ಫೆ.24ರಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ರ 73ನೇ ಹುಟ್ಟುಹಬ್ಬದ ಸಂಭ್ರಮ

Update: 2022-02-19 11:37 GMT

ಮಂಗಳೂರು, ಫೆ.19: ಫೆಬ್ರವರಿ 24ರಂದು 'ಸಹಕಾರ ರತ್ನ' ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಅವರ 73ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ನಡೆಯಲಿದೆ ಎಂದು ಅಭಿವಂದನಾ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದ ಕೊಡುಗೆ ನೀಡುತ್ತಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎಸ್‍ ಸಿಡಿಸಿಸಿ ಬ್ಯಾಂಕ್) ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ರೀತಿಯ ಸಾರ್ಥಕತೆ ಕಂಡುಕೊಂಡ ಬ್ಯಾಂಕ್‍ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಸಿದವರು. ಅವಿಭಜಿತ ದ.ಕ. ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ ಮಟ್ಟದಲ್ಲೂ ಗುರುತಿಸಿಕೊಂಡಿರುವ 'ಸಹಕಾರ ರತ್ನ' ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರ 73ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ನಡೆಸಲು ಜಿಲ್ಲೆಯ ಸಮಸ್ತ ಸಹಕಾರಿಗಳು ತೀರ್ಮಾನಿಸಿದ್ದೇವೆ. ಅದರಂತೆ ಫೆ.24ರಂದು  ಪೂರ್ವಾಹ್ನ 10:30ಕ್ಕೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ರಾಜೇಂದ್ರ ಕುಮಾರ್ ರ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ವಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಸಮಾರಂಭ ನಡೆಯಲಿದೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

*ಡಾ.ಎಂ.ಎನ್.ಆರ್. ಆದರ್ಶ ನಾಯಕ:

ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಆವಿಭಜಿತ ದ.ಕ. ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯ ಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಅವರ ಹು ಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 73 ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವು ಈ ಸಂದರ್ಭದಲ್ಲಿ ಆಯೋಜನೆಯಾಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ, ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು. ಇದೇವೇಳೆ  ರಾಜೇಂದ್ರ ಕುಮಾರ್ ರನ್ನು ಅಭಿನಂದಿಸಲಾಗುವುದು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್‍.ಯಡಪಡಿತ್ತಾಯ ಅಭಿನಂದಿಸಲಿದ್ದಾರೆ. ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅಭಿವಂದನಾ ಭಾಷಣ ಮಾಡುವರು.

ಸವಲತ್ತುಗಳ ವಿತರಣೆಯನ್ನು ಉದ್ಯಮಿ ನಾಡೋಜ ಜಿ.ಶಂಕರ್, ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮುಂಬೈ ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ಅದಾನಿ ಫೌಂಡೇಶನ್ ನ ದಕ್ಷಿಣ ಭಾರತ ಅಧ್ಯಕ್ಷ ಕಿಶೋರ್ ಆಳ್ವ ನೆರವೇರಿಸಲಿರುವರು. ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್‌ಗಳ ಅಧ್ಯಕ್ಷರುಗಳಾದ  ಜಯಕರ ಶೆಟ್ಟಿ ಇಂದ್ರಾಳಿ, ಬಿ. ಪ್ರಸಾದ್ ಕೌಶಲ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಭಿನಂದನಾ ಸಮಿತಿಯ ಕಾರ್ಯದರ್ಶಿ ಭಾಸ್ಕರ್ ಎಸ್. ಕೋಟ್ಯಾನ್, ಸದಸ್ಯರಾದ ವಿನಯಕುಮಾರ್ ಸೂರಿಂಜೆ, ಶಶಿಕುಮಾರ್ ಬೊಲ್ಯೋಟ್ಟು, ಜಯರಾಮ ರೈ, ವಾದಿರಾಜ ಶೆಟ್ಟಿ, ಸದಾಶಿವ ಉಳ್ಳಾಲ, ರಾಜು ಪೂಜಾರಿ, ಅಶೋಕ್ ಕುಮಾರ್, ಹರಿಶ್ಚಂದ್ರ, ರಾಜೇಶ್ ರಾವ್, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News