ಸಂತೋಷ್ ಪಾಟೀಲ್ ರದ್ದು ಆತ್ಮಹತ್ಯೆಯೋ, ಕೊಲೆಯೋ ಚರ್ಚೆ ಕಾರಣ ತನಿಖೆಗೆ ವಿಶೇಷ ತಂಡ ರಚನೆ: ಆರಗ ಜ್ಞಾನೇಂದ್ರ
ಶಿವಮೊಗ್ಗ, ಎ.15: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಉಡುಪಿ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರವೇ ತಪ್ಪಿತಸ್ಥರನ್ನು ಪೊಲೀಸರು ಪತ್ತೆ ಮಾಡಲಿದ್ದಾರೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಸಚಿವ ಕೆ.ಎಸ್.ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಪಕ್ಷದ ವರಿಷ್ಟರ ಒತ್ತಡವಿಲ್ಲ. ಪಾರದರ್ಶಕ ತನಿಖೆಗಾಗಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದರು.
ಸಂತೋಷ್ ಕುಟುಂಬದವರ ಸಮ್ಮುಖದಲ್ಲೇ ಲಾಡ್ಜ್ ಕೊಠಡಿ ಬಾಗಿಲು ತೆರೆಯಲಾಗಿದೆ. ಮರಣೋತ್ತರ ಪರೀಕ್ಷೆಯನ್ನೂ ಮಾಡಲಾಗಿದೆ. ವಾಟ್ಸ್ಆ್ಯಪ್ ಡೆತ್ ನೋಟ್ ಈ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.
ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಈಶ್ವರಪ್ಪರನ್ನು ಬಲಿಪಶು ಮಾಡಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ನಾಯಕರ ಕೈವಾಡ ಆರೋಪ ಸೇರಿದಂತೆ ಎಲ್ಲ ಸಂಗತಿ ತನಿಖೆಯಿಂದ ಬಯಲು ಮಾಡುತ್ತೇವೆ. ಈಶ್ವರಪ್ಪ ಆರೋಪಮುಕ್ತರಾಗಿ ಬರುತ್ತಾರೆ ಎಂದರು.