×
Ad

ಗಲಭೆಗಳಿಗೆ ಬಿಜೆಪಿ ಸರಕಾರ ಕುಮ್ಮಕ್ಕು ನೀಡುತ್ತಿದೆ: ಈಶ್ವರ್ ಖಂಡ್ರೆ ಆರೋಪ

Update: 2022-04-17 15:17 IST

ಕಲಬುರಗಿ: ಗಲಭೆಗಳಿಗೆ ಸರಕಾರ ಕುಮ್ಮಕ್ಕು ನೀಡುತ್ತಿದೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರ ಗಳನ್ನು ಮುನ್ನಲೆಗೆ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಾಮರಸ್ಯ ಕಾಪಾಡ ಬೇಕು. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಭಾವನಾತ್ಮಕ ವಿಷಯಗಳನ್ನು ಮುನ್ನಲೆಗೆ ಬಿಟ್ಟು ಬಿಜೆಪಿ ತನ್ನ ತಪ್ಪುಗಳನ್ನು ಮುಚ್ಚಿ ಹಾಕುತ್ತಿದೆ. ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ‌ ಎಂದರು‌.

ರಾಜ್ಯದಲ್ಲಿ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಇದಕ್ಕೆ ಬಿಜೆಪಿಯವರೇ ಕಾರಣ. ಮಾಜಿ ಸಚಿವ ಈಶ್ವರಪ್ಪ ಅವರ ಹೆಸರು ಬರೆದು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸ ಬೇಕಿತ್ತು. ಆದರೆ, ಸರ್ಕಾರ ಈಶ್ವರಪ್ಪರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. 

ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು. ತನಿಖೆ ಪ್ರಾರಂಭವಾಗುವ ಮುನ್ನವೇ ಈಶ್ವರಪ್ಪ ತಪ್ಪು ಮಾಡಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಬಿಜೆಪಿಗರ ವರ್ತನೆಯಿಂದಲೇ ರಾಜ್ಯದ ಜನತೆ ಎಲ್ಲವನ್ನೂ ತಿಳಿದುಕೊಳ್ಳುತ್ತಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News