ಬೆಂಗಳೂರು: ಶಾಲಾ ಆಟದ ಮೈದಾನ ಹಸ್ತಾಂತರಕ್ಕೆ ಹೈಕೋರ್ಟ್ ತಡೆ
ಬೆಂಗಳೂರು, ಎ.15: ನಗರದ ಪದ್ಮನಾಭನಗರ ಮುಖ್ಯರಸ್ತೆಯಲ್ಲಿರುವ ಕಾರ್ಮೆಲ್ ಕನ್ನಡ ಶಾಲೆಯ ಪಕ್ಕದಲ್ಲಿರುವ 3 ಸಾವಿರ ಚದರ ಅಡಿ ವಿಸ್ತೀರ್ಣದ ಆಟದ ಮೈದಾನವನ್ನು ಬಿಬಿಎಂಪಿಗೆ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪ್ರಕರಣದ ಕುರಿತಂತೆ ಜಯನಗರ ಕೋ ಆಪರೇಟಿವ್ ಹೌಸಿಂಗ್ ಸೊಸೈಟಿ ಲಿಮಿಟೆಡ್ ಕಾರ್ಯದರ್ಶಿ ಎಂ.ಶಿವಣ್ಣ ಸಲ್ಲಿಸಿರುವ ರಿಟ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ್ ಪಿ.ದಳವಾಯಿ ವಾದ ಮಂಡಿಸಿ, ಖಾಸಗಿ ಕನ್ನಡ ಮಾಧ್ಯಮ ಶಾಲೆಯಾದ ಕಾರ್ಮೆಲ್ ವಿದ್ಯಾಸಂಸ್ಥೆಯಲ್ಲಿ ಎಲ್.ಕೆ.ಜಿಯಿಂದ 7ನೆ ತರಗತಿವರೆಗೆ ಸುಮಾರು 400 ಮಕ್ಕಳು ಕಲಿಯುತ್ತಿದ್ದಾರೆ. 15 ಮಂದಿ ಬೋಧಕ ಸಿಬ್ಬಂದಿಗಳಿದ್ದಾರೆ. ಈಗ ಏಕಾಏಕಿ ಈ ಪ್ರದೇಶವನ್ನು ತನಗೆ ಹಸ್ತಾಂತರಿಸಬೇಕು ಎಂದು ಬಿಬಿಎಂಪಿ, ಬಿಡಿಎಗೆ ಮನವಿ ಸಲ್ಲಿಸಿದೆ. ಈ ಕೋರಿಕೆಯ ಹಿಂದೆ ಸ್ಥಳೀಯ ಶಾಸಕರೂ ಆದ ಕಂದಾಯ ಸಚಿವ ಆರ್.ಅಶೋಕ್ ಅವರ ನೇರ ಕುಮ್ಮಕ್ಕು ಇದೆ. ಹೀಗಾಗಿ, ಈ ಜಾಗದ ಪರಭಾರೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.
ಮನವಿಗೆ ಪ್ರತಿಕ್ರಿಯಿಸಿದ ಪೀಠ, ಹಾಗಾದರೆ ಸಚಿವರನ್ನೂ ಇದರಲ್ಲಿ ಪ್ರತಿವಾದಿ ಮಾಡಬೇಕಲ್ಲವೇ ಎಂದು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು, ಸಚಿವರು ಸೂಚನೆ ನೀಡಿರುವುದಕ್ಕೆ ಯಾವುದೇ ದಾಖಲೆ ಇಲ್ಲ. ಹೀಗಾಗಿ, ಅವರ ಬದಲಿಗೆ ಈಗಿರುವ ಪ್ರತಿವಾದಿಗಳಿಗೇ ತಾವು ಆದೇಶ ಮಾಡಬಹುದು ಎಂದು ಕೋರಿದರು. ಮನವಿ ಪುರಸ್ಕರಿಸಿದ ಪೀಠ, ಬಿಬಿಎಂಪಿ ದಕ್ಷಿಣ ವಲಯದ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಬಿಡಿಎ ಸಹಾಯಕ ಕಾರ್ಯಪಾಲಕ ಎಂಜನಿಯರ್ ಮತ್ತು ಬಿಡಿಎ ಪ್ರದೇಶಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆ ಮುಂದೂಡಿದೆ.