ಎ.19ರಿಂದ ಎಸೆಸೆಲ್ಸಿ ಮೌಲ್ಯಮಾಪನ: ನಿಷೇಧಾಜ್ಞೆ ಜಾರಿ
ಉಡುಪಿ : ಪ್ರಸ್ತುತ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಎ.೧೯ರಿಂದ ಪ್ರಾರಂಭವಾಗಿ ಸುಮಾರು ೧೦ ದಿನಗಳವರೆಗೆ ಜಿಲ್ಲೆಯ ಕಡಿಯಾಳಿ ಯು. ಕಮಲಾ ಬಾಯಿ ಪ್ರೌಢಶಾಲೆ, ಆದಿ ಉಡುಪಿ ಪ್ರೌಢಶಾಲೆ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ವಳಕಾಡು ಸರ್ಕಾರಿ ಪ್ರೌಢಶಾಲೆ, ಕ್ರಿಶ್ಚಿಯನ್ ಪ್ರೌಢಶಾಲೆ ಹಾಗೂ ಕುಂಜಿಬೆಟ್ಟು ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಮೌಲ್ಯಮಾಪನ ಮುಗಿದು ಪ್ರಶ್ನೋತ್ತರ ಪತ್ರಿಕೆಗಳನ್ನು ಬೆಂಗಳೂರು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ಸಾಗಿಸುವವರೆಗೆ, ಸಂಬಂಧಿಸಿದ ಮೌಲ್ಯಮಾಪನ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯ ದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ನಿಗದಿ ಪಡಿಸಿದ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ ೨೦೦ ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ,೧೪೪(೧) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.