ಗುಲ್ಬರ್ಗಾ ವಿವಿ ಘಟಿಕೋತ್ಸವ; ಯೆನೆಪೊಯ ಅಬ್ದುಲ್ಲಾ ಕುಂಞಿ ಸೇರಿ 6 ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ 39 ಮತ್ತು 40ನೇ ಘಟಿಕೋತ್ಸವ ಕಾರ್ಯಕ್ರಮ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ಡಾ.ಬಿ.ಅರ್. ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ನಡೆಯಿತು.
39ನೇ ಘಟಿಕೋತ್ಸವದ ಅಂಗವಾಗಿ ಸಮಾಜಕಾರ್ಯ ಕ್ಷೇತ್ರದಲ್ಲಿ ಸಾಧನೆಗೆ ಬೀದರ್ ಜಿಲ್ಲೆಯ ಸಿದ್ದರಾಮ ಶರಣರು (ಬೆಲ್ದಾಳ ಶರಣರು), ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಬೀದರ್ ಜಿಲ್ಲೆಯ ಡಾ. ಬಸವರಾಜ ಜಿ. ಪಾಟೀಲ ಅಷ್ಠೂರ ಹಾಗೂ ವಿಜ್ಞಾನ ಕ್ಷೇತ್ರದಲ್ಲಿನ ಸಾಧನೆಗೆ ಕಲಬುರಗಿ ಜಿಲ್ಲೆಯ ವೇಣುಗೋಪಾಲ ಡಿ. ಹೆರೂರ ಅವರಿಗೆ ರಾಜ್ಯಪಾಲರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
40ನೇ ಘಟಿಕೋತ್ಸವದ ಭಾಗವಾಗಿ ಸಮಾಜಕಾರ್ಯ ಕ್ಷೇತ್ರದಲ್ಲಿ ಸಾಧನೆಗೆ ವಿಜಯಪುರ ಜಿಲ್ಲೆಯ ಗುರಮ್ಮ ಸಿದ್ಧಾರೆಡ್ಡಿ, ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಮಂಗಳೂರು ಮೂಲದ ಯೆನೆಪೊಯ ಅಬ್ದುಲ್ಲಾ ಕುಂಞಿ ಹಾಗೂ ವಿಜ್ಞಾನ ಕ್ಷೇತ್ರದಲ್ಲಿನ ಸಾಧನೆಗೆ ಗೌತಮ್ ರಾಧಾಕೃಷ್ಣ ದೇಸಿರಾಜು ಅವರನ್ನು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿ.ವಿ.ಕುಲಪತಿ ಪ್ರೊ. ದಯಾನಂದ ಅಗಸರ, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ನಿರ್ದೇಶಕ ಪ್ರೊ.ಎಸ್.ಸಿ. ಶರ್ಮಾ ಸೇರಿದಂತೆ ವಿ.ವಿ ಅಡಳಿತ, ಶೈಕ್ಷಣಿಕ ಮಂಡಳಿ ಸದಸ್ಯರು, ಅಧ್ಯಾಪಕ ವರ್ಗ, ವಿದ್ಯಾರ್ಥಿಗಳು ಇದ್ದರು.