ಬಜೆಟ್ ಅಧಿವೇಶನ ಹಿನ್ನೆಲೆ: ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ

Update: 2022-02-28 15:46 GMT
ವಿಧಾನಸೌಧ 

ಬೆಂಗಳೂರು, ಫೆ.28: ವಿಧಾನಮಂಡಲದ ಬಜೆಟ್ ಅಧಿವೇಶನ ಮಾ.4ರಿಂದ ವಿಧಾನಸೌಧದಲ್ಲಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನದ ದಿನಗಳಂದು ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಮಾ.4ರಿಂದ ಮಾ.30ರವರೆಗೂ ಅಧಿವೇಶನ ನಡೆಯಲಿದ್ದು, ಈ ದಿನಗಳಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ವೇಳೆ ಕಾನೂನುಭಂಗ  ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ, ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಶಸ್ತ್ರಾಸ್ತ್ರ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದು, ಯಾವುದೇ ಸ್ಫೋಟಕ ಸಿಡಿಸುವುದು, ಒಯ್ಯುವುದನ್ನು ನಿಷೇಧಿಸಲಾಗಿದೆ. 

ಯಾವುದೇ ರೀತಿಯ ಪ್ರದರ್ಶನ, ವ್ಯಕ್ತಿಗಳು ಅಥವಾ ಅವರ ಶವಗಳ ಪ್ರತಿಕೃತಿ ಪ್ರದರ್ಶನ, ಪ್ರಚೋದನಾಕಾರಿ ಬಹಿರಂಗ ಘೋಷಣೆ, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರ, ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರ ಯಾವುದೇ ವಸ್ತುಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಕಮಲ್ ಪಂತ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News