ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಮಾ.31ರವರೆಗೆ ಮಳೆ ಸಾಧ್ಯತೆ
Update: 2022-03-28 11:57 GMT
ಬೆಂಗಳೂರು, ಮಾ.28: ಟ್ರಫ್ನ ಕಾರಣದಿಂದಾಗಿ ರಾಜ್ಯದ ಕರಾವಳಿ ಮತ್ತು ಪಶ್ಚಿಮಘಟ್ಟದ ತಪ್ಪಲಿನ ಜಿಲ್ಲೆಗಳಲ್ಲಿ ಮಾ.31ರವರೆಗೆ ಮಳೆಯಾಗಲಿದೆ (Rain) ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಮಳೆ ಮುಂದುವರಿಯಲಿದೆ. ಛತ್ತೀಸ್ಗಢದಿಂದ ಕರ್ನಾಟಕದ ಒಳನಾಡಿನ ಮೂಲಕ ತಮಿಳುನಾಡಿನವರೆಗೆ ಹಬ್ಬಿರುವ ಟ್ರಫ್ನ ಕಾರಣದಿಂದಾಗಿ ಈ ಮಳೆಯಾಗಲಿದೆ.
ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ. ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ 41.1 ಡಿಗ್ರಿ ಸೆಲ್ಸಿಯಸ್ ಮತ್ತು ಧಾರವಾಡದಲ್ಲಿ ಕನಿಷ್ಠ 19.1 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಮಂಡ್ಯದಲ್ಲಿ 5.8 ಸೆಂ.ಮೀ., ಬೆಳಗಾವಿಯಲ್ಲಿ 4.5 ಸೆ.ಮೀ., ಕೊಡಗಿನಲ್ಲಿ 3.6 ಸೆಂ.ಮೀ.ಮಳೆಯಾಗಿದೆ.