ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸಹಿತ ಹಲವರ ವಿರುದ್ಧ ಎಫ್ ಐಆರ್
ಬೆಂಗಳೂರು, ಎ.18: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪರ ರಾಜೀನಾಮೆ, ಬಂಧನಕ್ಕೆ ಆಗ್ರಹಿಸಿ ಎ.13ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಹೈ ಗ್ರೌಂಡ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಸೇರಿದಂತೆ ಒಟ್ಟು 36 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಹೋಟೆಲ್ ಬಳಿ ಅನುಮತಿ ಇಲ್ಲದೇ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಿಪಡಿಸಿ ಪತ್ರಿಭಟನೆ ನಡೆಸಿದ್ದ ಆರೋಪದಡಿ ಕಾಂಗ್ರೆಸ್ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 143, 341 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಎ.13ರಂದು ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನ ಕೆಲವು ನಾಯಕರನ್ನು ಸಿಎಂ ನಿವಾಸದ ಬಳಿ ಪೊಲೀಸರು ವಶಕ್ಕೆ ಪಡೆದಿದ್ದರು.