ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು
Update: 2022-04-12 14:26 GMT
ಬೆಂಗಳೂರು, ಎ.12: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿ ಸಚಿವ ಕೆ.ಎಸ್.ಈಶ್ವರಪ್ಪರವರನ್ನು ಕೂಡಲೇ ಬಂಧಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ನಾಯಕರು ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, “ಗುತ್ತಿಗೆದಾರರಾಗಿದ್ದ ಸಂತೋಷ್ ಅವರು ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿ ಕಳೆದ ವರ್ಷವೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡಿದ್ದರು. ಆಗಲೇ ಈಶ್ವರಪ್ಪರವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದರೆ, ನಾವು ಇಂದು ಸಂತೋಷ್ ಅವರನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಆದರೆ ಆ ಸಂಬಂಧ ಯಾವುದೇ ತನಿಖೆ ನಡೆಯಲಿಲ್ಲ. ಭ್ರಷ್ಟ ಬಿಜೆಪಿಯ ಆಡಳಿತದಲ್ಲಿ ಪ್ರಾಮಾಣಿಕರ ಧ್ವನಿಗೆ ಬೆಲೆ ಇಲ್ಲವಾಗಿದೆ” ಎಂದು ಹೇಳಿದರು.