ಬೆಂಗಳೂರು: ನಗರ ಪೊಲೀಸರೊಂದಿಗೆ ಡಿಜಿಪಿ ಸಭೆ
Update: 2022-04-06 22:26 IST
ಬೆಂಗಳೂರು, ಎ.6: ಇತ್ತೀಚಿಗೆ ಕೋಮುಭಾವನೆ ಕೆರಳಿಸುವ ವಿಷಯಗಳು ಮುನ್ನೆಲೆಗೆ ಬಂದಿರುವ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರ ಪೊಲೀಸರೊಂದಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಭೆ ನಡೆಸಿದರು.
ಬುಧವಾರ ನಗರದ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಆಯಾ ವಲಯದ ಡಿಸಿಪಿಗಳಿಂದ ಮಾಹಿತಿ ಪಡೆದರು. ಬಳಿಕ, ಭದ್ರತೆ, ಕಾನೂನು ವಿರೋಧಿ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ಸೂಚನೆ ನೀಡಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀಣ್ ಸೂದ್, ಸಭೆಯಲ್ಲಿ ಹೆಚ್ಚುವರಿ ಆಯುಕ್ತರು ಹಾಗೂ ಡಿಸಿಪಿಗಳು ಭಾಗಿಯಾಗಿದ್ದರು. ನಗರದಲ್ಲಿ ಕಾನೂನು ಸುವ್ಯವಸ್ಥೆ, ಹಾಗೂ ಅಪರಾಧ ನಿಯಂತ್ರಣ, ಸೂಕ್ಷ್ಮ ವಿಚಾರಗಳಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗೆ ಕೈಗೊಂಡ ಕ್ರಮಗಳು, ತೊಡಕುಗಳ ಬಗ್ಗೆ ಚರ್ಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.