×
Ad

ಬೆಳ್ತಂಗಡಿ; ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

Update: 2022-03-23 17:47 IST

ಮಂಗಳೂರು : ನಾಲ್ಕು ವರ್ಷದ ಹಿಂದೆ ಬಾಲಕಿಯನ್ನು ಅತ್ಯಾಚಾರ ಎಸಗಿದ ಪ್ರಕರಣದ ಆರೋಪವು ದ.ಕ. ಜಿಲ್ಲಾ ಹೆಚ್ಚುವರಿ ಸೆಷನ್ಸ್  ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್ಳರಮಜಲು ಮನೆಯ ಪ್ರಸಾದ್ (31) ಶಿಕ್ಷೆಗೊಳಗಾದ ಅಪರಾಧಿ.

ಪ್ರಕರಣದ ವಿವರ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಪ್ರಸಾದ್‌ನ ಮನೆಗೆ ಆತನ ಸಂಬಂಧಿ ಆಗಿರುವ  17 ವರ್ಷ ಪ್ರಾಯದ ಬಾಲಕಿಯು ಕೆಲಸಕ್ಕಾಗಿ ಆಗಾಗ  ಬರುತ್ತಿದ್ದಳು. 2018ರ ಜುಲೈ 28ರಂದು ಆಕೆ ತನ್ನ ಮನೆಗೆ ಬಂದಾಗ ಆರೋಪಿಯು ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ. ಬಳಿಕ ಪದೇ ಪದೇ ಅತ್ಯಾಚಾರಗೈದಿದ್ದ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದನು ಎಂದು ಆರೋಪಿಸಲಾಗಿತ್ತು.

ಸುಮಾರು ಒಂದು ವರ್ಷಗಳ ಅತ್ಯಾಚಾರ ಎಸಗಿದ್ದ ಆರೋಪಿಯು ಆಕೆ ಪ್ರತಿಭಟಿಸಿದಾಗ ಆಕೆಗೆ ಹಲ್ಲೆಗೈದಿದ್ದ.  ಇದರಿಂದ ಬಾಲಕಿಯ ತಾಯಿ ಮತ್ತು ಅಣ್ಣನಿಗೆ ಅತ್ಯಾಚಾರದ ವಿಷಯ ಗೊತ್ತಾಗಿತ್ತು. ಬಳಿಕ ಮನೆ ಮಂದಿಯ ಸಲಹೆಯಂತೆ ಬಾಲಕಿಯು 2019 ಜೂ.13 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ತಕ್ಷಣ ಪೊಲೀಸರು ಆರೋಪಿ ಪ್ರಸಾದ್ ವಿರುದ್ಧ  ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂದಿಸಿದ್ದರು.

ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್ ಡಿ. ಮತ್ತು ನಾಗೇಶ್ ಕೆ. ತನಿಖೆಯನ್ನು ಪೂರ್ತಿಗೊಳಿಸಿ ದೋಷಾರೋಪಣ ಪಟ್ಟಿಯನ್ನು  ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ. ರಾಧಾಕೃಷ್ಣ ಆರೋಪಿ ಪ್ರಸಾದ್ ವಿರುದ್ಧದ ಆರೋಪ ಸಾಬೀತಾಗಿದೆ ಎಂಬ ತೀರ್ಮಾನಕ್ಕೆ ಬಂದು ಮಂಗಳವಾರ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಶಿಕ್ಷೆಯ ವಿವರ: ಪೊಕ್ಸೊ ಕಾಯ್ದೆಯ ಕಲಂ 6 ರನ್ವಯ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಮತ್ತೆ 2 ತಿಂಗಳ ಸಜೆ, ಐಪಿಸಿ ಸೆ. ೫೦೬ (ಕೊಲೆ ಬೆದರಿಕೆ)  ಅನ್ವಯ ೧ ವರ್ಷ ಸಜೆ, ಐಪಿಸಿ ಸೆಕ್ಷನ್ ೩೨೩ (ಹಲ್ಲೆ) ಅನ್ವಯ ೬ ತಿಂಗಳ ಸಜೆಯನ್ನು ವಿಧಿಸಲಾಗಿದೆ.

ಈ ಮೂರೂ ಶಿಕ್ಷೆಗಳನ್ನು ಏಕ ಕಾಲದಲ್ಲಿ ಅನುಭವಿಸ ಬೇಕಾಗಿದೆ. ಅಲ್ಲದೆ ಸಂತ್ರಸ್ತ ಬಾಲಕಿಗೆ ಸರಕಾರದ ವತಿಯಿಂದ 4 ಲಕ್ಷ ರೂ. ಪರಿಹಾರವನ್ನು ಜಿಲ್ಲಾ  ಕಾನೂನು ಸೇವಾ ಪ್ರಾಧಿಕಾರದ ಮೂಲಕ ದೊರಕಿಸಿ ಕೊಡುವಂತೆಯೂ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ.

ಸರಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ. ವೆಂಕಟರಮಣ ಸ್ವಾಮಿ ಅವರು ವಾದಿಸಿದ್ದರು. 16 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, 19 ದಾಖಲೆಗಳನ್ನು ಪರಿಶೀಲಿಸಲಾಗಿತ್ತು.

ಅತ್ಯಾಚಾರ ಮತ್ತು ಪೊಕ್ಸೊ ಸಂಬಂಧಿತ ಪ್ರಕರಣಗಳ ತ್ವರಿತ ವಿಲೆವಾರಿಗಾಗಿ ೨ನೇ ತ್ವರಿತಗತಿ ವಿಶೇಷ ನ್ಯಾಯಾಲಯವನ್ನು ಮಂಗಳೂರಿನಲ್ಲಿ ಒಂದು ತಿಂಗಳ ಹಿಂದೆ ಆರಂಭಿಸಲಾಗಿದ್ದು, ಈ ನ್ಯಾಯಾಲಯದಲ್ಲಿ  ಆರೋಪ ಸಾಬೀತಾಗಿ ಆರೋಪಿಗೆ ಶಿಕ್ಷೆಯಾದ ಮೊದಲ ಪ್ರಕರಣ ಇದಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News