ಶಿವಮೊಗ್ಗ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಮೇ 10ರಂದು ಕಾಂಗ್ರೆಸ್ ಪ್ರತಿಭಟನೆ

Update: 2022-05-08 15:58 GMT

ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಮೇ 10ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ಅಶೋಕ ವೃತ್ತದಿಂದ ಪ್ರತಿಭಟನಾ ರಾ್ಯಲಿ ಆರಂಭವಾಗುತ್ತದೆ. ಬಿ.ಹೆಚ್. ರಸ್ತೆ, ನೆಹರೂ ರಸ್ತೆ, ಗೋಪಿ ವೃತ್ತದ ಮೂಲಕ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಭೋವಿ ಸಮುದಾಯ ಭವನದ ಮುಂದಿನ ರಸ್ತೆಯಲ್ಲಿ ಸುಮಾರು 2 ಗಂಟೆ ಕಾಲ ಬಹಿರಂಗ ಸಭೆ ನಡೆಸಲಾಗುತ್ತದೆ ಎಂದರು.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಧ್ರುವನಾರಾಯಣ ಸೇರಿದಂತೆ ಜಿಲ್ಲೆಯ ಎಲ್ಲಾ ಮುಖಂಡು ಪಾಲ್ಗೊಳ್ಳಲಿದ್ದಾರೆ. ಬ್ಲಾಕ್ ಹಾಗೂ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಭೆಗೆ ಆಹ್ವಾನಿಸಲಾಗಿದೆ. ಇದು ಜಿಲ್ಲಾ ಮಟ್ಟದ ಕೊನೆಯ ಸಮಾವೇಶವಾಗಿದೆ. ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತದೆ ಎಂದರು.

ಡಿಜಿಟಲ್ ಸದಸ್ಯತ್ವ ಅಭಿಯಾನದ ಮೂಲಕ ಈಗಾಗಲೇ 1.58 ಲಕ್ಷ ಸದಸ್ಯತ್ವ ಮಾಡಲಾಗಿದೆ. ಸದಸ್ಯತ್ವವನ್ನು 3 ಲಕ್ಷಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಬೇಕಾಗುವಷ್ಟು ಸದಸ್ಯತ್ವ ಮಾಡಲಾಗುತ್ತದೆ ಎಂದು ಹೇಳಿದರು.

ಟೆಂಡರ್‌ನಲ್ಲಿ ಶೇ. 40ರ ಕಮಿಷನ್ ಸರ್ಕಾರ ಎಂಬ ಆರೋಪ ಈ ಸರ್ಕಾರದ ಮೇಲಿದೆ. ಪಿಎಸ್‌ಐ ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಇದು ರಾಜ್ಯದಲ್ಲಿ ನಡೆದ ದೊಡ್ಡ ಹಗರಣವಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳವಾಗುತ್ತಿದ್ದು, ಬಡವರ ಬದುಕು ಇನ್ನಷ್ಟು ಶೋಚನೀಯವಾಗುತ್ತಿದೆ. ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಇದೆಲ್ಲವನ್ನು ಜನರ ಮುಂದಿಟ್ಟು ಸಮಾವೇಶ ನಡೆಸಲಾಗುತ್ತದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಆರ್. ಪ್ರಸನ್ನಕುಮಾರ್, ಮುಖಂಡರಾದ ಎನ್. ರಮೇಶ್, ಕಲಗೋಡು ರತ್ನಾಕರ್, ಎನ್. ರವಿಕುಮಾರ್, ವಿಜಯಕುಮಾರ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News