಂತೆ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ರಾಜ್ಯದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದಂತೆ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನಿಡಿದೆ. 

ಈ ವೇಳೆ, ಕೇಂದ್ರ ಸರಕಾರದ ಪರ ವಕೀಲರು ವಾದಿಸಿ, ರಾಜ್ಯಕ್ಕೆ ಹೆಚ್ಚುವರಿ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವಾಲಯದಿಂದ ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಹೀಗಾಗಿ, ಕಾಲಾವಕಾಶ ನೀಡಬೇಕು ಎಂದು ಪೀಠಕ್ಕೆ ತಿಳಿಸಿದರು. ಕೋರಿಕೆ ಪರಿಗಣಿಸಿ ಹೈಕೋರ್ಟ್ ಮೂರು ವಾರಗಳ ಕಾಲಾವಕಾಶ ನೀಡಿತು.

ಅಲ್ಲದೇ, ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಮಧ್ಯಂತರ ಶಿಫಾರಸುಗಳನ್ನು ಜಾರಿಗೆ ತಂದಿರುವ ಬಗ್ಗೆ ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಫೆ.18ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News