ಸಾಹಿತಿಗಳ ಕೂದಲು ಕೊಂಕಲು ಬಿಡುವುದಿಲ್ಲ: ಬಿ.ಕೆ.ಹರಿಪ್ರಸಾದ್

Update: 2022-04-09 15:35 GMT

ವಿಜಯನಗರ, ಎ. 9: ‘ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಡಾ.ಎಂ.ಎಂ.ಕಲ್ಬುರ್ಗಿ, ಗೋವಿಂದ ಪನ್ಸಾರೆ, ಪತ್ರಕರ್ತೆ ಗೌರಿ ಲಂಕೇಶ್ ಅವರನ್ನ ಬಲಪಂಥೀಯ ಸಂಘಟನೆಗಳು, ಸನಾತನವಾದಿಗಳು ಹತ್ಯೆ ಮಾಡಿದ್ದಾರೆ. ಇದೀಗ ಸಿದ್ದರಾಮಯ್ಯ ಸೇರಿದಂತೆ ಅನೇಕ ಸಾಹಿತಿಗಳಿಗೆ ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದ್ದು, ಕಾಂಗ್ರೆಸ್ ಪಕ್ಷ ದೇಶದ ಐಕ್ಯತೆಗಾಗಿ ತ್ಯಾಗ ಬಲಿದಾನ ಮಾಡಲು ಸಿದ್ಧ' ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಶನಿವಾರ ಇಲ್ಲಿನ ಹೊಸಪೇಟೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀವ್ ಗಾಂಧಿ, ಇಂದಿರಾ ಗಾಂಧಿಯವರು ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ನಮಗೆ ಯಾವ ಭಯವೂ ಇಲ್ಲ. ಕೋಮುವಾದಿಗಳಿಗೆ ಎದೆಯೊಡ್ಡಿ ನಿಲ್ಲಲು ನಾವು ಸಿದ್ಧರಿದ್ದೇವೆ. ಆದರೆ ಸಾಹಿತಿಗಳ ಕೂದಲು ಮುಟ್ಟಲು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ' ಎಂದು ಎಚ್ಚರಿಕೆ ನೀಡಿದರು.

‘ರಾಜ್ಯದಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ ಪತ್ರ ಬರುತ್ತದೆ ಎಂದರೆ ರಾಜ್ಯದ ಗೃಹ ಮಂತ್ರಿ ಮರಕೋತಿ ಆಟ ಆಡಲಿಕ್ಕೆ ಲಾಯಕ್. ಗೃಹ ಸಚಿವರೆ ಮತೀಯವಾದಿ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಅವರ ಸಂಘಟನೆಗಳು ಬಾಲ ಬಿಚ್ಚಲು ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಇಂತಹ ಗೃಹ ಸಚಿವ ಕೂಡಲೇ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಕ್ರಿಯೆಗೆ, ಪ್ರತಿಕ್ರಿಯೆ ಸಹಜ ಎಂದು ಹೇಳುತ್ತಾರೆ. ಇಂತಹವರಿಂದ ರಕ್ಷಣೆ ಸಾಧ್ಯವಿಲ್ಲ ಎಂದು ಅವರು ಹೇಳಿದರು. ಗೋಷ್ಠಿಯಲ್ಲಿ ಮುಖಂಡರಾದ ವೆಂಕಟರಾವ್ ಘೋರ್ಪಡೆ, ರಘು ಗುಜ್ಜಲ್ ಸೇರಿದಂತೆ ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News