ಬೆಂಗಳೂರಿನಲ್ಲಿ ಉಲ್ಬಣಿಸಿದ ಡೆಂಘಿ: ಹತೋಟಿಗೆ ಮುಂದಾದ ಬಿಬಿಎಂಪಿ

Update: 2022-04-13 12:36 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.12: ಕೊರೋನ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲೇ ನಗರದಲ್ಲಿ ಡೆಂಘಿ , ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಉಲ್ಬಣಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ನಗರದ ಕೆಲವು ಪ್ರದೇಶಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಈಗಾಗಲೇ ನಗರದಾದ್ಯಂತ 1793 ಡೆಂಘಿ ಪ್ರಕರಣಗಳು ದಾಖಲಾಗಿವೆ.

ಕಳೆದ ವರ್ಷ ಒಟ್ಟಾರೆ 1800 ಪ್ರಕರಣಗಳು ದಾಖಲಾಗಿದ್ದವು, ಆದರೆ, ಈ ವರ್ಷ ಆರಂಭದಲ್ಲೇ 1793 ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂದಿನ ದಿನದಲ್ಲಿ ಡೆಂಘೀ ಮತ್ತು ಮಲೇರಿಯಾದಂತೆ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ್‍ಚಂದ್ರ ಅವರು ತಿಳಿಸಿದ್ದಾರೆ. 

ಶಾಲಾ-ಕಾಲೇಜುಗಳ ಸಮೀಪ ಸೊಳ್ಳೆಗಳು ಹೆಚ್ಚಾಗುತ್ತಿರುವುದರಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಸಿಸುತ್ತಿರುವವರ ಆರೋಗ್ಯ ತಪಾಸಣೆ ನಡೆಸುವಂತೆ ಅವರು ಸೂಚಿಸಿದ್ದಾರೆ. 

ಸಾಂಕ್ರಾಮಿಕ ರೋಗದಿಂದ ಪಾರಾಗಲು ಜನ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೂಕುಂಡಗಳಲ್ಲಿ, ತೆಂಗಿನ ಚಿಪ್ಪುಗಳಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ಶೇಖರಣೆಯಾಗದಂತೆ ಎಚ್ಚರ ವಹಿಸಬೇಕು. ಮಕ್ಕಳಿಗೆ ಸೊಳ್ಳೆ ಕಡಿತವಾಗಿದ್ದರೆ ಕೂಡಲೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ ಸೂಚನೆ ಪಡೆದುಕೊಳ್ಳುವಂತೆ ತ್ರಿಲೋಕ್ ಚಂದ್ರ ಅವರು ಮನವಿ ಮಾಡಿಕೊಂಡಿದ್ದಾರೆ. 

ನಗರದಲ್ಲಿ ಡೆಂಘೀ, ಮಲೇರಿಯಾದಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಮನಗಂಡು ಬಿಬಿಎಂಪಿ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಡೋರ್ ಟು ಡೋರ್ ಸರ್ವೇ ಕಾರ್ಯ ಆರಂಭಿಸಲಾಗಿದೆ. ನಿಂತ ನೀರಿನಲ್ಲಿ ಲಾರ್ವಾ ಉತ್ಪತ್ತಿಯಾಗದಂತೆ ರಾಸಾಯನಿಕ ಸಿಂಪಡಿಸಲಾಗುತ್ತಿದೆ. ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News