ಸೆ.23ರಿಂದ 25ರ ವರೆಗೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

Update: 2022-04-23 14:58 GMT
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಬೆಂಗಳೂರು, ಎ. 23: ಹಾವೇರಿಯಲ್ಲಿ ಸೆಪ್ಟೆಂಬರ್ 23ರಿಂದ ಮೂರು ದಿನಗಳ ಕಾಲ 86ನೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಸಮ್ಮೇಳನದ ಗೋಷ್ಠಿಗಳಲ್ಲಿ ಹೆಚ್ಚಿನ ಜನರು ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲ ತಾಲೂಕುಗಳ ಸ್ವಯಂಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. 

ಸೂಕ್ತ ವಸತಿ ವ್ಯವಸ್ಥೆ: ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ವಸತಿ ವ್ಯವಸ್ಥೆಯಾಗಬೇಕು. ಎಲ್ಲಿ, ಎಷ್ಟು ಜನರಿಗೆ ವಸತಿ ವ್ಯವಸ್ಥೆಯಾಗಿದೆ ಎಂಬ ಬಗ್ಗೆ ನಿಖರವಾಗಿ ಯೋಚಿಸಿ. ಹಾಸ್ಟೆಲ್‍ಗಳು ಮತ್ತು ಡಾರ್ಮಿಟರಿಗಳನ್ನು ವಸತಿ ಶಾಲೆಗಳನ್ನು ಸದುಪಯೋಗಿಸಿಕೊಳ್ಳಬೇಕು. ಪ್ರಮುಖ ಕಲ್ಯಾಣ ಮಂಟಪಗಳನ್ನು ಗುರುತಿಸಿ ಎಂದು ಅವರು ನಿರ್ದೇಶನ ನೀಡಿದರು.

‘ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿಯೂ ವಸತಿಗೆ ವ್ಯವಸ್ಥೆ ಕಲ್ಪಿಸಬೇಕು. ಮಾರ್ಗ ಮಧ್ಯೆಯೂ ಉತ್ತಮ ಹೊಟೇಲ್‍ಗಳಿವೆ, ಖಾಸಗಿ ಶಾಲೆಗಳನ್ನು ಬಳಕೆ ಮಾಡಿಕೊಳ್ಳಬಹುದು. ತುರ್ತು ಪರಿಸ್ಥಿತಿಗಳಲ್ಲಿ ಬಳಕೆ ಮಾಡಲು ಕುಂಭಮೇಳದಲ್ಲಿ ಆಯೋಜಿಸಿದಂತೆ ಟೆಂಟ್‍ಗಳನ್ನು ಉಪಯೋಗಿಸಬಹುದು. ಇವುಗಳ ಬಗ್ಗೆ ಸೂಕ್ತ ನೀಲನಕ್ಷೆ ಸಿದ್ಧಪಡಿಸಬೇಕು ಎಂದು ಅವರು ತಿಳಿಸಿದರು. 

ಸಮ್ಮೇಳನಕ್ಕೆ ಆಗಮಿಸುವವರಿಗೆ ಊಟ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯ ಬಗ್ಗೆಯೂ ಸೂಕ್ತ ಯೋಜನೆಗಳನ್ನು ರೂಪಿಸಬೇಕು. ಸಿದ್ಧತೆಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಮತ್ತೊಂದು ಸಭೆ ಕರೆದು ಅಂತಿಮಗೊಳಿಸುವುದು. ಬಜೆಟ್‍ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಅವರು ವಿವರ ನೀಡಿದರು.

ಪರಿಸರ ಸ್ನೇಹಿ ಸಮ್ಮೇಳನ: ಸಮ್ಮೇಳನವನ್ನು ಪರಿಸರಸ್ನೇಹಿಯಾಗಿಸಲು ಫ್ಲೆಕ್ಸ್ ಗಳ ಬಳಕೆಯನ್ನು ನಿಷೇಧಿಸಿ, ಜಾಹೀರಾತು ಫಲಕಗಳನ್ನು ಬಳಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 

ಸಭೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ್ ಕಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಅರುಣ್ ಕುಮಾರ್ ಪೂಜಾರ್, ನೆಹರು ಒಲೆಕಾರ್, ಪರಿಷತ್ ಸದಸ್ಯ ಸಲೀಂ ಅಹಮದ್, ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಜಿಲ್ಲಾಧಿಕಾರಿ ಡಾ.ಸಂಜಯ ಶೆಟ್ಟೆಣ್ಣವರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News