ಸಕಾಲ ಸೇವೆಯಡಿ ಕಾಲಮಿತಿಯಲ್ಲಿ ಸೇವೆ ಒದಗಿಸದವರಿಗೆ ದಂಡ ವಿಧಿಸಲು ಅವಕಾಶವಿದೆ: ಸಚಿವ ಬಿ.ಸಿ. ನಾಗೇಶ್

Update: 2022-04-04 12:34 GMT

ಬೆಂಗಳೂರು, ಎ.4: ಸಕಾಲ ಸೇವೆಯಡಿ ಕಾಲಮಿತಿಯಲ್ಲಿ ಸೇವೆ ಒದಗಿಸದ ಅಧಿಕಾರಿ ಅಥವಾ ಸಿಬ್ಬಂದಿಗೆ ದಂಡ ವಿಧಿಸಲು ಅವಕಾಶ ಇದೆ. ಆದರೆ, ಅದು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಈ ವಿಚಾರದಲ್ಲಿ ಅಧಿಕಾರಿಗಳು ಗಮನ ಹರಿಸಬೇಕಿದೆ ಎಂದು ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ ನೀಡಿದರು.

ಸೋಮವಾರದಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಸಕಾಲ ದಶಮಾನೋತ್ಸವ’ ಕಾರ್ಯಕ್ರಮದಲ್ಲಿ ನವೀಕೃತ ಸಕಾಲ ವೆಬ್­ಸೈಟ್ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ‘ಚಿಕ್ಕಮಗಳೂರಿನಲ್ಲಿ ಕೋವಿಡ್ ಕಾರಣ ಪತಿಯನ್ನು ಕಳೆದುಕೊಂಡ ಮಹಿಳೆಗೆ ಅನುಕಂಪದ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿತ್ತು. ಆ ಮಹಿಳೆ ಕೆಲಸ ಮಾಡುತ್ತಿದ್ದರು. ಆದರೆ, 11 ತಿಂಗಳಿಂದ ವೇತನ ನೀಡಿರಲಿಲ್ಲ. ಚಿಕ್ಕಮಗಳೂರು ಪ್ರವಾಸದ ವೇಳೆ ಕಚೇರಿಯೊಂದರ ಆವರಣದಲ್ಲಿ ನಿಂತಿದ್ದ ಆ ಮಹಿಳೆಯನ್ನು ಮಾತನಾಡಿಸಿದಾಗ ವೇತನ ವಿಚಾರ ತಿಳಿಸಿದರು. ವೇತನ ನೀಡದಿರಲು ಕಾರಣವೇನು ಎಂದು ಅರಿಯಲು ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದಾಗ ಸಕಾರಣವಿಲ್ಲದೇ ಬೇರೆ ಬೇರೆ ಕಚೇರಿಗಳಲ್ಲಿ ತಿಂಗಳುಗಟ್ಟಲೇ ಸಂಬಂಧಿಸಿದ ಕಡತ ಇಟ್ಟುಕೊಂಡಿರುವುದು ಕಂಡು ಬಂತು. ಕೂಡಲೇ ವೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದೆ. ಕೇವಲ ಒಂದೇ ದಿನದಲ್ಲಿ ಕೆಲಸ ಆಯಿತು. ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ತಾವು ಮಾಡಬೇಕಾದ ಕೆಲಸ ಮಾಡಿದ್ದರೆ ಆ ಮಹಿಳೆ 11 ತಿಂಗಳು ಕಾಲ ವೇತನಕ್ಕಾಗಿ ಕಾಯುವ ಪರಿಸ್ಥಿತಿ ಬರುತ್ತಿರಲಿಲ್ಲ. ಇಂತಹ ಘಟನೆಗಳು ಮರಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲಿದೆ. ಅನಗತ್ಯ ವಿಳಂಬ ಮಾಡಬಾರದು ಎಂದು ಹೇಳಿದರು.

ರಾಜ್ಯ ಸರಕಾರದ 99 ಇಲಾಖೆಗಳ 1,115 ಸೇವೆಗಳು ಸಕಾಲ ಸೇವೆಯಲ್ಲಿ ಲಭ್ಯ ಇವೆ. ವಿವಿಧ ಇಲಾಖೆಗಳ ಒಂದೊಂದು ಸೇವೆಗೆ ಒಂದೊಂದು ಕಾಲಮಿತಿ ನಿಗದಿಪಡಿಸಲಾಗಿದೆ. ಸಕಾಲ ಯೋಜನೆಯಿಂದಾಗಿ ಅರ್ಜಿಗಳು ಕಾಲಮಿತಿಯಲ್ಲಿ ವಿಲೇವಾರಿ ಆಗುತ್ತಿವೆ. ಆದರೆ, ಕೆಲವು ಸಂದರ್ಭಗಳಲ್ಲಿ ಅರ್ಜಿದಾರರಿಗೆ ತುರ್ತಾಗಿ ಒಂದೆರೆಡು ದಿನಗಳಲ್ಲಿ ದಾಖಲೆಗಳು, ಪ್ರಮಾಣಪತ್ರಗಳು ಬೇಕಾಗುತ್ತವೆ. ಅಂತಹ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಸೇವೆ ಒದಗಿಸಲು ತತ್ಕಾಲ್ ಸೇವೆಯನ್ನು ಜಾರಿಗೆ ತರುವ ಚಿಂತನೆ ಇದೆ. ಈ ಕುರಿತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.

2012ರ ಎ.2ರಿಂದ ಈ ವರ್ಷದ ಫೆ.28ರವರೆಗೆ 26.56 ಕೋಟಿ ಅರ್ಜಿಗಳು ಸ್ವೀಕೃತವಾಗಿದ್ದು, 26.41 ಕೋಟಿ ಅರ್ಜಿಗಳು ವಿಲೇವಾರಿಗೊಂಡಿವೆ ಎಂದು ಮಾಹಿತಿ ನೀಡಿದರು.

ಸರಕಾರಿ ಉದ್ಯೋಗ ಪಡೆದ ಬಳಿಕ ಸೇವಕರಾಗಿ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಸರಕಾರಿ ಸೇವೆಗಳನ್ನು ಒದಗಿಸುವುದರಲ್ಲಿ ಪಾರದರ್ಶಕತೆ, ಬದ್ಧತೆ ಮತ್ತು ಜವಾಬ್ದಾರಿ ಇರಬೇಕು. ಕಾಲಮಿತಿಯಲ್ಲಿ ಸೇವೆ ಒದಗಿಸಬೇಕು. ಇಲ್ಲದಿದ್ದರೆ ಅದಕ್ಕೆ ಕಾರಣವನ್ನು ತಿಳಿಸುವ ವ್ಯವಸ್ಥೆಯು ಜಾರಿಗೆ ತರಬೇಕು ಎನ್ನುವ ಉದ್ದೇಶವಿದೆ. ಮುಂದಿನ ದಿನಗಳಲ್ಲಿ ಅದನ್ನು ಜಾರಿಗೆ ತರುವ ಬಗ್ಗೆಯು ಚರ್ಚಿಸಲಾಗುವುದು ಎಂದು ಅವರು ಹೇಳಿದರು.
 
ಕಾರ್ಯಕ್ರಮದಲ್ಲಿ ಸಕಾಲ ಸೇವೆಗಳ ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸಕಾಲ ಸೇವೆಗಳ ಜಾರಿಯಲ್ಲಿ ಉತ್ತಮ ಸಾಧನೆ ಮಾಡಿದ ಮೊದಲ ಮೂರು ಸ್ಥಾನಗಳಲ್ಲಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು. ಸಕಾಲ ಯೋಜನೆ ಅನುಷ್ಠಾನಗೊಳಿಸಲು ಶ್ರಮಿಸಿದ ಅಧಿಕಾರಿಗಳಿಗೆ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸುರೇಶ್ ಕುಮಾರ್, ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಕಾಲ ಮಿಷನ್ ನಿರ್ದೇಶಕರಾದ ಪೊನ್ನುರಾಜ್, ಹೆಚ್ಚುವರಿ ನಿರ್ದೇಶಕ ಡಾ. ಬಿ.ಆರ್ ಮಮತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News