×
Ad

ಮಾ.19: ಪುತ್ತೂರಿನಲ್ಲಿ `ಕೋಟಿ-ಚೆನ್ನಯ' ಜೋಡುಕರೆ ಕಂಬಳ

Update: 2022-03-14 14:07 IST

ಪುತ್ತೂರು: 29ನೇ ವರ್ಷದ ಹೊನಲು ಬೆಳಕಿನ `ಕೋಟಿ-ಚೆನ್ನಯ' ಜೋಡುಕರೆ ಕಂಬಳ ಮಾ. 19ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. 

ಅವರು ಸೋಮವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ ನಡೆಯಲಿದೆ. 

ಮಾ.19ರಂದು ಪೂರ್ವಾಹ್ನ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಕಂಬಳವನ್ನು ಉದ್ಘಾಟಿಸಲಿದ್ದಾರೆ. ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಲಿದ್ದಾರೆ. 

ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಹಿಸಲಿದ್ದಾರೆ. ಮಾಜಿ ಸಚಿವರಾದ ಶ್ಯಾಮನೂರು ಶಿವಶಂಕರಪ್ಪ, ಯು.ಟಿ.ಖಾದರ್, ಎಸ್.ಎಸ್. ಮಲ್ಲಿಕಾರ್ಜುನ, ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣ ಸೇರಿದಂತೆ ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶೇಷ ಆರ್ಕಷಣೆ

ಕಂಬಳದಲ್ಲಿ ವಿಶೇಷ ಆಕರ್ಷಣೆಯಾಗಿ ಚಲನ ಚಿತ್ರ ನಟರಾದ ಶಿವರಾಜ್ ಕುಮಾರ್, ವಿಜಯ ರಾಘವೇಂದ್ರ, ಮುರಳಿ, ವಿನೋದ್ ಆಳ್ವ, ನವೀನ್ ಡಿ ಪಡೀಲ್, ಗರುಡ ರಾಮ್, ವಿನಯ ಬಿಡ್ಡಪ್ಪ, ಪ್ರಸನ್ನ ಬಾಗೀನ, ಚಲನ ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ ಅಮೈ, ಕಂಬಳ ಕ್ಷೇತ್ರದ ಸಾಧಕರಾದ ಕೇಶವ ಬಂಡಾರಿ ಬೆಳ್ಳಿಪ್ಪಾಡಿ ಕೈಪ ಸೇರಿದಂತೆ ವಿವಿಧ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. 

ಮಾ.20ರಂದು ಪೂರ್ವಾಹ್ನ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಚಿವ ಸುನಿಲ್ ಕುಮಾರ್, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಂಬಳದಲ್ಲಿ ಸುಮಾರು 200 ಜೊತೆ ಕೋಣಗಳೂ ಭಾಗವಹಿಸುವ ನಿರೀಕ್ಷೆಯಿದೆ. ವಿಜೇತ ಕನಹಲಗೆ, ಹಗ್ಗ ಹಿರಿಯ ಮತ್ತು ನೇಗಿಲು ಹಿರಿಯ ಕೋಣಗಳಿಗೆ ಪ್ರಥಮ 2 ಪವನ್ ಚಿನ್ನ ದ್ವಿತೀಯ 1 ಪವನ್ ಚಿನ್ನ, ವಿಜೇತ ಅಡ್ಡ ಹಲಗೆ, ಹಗ್ಗ ಕಿರಿಯ ಮತ್ತು ನೇಗಿಲು ಹಿರಿಯ ಕೋಣಗಳಿಗೆ ಪ್ರಥಮ 1 ಪವನ್ ಚಿನ್ನ, ದ್ವಿತೀಯ ಅರ್ಧ ಪವನ್ ಚಿನ್ನ ಹಾಗೂ ಕೋಟಿ ಚೆನ್ನಯ ಟ್ರೋಫಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿ ಉಪಾಧ್ಯಕ್ಷರಾದ ನಿರಂಜನ ರೈ ಮಠಂತಬೆಟ್ಟು, ವಸಂತ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ ಮತ್ತು ಖಜಾಂಜಿ ಈಶ್ವರ ಭಟ್ ಪಂಜಿಗುಡ್ಡೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News