ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಉಡುಪಿ ಜಿಲ್ಲಾಧಿಕಾರಿ
ಉಡುಪಿ : ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ರೋಗಗಳಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.
ಬುಧವಾರ ಮಣಿಪಾಲದ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ ಮತ್ತು ಮಲೇರಿಯಾ ರೋಗ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ರೋಗಗಳು ಬರುವ ಸಾಧ್ಯತೆ ಅಧಿಕವಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳು ಸಂತಾನೋತ್ಪತ್ತಿಗೊಳ್ಳುವುದರೊಂದಿಗೆ ಹೆಚ್ಚಿನ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್, ಮಲೇರಿಯಾ ಸೇರಿದಂತೆ ವಿವಿಧ ರೋಗಗಳು ಹರಡುತ್ತವೆ ಎಂದರು.
ಸೊಳ್ಳೆ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆ ಕೈಗೊಳ್ಳಬೇಕು. ಈ ಬಗ್ಗೆ ಸಾರ್ವಜನಿಕ ರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.
ಬಹು ಮಹಡಿ ಕಟ್ಟಡಗಳ ಮೇಲ್ಛಾವಣಿಗಳಲ್ಲಿ ನೀರಿನ ಟ್ಯಾಂಕ್ಗಳನ್ನು ತೆರೆದಿಟ್ಟಿರುವ ಹಿನ್ನೆಲೆಯಲ್ಲಿ ಅವು ಸೊಳ್ಳೆಗಳ ಉತ್ಪತಿ ತಾಣಗಳಾಗಿವೆ. ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇವುಗಳ ಪರಿವೀಕ್ಷಣೆ ಮಾಡಿ, ಸಂಬಂಧಪಟ್ಟವರಿಗೆ ಇವುಗಳ ನಿಯಂತ್ರಣಕ್ಕೆ ಸೂಚನೆ ನೀಡುವುದು ಸೂಕ್ತ ಎಂದರು.
ಮಲೇರಿಯಾ, ಡೆಂಗ್ ರೋಗಗಳು ಹೆಚ್ಚು ಕಂಡುಬರುವ ಪ್ರದೇಶಗಳನ್ನು ಗುರುತಿಸುವುದರೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು, ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು ಎಂದರು.
ಜಿಲ್ಲೆಗೆ ಕಟ್ಟಡ ನಿರ್ಮಾಣ ಹಾಗೂ ಮೀನುಗಾರಿಕೆ ಸೇರಿದಂತೆ ಇತರ ಕಾರ್ಯಗಳಿಗೆ ಹೊರ ರಾಜ್ಯಗಳಿಂದ ಕಾರ್ಮಿಕರು ಹಾಗೂ ಪ್ರವಾಸಿ ತಾಣ ಗಳನ್ನು ವೀಕ್ಷಿಸಲು ಸಹ ಹೆಚ್ಚು ಜನರು ಹೊರಗಿನಿಂದ ಬರುತ್ತಾರೆ. ಹಾಗಾಗಿ ಇದರಿಂದ ರೋಗಗಳು ಹರಡುವ ಸಾಧ್ಯತೆ ಇದ್ದು, ಇವುಗಳ ಬಗ್ಗೆ ಎಚ್ಚರ ವಹಿಸುವುದು ಅಗತ್ಯ ಎಂದರು.
ಡೆಂಗ್, ಮಲೇರಿಯಾ, ಕೀಟಜನ್ಯ ರೋಗಗಳ ಸಾಮಾನ್ಯ ಲಕ್ಷಣಗಳು ಕಂಡು ಬಂದವರ ಆರೋಗ್ಯ ತಪಾಸಣೆ ನಡೆಸಿ, ರೋಗಗಳನ್ನು ಗುರುತಿಸಿ, ಚಿಕಿತ್ಸೆ ನೀಡುವ ಮೂಲಕ ರೋಗ ಹರಡುವುದನ್ನು ತಡೆಯಲು ಸಾಧ್ಯ ಎಂದರು.
ಹಿಂದಿನ ವರ್ಷಗಳಲ್ಲಿ ಮಲೇರಿಯಾ, ಡೆಂಗ್ ರೋಗ ನಗರ ಪ್ರದೇಶಗಳಲ್ಲಿ ಹಾಗೂ ಕೊಲ್ಲೂರು ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಇವುಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ವಹಿಸಿ ಈ ಬಾರಿ ಪ್ರಕರಣಗಳು ವರದಿ ಯಾಗದಂತೆ ನೋಡಿಕೊಳ್ಳಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಉಪಸ್ಥಿತ ರಿದ್ದರು.