ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Update: 2022-02-17 17:52 GMT
 ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಫೆ. 17: ‘ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದ ಚಿತ್ರದುರ್ಗ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ' ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಗುರುವಾರ ಈ ಕುರಿತು ಮಾಹಿತಿ ನೀಡಿದ ಅವರು, ‘ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ 100 ಎಂಬಿಬಿಎಸ್ ಸೀಟುಗಳ ಕಾಲೇಜು ಆರಂಭವಾಗಲಿದ್ದು, ನೂತನ ಕಟ್ಟಡ ನಿರ್ಮಾಣ ಭರದಿಂದ ಸಾಗಿದೆ. ಈ ನಡುವೆಯೇ, ಚಿತ್ರದುರ್ಗದಲ್ಲಿ 150 ಎಂಬಿಬಿಎಸ್ ಸೀಟುಗಳನ್ನು ಹೊಂದಲಿರುವ ‘ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ' ನಿರ್ಮಾಣಕ್ಕೆ ಸರಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಿವಿಲ್ ಕಾಮಗಾರಿ ಸೇರಿ ಒಟ್ಟು 500 ಕೋಟಿ ರೂ.ಖರ್ಚಾಗಲಿದೆ ಎಂದು ಹೇಳಿದ್ದಾರೆ.

‘ಜನಸಂಖ್ಯೆಗೆ ಅನುಗುಣವಾಗಿ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಸರಕಾರ ಮುಂದಾಗಿದೆ. ರಾಜ್ಯದಲ್ಲಿರುವ 17 ಸರಕಾರಿ ವೈದ್ಯಕೀಯ ಕಾಲೇಜುಗಳ ಜೊತೆ ಹೊಸದಾಗಿ 4 ಸಂಸ್ಥೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ 100 ಎಂಬಿಬಿಎಸ್ ಸೀಟುಗಳ ಪ್ರವೇಶ ಮಿತಿಯೊಂದಿಗೆ 2022-23ನೆ ಸಾಲಿಗೆ ಲೆಟರ್ ಆಫ್ ಇಂಟೆಂಟ್ ನೀಡಲಾಗಿದೆ. ಇದರ ಜೊತೆಗೆ ಈಗ ಚಿತ್ರದುರ್ಗದಲ್ಲೂ ಕಾಲೇಜು ಕಟ್ಟಡದ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಈ ಮೂಲಕ ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯರಾಗುವ ಕನಸು ನನಸಾಗಲಿದೆ. ಅಲ್ಲದೆ, ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡ ಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲಿದೆ' ಎಂದು ತಿಳಿಸಿದ್ದಾರೆ.

‘ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳ ಪ್ರಕಾರ ಪ್ರತಿ 1ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕು. ಆದರೆ, ಕರ್ನಾಟಕದಲ್ಲಿ 1,800 ಜನಸಂಖ್ಯೆಗೆ ಒಬ್ಬ ವೈದ್ಯರ ಲಭ್ಯತೆ ಇದೆ. ಈ ಅಸಮತೋಲನ ಸರಿಪಡಿಸಲು ಹಾಗೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಸರಕಾರ ಕ್ರಮಗಳನ್ನು ಕೈಗೊಂಡಿದೆ. ಇದೆ ಪ್ರಯತ್ನದ ಭಾಗವಾಗಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು' ಎಂದು ಅವರು ಹೇಳಿದ್ದಾರೆ.

‘2014-15ನೆ ಸಾಲಿನ ಆಯವ್ಯಯದಲ್ಲಿನ ಘೋಷಣೆಯಂತೆ ಚಿತ್ರದುರ್ಗದಲ್ಲಿ 150 ಸೀಟುಗಳ ಎಂಬಿಬಿಎಸ್ ಕಾಲೇಜನ್ನು 2015-16ರಲ್ಲೆ ಸ್ಥಾಪಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿತ್ತು. ಆದರೆ, 2013-14ರ ಆರ್ಥಿಕ ವರ್ಷದಲ್ಲಿ ಕಲಬುರ್ಗಿ, ಗದಗ, ಕೊಪ್ಪಳ, ಕಾರವಾರ, ಕೊಡಗು ಮತ್ತು ಚಾಮರಾಜನಗರದಲ್ಲಿ ಹೊಸ 6 ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಹೊಂದಿಸಿಕೊಳ್ಳಬೇಕಾಗಿದ್ದರಿಂದ ತುಮಕೂರು, ಚಿತ್ರದುರ್ಗ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮುಂದೂಡಲಾಗಿತ್ತು. 2021-22ರÀ ಬಜೆಟ್‍ನಲ್ಲಿ, ಚಿತ್ರದುರ್ಗ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು ಎಂದು ಅವರು ವಿವರಿಸಿದ್ದಾರೆ.

‘ಚಿತ್ರದುರ್ಗದ ವೈದ್ಯಕೀಯ ಕಾಲೇಜನ್ನು 2023-24ನೆ ಸಾಲಿನಿಂದ ಆರಂಭಿಸಲು ಅಗತ್ಯ ಪ್ರಕ್ರಿಯೆಗಳನ್ನು ನಡೆಸಬೇಕೆಂದು ರಾಜ್ಯ ಸರಕಾರ ಸೂಚಿಸಿದೆ. ಇದಕ್ಕೆ ಪೂರಕವಾಗಿ ಸಿದ್ಧತೆ ನಡೆಸಲಾಗುತ್ತದೆ. ಪ್ರಧಾನಿ ಮೋದಿ ಸರಕಾರ ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆ ತರುತ್ತಿದ್ದು, ಈ ಹೊಸ ಕಾಲೇಜು ನಿರ್ಮಾಣ ಸುಧಾರಣೆಯ ಭಾಗವಾಗಿದೆ' ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News