ಗೋರಖ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಮುನ್ನಡೆ
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಗೋರಖ್ಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದಿತ್ಯನಾಥ್, ಸಮಾಜವಾದಿ ಪಕ್ಷದ ಅಭ್ಯರ್ಥಿ ಸುಭಾವತಿ ಉಪೇಂದ್ರ ದತ್ ಶುಕ್ಲಾ ವಿರುದ್ಧ 8,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ANI ವರದಿ ಮಾಡಿದೆ.
ಇಂದು (ಗುರುವಾರ) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಅಧಿಕೃತ ಅಂಕಿಅಂಶಗಳ ಪ್ರಕಾರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 241 ಸ್ಥಾನಗಳಲ್ಲಿ ಮುನ್ನಡೆಯನ್ನು ಈಗಾಗಲೇ ಸಾಧಿಸಿದೆ.
ಆದಿತ್ಯನಾಥ್ ಅವರು 2017 ರಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿ, ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವವರೆಗೂ ಗೋರಖ್ಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಗೋರಖ್ಪುರದ ವಿಧಾನಸಭಾ ಸದರ್ ಕ್ಷೇತ್ರವು ಬಿಜೆಪಿಯ ಭದ್ರಕೋಟೆಯಾಗಿದ್ದು, 1967 ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಅಥವಾ ಅಂದಿನ ಜನಸಂಘ ಸೋತಿರಲಿಲ್ಲ.
ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷವು ಆದಿತ್ಯನಾಥ್ ವಿರುದ್ಧ ಬಿಜೆಪಿ ನಾಯಕ ದಿವಂಗತ ಉಪೇಂದ್ರ ದತ್ ಶುಕ್ಲಾ ಅವರ ಪತ್ನಿ ಸುಭಾವತಿ ಶುಕ್ಲಾ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಚೇತನಾ ಪಾಂಡೆ ಅವರನ್ನು ಕಣಕ್ಕಿಳಿಸಿದ್ದು, ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮೊದಲ ಬಾರಿಗೆ ಖ್ವಾಜಾ ಶಂಶುದ್ದೀನ್ ಅವರನ್ನು ಕಣಕ್ಕೆ ಇಳಿಸಿದೆ. ದಲಿತ ಹೋರಾಟಗಾರ, ಭೀಮ್ ಆರ್ಮಿ ನಾಯಕ ಹಾಗೂ ಆಜಾದ್ ಸಮಾಜ ಪಕ್ಷದ ಚಂದ್ರಶೇಖರ್ ಆಜಾದ್ 'ರಾವಣ', ಈ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.