ಸಂಪಾಜೆ ದರೋಡೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಬಂಧನ, ಚಿನ್ನಾಭರಣ ವಶಕ್ಕೆ

Update: 2022-04-06 17:04 GMT

ಸಂಪಾಜೆ: ಚಟ್ಟೆಕಲ್ಲಿನಲ್ಲಿ ನಡೆದ ಮನೆ ದರೋಡೆ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಮತ್ತೆ ಇಬ್ಬರು ಆರೋಪಿಗಳಾದ ತಮಿಳುನಾಡು ಮೂಲದ ಸೆಂಥಿಲ್ ಮತ್ತು ಪಾಂಡಿಸೆಲ್ವಂ ಎಂಬವರನ್ನು ಬಂಧಿಸಿದ್ದಾರೆ. ಇವರಿಂದ 71.52 ಗ್ರಾಂ ಚಿನ್ನಾಭರಣ ಮತ್ತು ನಗದು 11590 ರೂ. ವಶಪಡಿಸಿಕೊಳ್ಳಲಾಗಿದೆ ಎಂದು  ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪ್ರಕರಣದಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮಾ. 20 ರಂದು ರಾತ್ರಿ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಚಟ್ಟೆಕಲ್ಲುನಲ್ಲಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಮನೆಯವರನ್ನು ಆಯುಧ ತೋರಿಸಿ ಬೆದರಿಸಿ, ಸುಮಾರು 1,52,000 ರೂ. ನಗದು ಮತ್ತು ಸುಮಾರು 83 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ದರೋಡೆ ಮಾಡಲಾಗಿತ್ತು.

ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ಅಧೀಕ್ಷಕ ಸೋನಾವಣೆ ಋಷಿಕೇಶ್ ಭಗವಾನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ನಿರ್ದೇಶನದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಗಾನಾ.ಪಿ.ಕುಮಾರ್ ಮತ್ತು ಸುಳ್ಯ ಸಿಐ ನವೀನ್ ಚಂದ್ರ ಜೋಗಿ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಿ ತನಿಖೆ ನಡೆಸಿತ್ತು.

ಪ್ರಕರಣ ಭೇದಿಸಿದ ಪೊಲೀಸರು ಕೆಲವು ದಿನಗಳ ಹಿಂದೆ ಕಾರ್ತಿಕ್, ಯಧು ಕುಮಾರ್, ದೀಕ್ಷಿತ್, ನರಸಿಂಹನ್ , ಎಂಬವರನ್ನು ಬಂಧಿಸಿ ದರೋಡೆ ಮಾಡಿದ ನಗದು ಹಣದ ಪೈಕಿ 20,000 ರೂ. ಮತ್ತು ಆರೋಪಿಗಳು ಕೃತ್ಯಕ್ಕೆ ಬಳಸಿದ ವಾಹನ ಮತ್ತು 5 ಮೊಬೈಲ್ ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು.

ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಇದೀಗ ಸೆಂಥಿಲ್ ಮತ್ತು ಪಾಂಡಿಸೆಲ್ವಂ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಎಸ್‍ಪಿ ಸೋನಾವಣೆ ಋಷಿಕೇಶ್ ಭಗವಾನ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News