ಬಿಜೆಪಿ ಸರಕಾರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸಿದ್ದರಾಮಯ್ಯ
ಬೆಂಗಳೂರು, ಮಾ.24: ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ನಾನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆ ಕೇಳಲ್ಲ. ಅದನ್ನು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಿದ್ಯಮಾನಗಳಿಂದ ಕುಸಿದು ಬೀಳುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ನಿಯಮ 69ರಡಿ ವಿಷಯ ಪ್ರಸ್ತಾಪಿಸಿ ಅವರು ಮಾತನಾಡಿದರು.
ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ನೈತಿಕ ಪೊಲೀಸ್ಗಿರಿ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಮಂಗಳೂರಿನಲ್ಲಿ ಸಿಎಂ ‘ಕ್ರಿಯೆಗೆ ಪ್ರತಿಕ್ರಿಯೆ’ ಇರುತ್ತದೆ ಎಂದು ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆಗಳಿಂದ ಪೊಲೀಸರ ನೈತಿಕತೆ ಏನಾಗಬೇಕು? ಉಡುಪಿ ಜಿಲ್ಲೆಯಲ್ಲಿ ಕೊರಗ ಸಮಾಜದವರ ವಿವಾಹ ಕಾರ್ಯಕ್ರಮದಲ್ಲಿ ಪೊಲೀಸರು ನುಗ್ಗಿ ದೌರ್ಜನ್ಯವೆಸಗಿದರು. 7 ಜನ ಪೊಲೀಸರನ್ನು ಅಮಾನತ್ತು ಮಾಡಿದ್ದೀರಾ. ಆದರೆ, ದೌರ್ಜನ್ಯವೆಸಗಿದವರನ್ನು ಜೈಲಿಗೆ ಕಳುಹಿಸದಿದ್ದರೆ ಅಮಾಯಕರಿಗೆ ಎಲ್ಲಿದೆ ರಕ್ಷಣೆ ಎಂದು ಅವರು ಪ್ರಶ್ನಿಸಿದರು.
ಆಳಂದದಲ್ಲಿ 144 ಸೆಕ್ಷನ್ ಉಲ್ಲಂಘಿಸಿದ ಪ್ರಕರಣದಲ್ಲಿ 160 ಜನರ ವಿರುದ್ಧ ಕ್ರಮ ಕೈಗೊಂಡಿದ್ದೀರಾ. ಆದರೆ, 144 ಸೆಕ್ಷನ್ ಇದ್ದರೂ 300 ಜನರೊಂದಿಗೆ ಸೇರಿ ಮೆರವಣಿಗೆ ಹೋದ ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಬಿಜೆಪಿ ಶಾಸಕರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಾ? ನಿಮ್ಮ ಸರಕಾರ ವಿಧಿಸಿದ ನಿಷೇಧಾಜ್ಞೆಯನ್ನು ನಿಮ್ಮ ಸರಕಾರದ ಸಚಿವರು, ಶಾಸಕರು, ಕೇಂದ್ರ ಸಚಿವರು ಉಲ್ಲಂಘಿಸುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ? ಎಂದು ಅವರು ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ಹರ್ಷ ಕೊಲೆಯಾಯಿತು. ಅಂತ್ಯಸಂಸ್ಕಾರದ ದಿನ ನಿಷೇಧಾಜ್ಞೆ ಹೇರಲಾಗಿತ್ತು. ಕೊಲೆ ಮಾಡಿದವರನ್ನು ಗಲ್ಲಿಗೇರಿಸಿ. ಆದರೆ, ಕೊಲೆ ಮಾಡಿದ್ದು ಮುಸ್ಲಿಂ ಗೂಂಡಾಗಳು ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿದರು. ಇನ್ನೂ ಎಫ್ಐಆರ್ ಆಗಿರಲಿಲ್ಲ, ಆರೋಪಿಗಳ ಬಂಧನ ಆಗಿರಲಿಲ್ಲ. ಆಗಲೆ, ಈಶ್ವರಪ್ಪ ಇಂತಹ ಹೇಳಿಕೆ ನೀಡಿದರು ಎಂದು ಸಿದ್ದರಾಮಯ್ಯ ತಿಳಿಸಿದರು.
ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಇದು ವೈಯಕ್ತಿಕ ಕಾರಣಕ್ಕೆ ನಡೆದ ಕೊಲೆ ಎಂದರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹರ್ಷ ವಿರುದ್ಧವು ಕ್ರಿಮಿನಲ್ ಕೇಸ್ಗಳಿವೆ ಎಂದು ಹೇಳಿಕೆ ನೀಡಿದ್ದರು. ಸಚಿವ ಈಶ್ವರಪ್ಪನವರು ಹರ್ಷ ಓರ್ವ ಸಜ್ಜನ ಎಂದರು. ಸರಕಾರದಲ್ಲಿ ಸಚಿವರ ನಡುವೆ ಸಮನ್ವಯತೆ ಇಲ್ಲವೇ ಎಂದು ಅವರು ಪ್ರಶ್ನಿಸಿದರು.
ಹರ್ಷನ ಶವದ ಮೆರವಣಿಗೆಯಲ್ಲಿ ನಿಷೇಧಾಜ್ಞೆ ಇದ್ದರೂ ಸಂಪುಟ ದರ್ಜೆ ಸಚಿವರು ತೆರಳುವ ಮೂಲಕ ನಿಯಮ ಉಲ್ಲಂಘನೆ ಮಾಡುತ್ತಾರೆ. ಎಸ್ಪಿ, ಡಿಸಿ ಸಮ್ಮುಖದಲ್ಲೆ ಒಂದು ಕೋಮಿನ ಜನರ ಅಂಗಡಿಗಳನ್ನು ಲೂಟಿ ಮಾಡಿ, ವಾಹನಗಳಿಗೆ ಆಸ್ತಿಪಾಸ್ತಿಗೆ ಬೆಂಕಿ ಹಚ್ಚಲಾಗುತ್ತದೆ. ಈವರೆಗೆ ಕಿಡಿಗೇಡಿಗಳ ವಿರುದ್ಧ ಕ್ರಮ ಇಲ್ಲ, ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಕಿಡಿಗಾರಿದರು.
ಮುಖ್ಯಮಂತ್ರಿಯ ಭದ್ರತಾ ಸಿಬ್ಬಂದಿಯೆ ಮಾದಕ ವಸ್ತುಗಳ ಮಾರಾಟದಲ್ಲಿ ಶಾಮೀಲಾಗಿರುವ ಆರೋಪಗಳು ಕೇಳಿ ಬಂದವು. ಮಂಡ್ಯದಲ್ಲಿ 100 ಚೀಲ ಪಡಿತರ ಅಕ್ಕಿ ಅಕ್ರಮ ದಾಸ್ತಾನಿನಲ್ಲಿದ್ದನ್ನು ತಹಶೀಲ್ದಾರ್ ಪತ್ತೆ ಹಚ್ಚಿ, ಪೊಲೀಸರಿಗೆ ಒಪ್ಪಿಸಿದ್ದರು. ಆದರೆ, ಆನಂತರ ಈ ವಿಚಾರದ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ವರದಿ ನೀಡಿರುವ ತಹಶೀಲ್ದಾರ್ ಪೊಲೀಸರ ವಶದಲ್ಲಿದ್ದ 100 ಚೀಲ ಅಕ್ಕಿ ಮಾಯವಾಗಿದೆ ಎಂದು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಪರೇಶ್ ಮೆಸ್ತಾ ಪ್ರಕರಣವನ್ನು ಪ್ರಸ್ತಾಪಿಸಲು ಬಿಜೆಪಿ ಸದಸ್ಯೆ ರೂಪಾಲಿ ನಾಯಕ್ ಪ್ರಯತ್ನಿಸಿದರು. ಆದರೆ, ಸಿದ್ದರಾಮಯ್ಯ ನಾನು ನನ್ನ ಮಾತನ್ನು ಮುಗಿಸಲಿಲ್ಲ. ನೀವು ನಂತರ ಮಾತನಾಡಿ ಎಂದರು. ಈ ವೇಳೆ ಕೆಲಕಾಲ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಅಲ್ಲದೆ, ಬಿಜೆಪಿ ಸದಸ್ಯರು ರೂಪಾಲಿ ನಾಯಕ್ಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಸ್ಪೀಕರ್ ಪೀಠದತ್ತ ಧಾವಿಸಿದರು. ಆಗ, ಆಡಳಿತ ಪಕ್ಷದ ಮುಖ್ಯಸಚೇತಕ ಸತೀಶ್ ರೆಡ್ಡಿ, ಬಿಜೆಪಿ ಸದಸ್ಯರ ಮನವೊಲಿಸಿ ಅವರನ್ನು ಅವರ ಸ್ಥಾನಗಳತ್ತ ತೆರಳುವಂತೆ ಮಾಡಿದರು.