144 ಸೆಕ್ಷನ್ ಜಾರಿಯಾಗಿದ್ದರೂ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಭಾಗವಹಿಸಿದ್ದರು: ಸಿದ್ದರಾಮಯ್ಯ
ಬೆಂಗಳೂರು: ಕಳೆದ ಮೂರು ದಿನಗಳಲ್ಲಿ ಶಿವಮೊಗ್ಗದಲ್ಲಿ 3 ಕೊಲೆಗಳು ನಡೆದಿವೆ. ಶಿವಮೊಗ್ಗ ಗೃಹ ಸಚಿವರ ತವರು ಜಿಲ್ಲೆ, ಅಲ್ಲೇ ಈ ರೀತಿ ಕೊಲೆಗಳು ನಿರಂತರವಾಗಿ ನಡೆಯುತ್ತವೆ ಎಂದರೆ ಹೇಗೆ? ಹಿಂದಿನ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು, ಅಂದರೆ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಹರ್ಷ ಅವರ ಕೊಲೆಯಾದದ್ದು ರವಿವಾರ. ಆ ದಿನದ ರಾತ್ರಿಯಿಂದಲೇ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಿದೆ. ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ, ಸರ್ಕಾರದ ಸಚಿವರ ಎದುರೇ ಕಲ್ಲುತೂರಾಟ ನಡೆದಿದೆ, ಅಂಗಡಿ, ವಾಹನಗಳಿಗೆ ಬೆಂಕಿ ಹಾಕಲಾಗಿದೆ, ಜನ ಗುಂಪು ಗುಂಪಾಗಿ ಕತ್ತಿ, ತಲ್ವಾರ್ ಹಿಡಿದು ಓಡಾಡ್ತಾರೆ, ಈ ಮೆರವಣಿಗೆಯಲ್ಲಿ ಈಶ್ವರಪ್ಪ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರೀಕ ಸರ್ಕಾರವ? ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಸಚಿವ ಈಶ್ವರಪ್ಪ ಅವರೇ ಹೊಣೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ವಿರುದ್ಧ ಸಾಕ್ಷಗಳು ಇದ್ದರೆ ಕೂಡಲೇ ಆ ಸಂಘಟನೆಗಳನ್ನು ನಿಷೇಧ ಮಾಡಲು. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು? ಎಂದು ಪ್ರಶ್ನಿಸಿದ್ದರು.
ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಬೇರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ನಡೆಸಲಿ. ನನ್ನ ತಕರಾರು ಇಲ್ಲ. ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ, ಕಲ್ಲು ತೂರಾಟ ನಡೆದಿದೆ. ಈ ಎಲ್ಲಾ ಕಾರಣಗಳಿಗಾಗಿ ಒಟ್ಟು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿರು.
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದು ಹೇಳಿದರು.