ಅಕ್ರಮ ಆಸ್ತಿಗಳಿಕೆ ಆರೋಪ: ಸಚಿವ ವಿ.ಸೋಮಣ್ಣ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

Update: 2022-03-30 17:24 GMT

ಬೆಂಗಳೂರು, ಮಾ.30: ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪ ಎದುರಿಸುತ್ತಿರುವ ವಸತಿ ಸಚಿವ ವಿ.ಸೋಮಣ್ಣ ಸಲ್ಲಿಸಿದ್ದ ನಿರೀಕ್ಷಾ ಜಾಮೀನು ಮನವಿಗೆ ಸಂಬಂಧಿಸಿದಂತೆ ಆದೇಶವನ್ನು ಎ.1ಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕಾಯ್ದಿರಿಸಿದೆ. 

ಸಚಿವ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿರಿಸಿತು. ದೂರುದಾರ ಮೂಡಲಪಾಳ್ಯದ ರಾಮಕೃಷ್ಣ ಅವರ ಪರವಾಗಿ ವಕೀಲರಾದ ಬಿ.ಎನ್.ಜಗದೀಶ್ ಅವರು ವಾದಿಸಿದರು.

ಅಕ್ರಮ ಆಸ್ತಿಗಳಿಕೆ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸಲ್ಲಿಸಿರುವ ವರದಿಯನ್ನು ನ್ಯಾಯಾಲಯವು ಕಳೆದ ಸೋಮವಾರ ತಿರಸ್ಕರಿಸಿತ್ತು. ಸೋಮಣ್ಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶ ನೀಡಿತ್ತು. ಎ.16ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೋಮಣ್ಣ ಅವರಿಗೆ ಸಮನ್ಸ್ ಜಾರಿ ಮಾಡಿದೆ. 

ಶೇ.204 ಅಕ್ರಮ ಆಸ್ತಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿ ಸೋಮಣ್ಣ ತಮ್ಮ ಆಸ್ತಿ ಕುರಿತು ಸ್ವಯಂ ಘೋಷಣೆ ಮಾಡಿಕೊಂಡಿರುವ ಮಾಹಿತಿ ಪ್ರಕಾರ 1993-94 ರಿಂದ 2009-10ರ ಅವಧಿಯಲ್ಲಿ ಅವರ ಆಸ್ತಿಯು 18,49,89,441 ರೂ.ಆಗಿದೆ. ಈ ಪೈಕಿ ಅಂದಾಜು 12.42 ಕೋಟಿ ರೂ.ಅಕ್ರಮ ಆಸ್ತಿ ಕಂಡು ಬಂದಿದೆ. ಅಕ್ರಮ ಆಸ್ತಿಯ ಪ್ರಮಾಣ ಶೇ.204 ಆಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News