×
Ad

ಕೆಪಿಎಸ್ಸಿಯ ವ್ಯಕ್ತಿತ್ವ ಪರೀಕ್ಷೆ ಅಂಕ ಕಡಿತ ಸಂವಿಧಾನ ಬಾಹಿರ: ಸಿದ್ದರಾಮಯ್ಯ

Update: 2022-03-11 19:10 IST

ಬೆಂಗಳೂರು, ಮಾ.11: ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್ಸಿ)ಯಿಂದ ನಡೆಯುವ ವ್ಯಕ್ತಿತ್ವ ಪರೀಕ್ಷೆಗೆ ನಿಗದಿಪಡಿಸಿರುವ ಅಂಕಗಳನ್ನು ಕಡಿತಗೊಳಿಸುವ ಕುರಿತು ಸರಕಾರ ಸಂವಿಧಾನ ಬಾಹಿರವಾದ ತೀರ್ಮಾನವನ್ನು ತೆಗೆದುಕೊಂಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ನಿರ್ಧಾರವನ್ನು ಹಿಂಪಡೆದು, ಯುಪಿಎಸ್ಸಿಯ ಮಾದರಿಯಲ್ಲಿ ಲಿಖಿತ ಪರೀಕ್ಷೆಯ ಒಟ್ಟು ಅಂಕಗಳ ಶೇ.12.5ರಷ್ಟನ್ನು ನಿಗದಿಪಡಿಸಿ ವ್ಯಕ್ತಿತ್ವ ಪರೀಕ್ಷೆಯನ್ನು ನಡೆಸುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಹಾಗೂ ಈಗ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಅವರು ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಅಂಕ ಕಡಿತ ಕುರಿತಂತೆ ಹಲವರು ಸರಕಾರಕ್ಕೆ ಪತ್ರ ಬರೆದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಆದರೂ ಸಹ ಸರಕಾರ ತನ್ನ ನಿರ್ಧಾರಗಳನ್ನು ಇನ್ನೂ ಸಹ ಬದಲಿಸಿಲ್ಲ. ಲೋಕಸೇವಾ ಆಯೋಗವು ಆಯ್ಕೆ ಮಾಡುವÀ ‘ಎ’ ಮತ್ತು ‘ಬಿ’ ಶ್ರೇಣಿಯ ಅಧಿಕಾರಿಗಳಿಗೆ ವ್ಯಕ್ತಿತ್ವ ಪರೀಕ್ಷೆ ಮಾಡುವಾಗ ಅಂಕಗಳನ್ನು ಲಿಖಿತ ಪರೀಕ್ಷೆ ಅಂಕಗಳ ಶೇ.2ರಷ್ಟಕ್ಕೆ ಇಳಿಸಿದೆ. ಸರಕಾರ ತೆಗೆದುಕೊಂಡಿರುವ ಈ ನಿರ್ಧಾರವು ಕರ್ನಾಟಕದ ಪಾಲಿಗೆ ಅತ್ಯಂತ ಅನಾಹುತಕಾರಿಯಾಗಿದೆ. ದೇಶದ ಹಲವು ರಾಜ್ಯಗಳು 100 ರಿಂದ 275 ಅಂಕಗಳನ್ನು ವ್ಯಕ್ತಿತ್ವ ಪರೀಕ್ಷೆಗಾಗಿ ನಿಗದಿಪಡಿಸಿಕೊಂಡಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 

ಜಗತ್ತಿನಲ್ಲಿ ಗುಣ ಮಟ್ಟದ ಆಯ್ಕೆಯ ವಿಚಾರದಲ್ಲಿ ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡಿರುವ ಕೇಂದ್ರ ಲೋಕಸೇವಾ ಆಯೋಗವು 1750 ಅಂಕಗಳಿಗೆ ಲಿಖಿತ ಪರೀಕ್ಷೆಗೆ ಹಾಗೂ 275 ಅಂಕಗಳನ್ನು ವ್ಯಕ್ತಿತ್ವ ಪರೀಕ್ಷೆಗೆ ಅಳವಡಿಸಿಕೊಂಡಿದೆ. ವ್ಯಕ್ತಿತ್ವ ಪರೀಕ್ಷೆಗಳಿಗಾಗಿ ಹಲವು ರಾಜ್ಯಗಳು ಭಿನ್ನ ಭಿನ್ನ ಮಾದರಿಗಳನ್ನು ಅಳವಡಿಸಿಕೊಂಡಿವೆ. ಉದಾಹರಣೆಗೆ ಅಸ್ಸಾಂನಲ್ಲಿ-275, ಪಶ್ಚಿಮ ಬಂಗಾಳ-200, ಬಿಹಾರ-120, ಉತ್ತರಾಖಂಡ್-200, ಉತ್ತರಪ್ರದೇಶ-100, ಗುಜರಾತ್-100, ಮಹಾರಾಷ್ಟ್ರ-100, ಮಧ್ಯಪ್ರದೇಶ-175, ಪಂಜಾಬ್-150 ಮತ್ತು ತಮಿಳುನಾಡು ರಾಜ್ಯವು 100 ಅಂಕಗಳನ್ನು ನಿಗದಿಪಡಿಸಿಕೊಂಡಿದೆ. ಯುಪಿಎಸ್ಸಿಯಲ್ಲಿ ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಯ ನಡುವಿನ ಅನುಪಾತ ಶೇ.15.71 ರಷ್ಟಿದೆ. ನಮ್ಮ ರಾಜ್ಯದಲ್ಲಿ 200 ಅಂಕಗಳಿಗೆ ವ್ಯಕ್ತಿತ್ವ ಪರೀಕ್ಷೆ ಇರುತ್ತಿತ್ತು. ಆನಂತರ 2020ರ ಜೂ.4ರಲ್ಲಿ 200 ಅಂಕಗಳ ಬದಲಿಗೆ 50 ಅಂಕಗಳಿಗೆ ಕಡಿತಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ.

2020ಕ್ಕಿಂತ ಮೊದಲು 1750 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 200 ಅಂಕಗಳಿಗೆ ವ್ಯಕ್ತಿತ್ವ ಪರೀಕ್ಷೆ ಇರುತ್ತಿತ್ತು. ಈಗ 2022ರ ಫೆ.18ರಂದು ಕೆಪಿಎಸ್ಸಿಯ ಜೊತೆ ಸಮಾಲೋಚಿಸದೆ ಏಕಾಏಕಿಯಾಗಿ ಸರ್ವಾಧಿಕಾರಿ ಪ್ರವೃತ್ತಿಯಿಂದ ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು 25ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಗಳ ಅಂಕಗಳ ನಡುವಿನ ಅನುಪಾತ ಶೇ.2 ಕ್ಕೆ ಇಳಿಸಿದಂತಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 

ಸಾಂವಿಧಾನಿಕ ಸಂಸ್ಥೆಗಳಾದ ಲೋಕಸೇವಾ ಆಯೋಗಗಳು ಭಾರತದ ಸಂವಿಧಾನದ ಅನುಚ್ಛೇದ-315 ರಡಿ ರಚಿತವಾಗಿವೆ. ಅನುಚ್ಛೇದ-320 ರಡಿ ಆಯೋಗಗಳು ಕಾರ್ಯನಿರ್ವಹಣೆ ಮಾಡುತ್ತವೆ. ಸರಕಾರಗಳು ನೇಮಕಾತಿ ಇತ್ಯಾದಿಗಳ ಕುರಿತು ನಿಯಮಗಳನ್ನು ರಚಿಸುವ ಅಧಿಕಾರವನ್ನು ಹೊಂದಿವೆಯಾದರೂ ಲೋಕಸೇವಾ ಆಯೋಗದ ಜೊತೆ ಸಮಾಲೋಚನೆ ನಡೆಸಿಯೇ ನಿಯಮಗಳನ್ನು ರೂಪಿಸುವುದು ಸಾಂವಿಧಾನಿಕ ಸಂಸ್ಥೆಗಳಿಗೆ ನೀಡುವ ಗೌರವವಾಗಿರುತ್ತದೆ. ಆದರೆ ಬಿಜೆಪಿ ಸರಕಾರಗಳು ಅಧಿಕಾರಕ್ಕೆ ಬಂದ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನು ನಿರಂತರವಾಗಿ ದಮನ ಮಾಡುತ್ತಿವೆ ಎಂಬ ಆರೋಪವನ್ನು ಇನ್ನಷ್ಟು ಗಟ್ಟಿಗೊಳಿಸಲೆಂಬಂತೆ ಕೆಪಿಎಸ್ಸಿಯ ವಿಚಾರದಲ್ಲೂ ರಾಜ್ಯ ಸರಕಾರ ನಡೆದುಕೊಳ್ಳುತ್ತಿದೆ ಎಂದು ಅವರು ದೂರಿದ್ದಾರೆ.

ಕೆಪಿಎಸ್ಸಿಯ ಮೂಲಕ ಆಯ್ಕೆಯಾಗುವ ಅಧಿಕಾರಿಗಳು ಕನಿಷ್ಠ 30 ವರ್ಷಗಳ ಕಾಲ ರಾಜ್ಯದ ತಾಲೂಕು, ಉಪ ವಿಭಾಗ, ಜಿಲ್ಲೆ ಹಾಗೂ ರಾಜ್ಯಮಟ್ಟದ ಅಧಿಕಾರಿಗಳಾಗಿ ಕೆಲಸ ಮಾಡುತ್ತಾರೆ. ಗ್ರಾಮೀಣ, ಅರೆ ಗ್ರಾಮೀಣ, ಪಟ್ಟಣ, ನಗರ ಪ್ರದೇಶಗಳಲ್ಲಿನ ರೈತರು, ಪಶು ಪಾಲಕರು, ಬಡವರು, ಹಿಂದುಳಿದವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಕುಶಲಕರ್ಮಿಗಳು, ಕಾರ್ಮಿಕರು ಹೀಗೆ ವಿವಿಧ ಸಾಮಾಜಿಕ ಗುಂಪುಗಳ ಜೊತೆ ಅವರು ಮಾತೃ ಹೃದಯದಿಂದ ನಡೆದುಕೊಳ್ಳಬೇಕಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿವಿಧ ಸಾಮಾಜಿಕ, ಧಾರ್ಮಿಕ, ಭಾಷಿಕ ಗುಂಪುಗಳ ಹಿನ್ನೆಲೆಯ ಅರಿವು ಇರಬೇಕಾಗುತ್ತದೆ. ಅರಿವು ಮತ್ತು ತಿಳಿವಳಿಕೆಗಳು ಇರಬೇಕಾಗುತ್ತದೆ. ಈ ರೀತಿಯ ವ್ಯಕ್ತಿತ್ವ ಪುಸ್ತಕಗಳಿಂದ ಬರುವಂಥದ್ದಲ್ಲ. ವಿವಿಧ ಸಾಮಾಜಿಕ ಗುಂಪುಗಳ ಕುರಿತು ಹೆಚ್ಚು ತಿಳಿವಳಿಕೆ ಮತ್ತು ಕರುಣೆ ಇರಬೇಕಾಗುತ್ತದೆ. ಅಭ್ಯರ್ಥಿಗಳು ಹೆಚ್ಚು ಅಂಕಗಳನ್ನು ಗಳಿಸುವುದರ ಕುರಿತು ನಮಗೆಲ್ಲರಿಗೂ ಗೌರವವಿದೆ. ಅದರ ಜೊತೆಯಲ್ಲಿಯೇ ಒಂದು ತಾಲೂಕನ್ನು, ಉಪ ವಿಭಾಗ, ಜಿಲ್ಲೆ ಹಾಗೂ ರಾಜ್ಯವನ್ನು ಮುನ್ನಡೆಸಬೇಕಾದ ನಾಯಕತ್ವದ ಗುಣವು ಸಹ ಅಧಿಕಾರಿಯಾಗುವವರಿಗೆ ಇರಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ರೀತಿಯ ಗುಣ ಇದೆಯೇ ಇಲ್ಲವೇ ಎಂಬುದು ಲಿಖಿತ ಪರೀಕ್ಷೆಯ ಮೂಲಕ ಗಳಿಸುವ ಅಂಕಗಳಿಂದ ಮಾತ್ರ ನಿರ್ಧಾರವಾಗುವುದಿಲ್ಲ. ಕರುಣೆ, ಸಾಮಾನ್ಯ ಜ್ಞಾನ, ನಾಯಕತ್ವದ ಗುಣ ಮುಂತಾದ ಸ್ವಭಾವಗಳು ಕಾಯಾರ್ಂಗದ ಪ್ರಮುಖ ಭಾಗವಾಗುವ ‘ಎ’ ಮತ್ತು ‘ಬಿ’ ಶ್ರೇಣಿಯ ಅಧಿಕಾರಿಯಾಗುವವರಿಗೆ ಇದೆಯೊ ಇಲ್ಲವೊ ಎಂಬುದನ್ನು ವ್ಯಕ್ತಿತ್ವ ಪರೀಕ್ಷೆಯ ಮೂಲಕ ನಿರ್ಧರಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆಡಳಿತ ನಡೆಸುವಾಗ ಪದೇ ಪದೇ ಉಂಟಾಗುವ ಹಲವು ರೀತಿಯ ಬಿಕ್ಕಟ್ಟುಗಳನ್ನು ಸಂದರ್ಭಗಳ ಸೂಕ್ಷ್ಮತೆ ಮತ್ತು ಹಿನ್ನೆಲೆಗಳನ್ನು ಅರಿತು ಅವುಗಳನ್ನು ನಿಭಾಯಿಸಬೇಕಾಗುತ್ತದೆ. ಈ ಕಾರಣಕ್ಕಾಗಿಯೇ ಕೇಂದ್ರ ಲೋಕ ಸೇವಾ ಆಯೋಗವು ಇಂದಿಗೂ ಕೂಡಾ 275 ಅಂಕಗಳಿಗೆ ವ್ಯಕ್ತಿತ್ವ ಪರೀಕ್ಷೆ ನಡೆಸುತ್ತದೆ. M/s Ashok Kumar yadav and others V/s State of Hariyana and others Reported in 1987 AIR 454 (SC) ನೀಡಿದ ತೀರ್ಪಿನಂತೆ ಲಿಖಿತ ಪರೀಕ್ಷೆಗೂ, ವ್ಯಕ್ತಿತ್ವ ಪರೀಕ್ಷೆಯ ಅಂಕಗಳ ನಡುವಿನ ಅನುಪಾತ ಕನಿಷ್ಠ ಶೇ.12.2 ರಷ್ಟು ಇರಬೇಕು ಎಂದು ಸರ್ವೋಚ್ಚ ನ್ಯಾಯಾಲಯವು 1985ರ ಮೇ 10ರಲ್ಲಿ ತೀರ್ಪು ನೀಡಿದೆ. ಆದರೆ ಕರ್ನಾಟಕದಲ್ಲಿ ಈಗ ಈ ಅನುಪಾತವನ್ನು ಶೇ.2 ಕ್ಕೆ ಇಳಿಸಲಾಗಿದೆ ಎಂದು ಅವರು ಟೀಕಿಸಿದ್ದಾರೆ. 

ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಲೋಪ ದೋಷಗಳಿಲ್ಲವೆಂದಲ್ಲ, ವ್ಯಕ್ತಿತ್ವ ಪರೀಕ್ಷೆ ಅಥವಾ ಸಂದರ್ಶನಗಳಿಗೆ ನಿಗದಿಪಡಿಸಿದ ಅಂಕಗಳಿಗೆ ಸಂಬಂಧಪಟ್ಟಂತೆ ಹಲವಾರು ಆರೋಪಗಳು ಇವೆ. ಹಾಗಾಗಿಯೇ ನಮ್ಮ ಸರಕಾರದ ಅವಧಿಯಲ್ಲಿ ಪಿ.ಸಿ.ಹೋಟಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ, ಪಾರದರ್ಶಕತೆಯನ್ನು ತರಲು ಪ್ರಯತ್ನಿಸಿದ್ದೆವು. ಪಿ.ಸಿ.ಹೋಟಾ ಸಮಿತಿಯ ಹಲವು ಶಿಫಾರಸ್ಸುಗಳನ್ನು ಅನುಷ್ಠಾನ ಮಾಡಿದ ನಂತರ ಭ್ರಷ್ಟಾಚಾರದ ಆರೋಪಗಳು ಬಹುತೇಕ ಕಡಿಮೆಯಾಗಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾಗಾಗಿ ಯುಪಿಎಸ್ಸಿಯ ಮಾದರಿಯಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಂಡು ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಸಂದರ್ಶನಗಳನ್ನು ನಡೆಸಬೇಕಾಗಿದೆಯೇ ಹೊರತು ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನೆ ಕಡಿಮೆ ಮಾಡಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಸರಕಾರದ ಈ ನಿರ್ಧಾರದಿಂದಾಗಿ ರಾಜ್ಯದ ಕಾಯಾರ್ಂಗಕ್ಕೆ ಮಾನವೀಯ ಮತ್ತು ಸಮರ್ಥ ಅಧಿಕಾರಿಗಳು ಇಲ್ಲದೇ ಹೋಗುತ್ತದೆ. ಇದರ ದುಷ್ಪರಿಣಾಮ ರಾಜ್ಯದ ಮುಂದಿನ ಭವಿಷ್ಯದ ಮೇಲೆ ಆಗುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News