ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ.ರತ್ನಾಕರ ಸಿ.ಕುನುಗೋಡು ಕವನ ಸಂಕಲನ ಆಯ್ಕೆ

Update: 2022-05-09 13:36 GMT
ಡಾ.ರತ್ನಾಕರ

ಉಡುಪಿ : ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ನೀಡುವ  ಕಡೆಂಗೋಡ್ಲು ಕಾವ್ಯ ಪ್ರಶಸ್ತಿ-೨೦೨೨  ಲೇಖಕ, ಕವಿ ಡಾ.ರತ್ನಾಕರ ಸಿ. ಕುನುಗೋಡು ಅವರಿಗೆ ಲಭಿಸಿದೆ. ಪ್ರಶಸ್ತಿಯು ೧೦,೦೦೦ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ.

ಪ್ರಶಸ್ತಿ ಆಯ್ಕೆ ಸಮಿತಿಯು ಡಾ.ರತ್ನಾಕರ ಸಿ. ಕುನುಗೋಡು ಅವರ ‘ಎದೆನೆಲದ ಕಾವು’ ಅಪ್ರಕಟಿತ ಕವನ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕವಿ, ಕಾದಂಬರಿಕಾರ, ನಾಟಕಕಾರ, ಕಥೆಗಾರ, ಪತ್ರಿಕೋದ್ಯಮಿ ಯಾಗಿ ಕನ್ನಡ ಸಾರಸ್ವತ ಲೋಕದಲ್ಲಿ ಬೆಳಗಿದ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ. ರತ್ನಾಕರ ಸಿ.ಕುನುಗೋಡು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಎರೆಕೊಪ್ಪದವರು. ಇವರು ಶಿಕ್ಷಕರಾಗಿ, ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಸ್ತುತ ಕನ್ನಡ ಸಹಾಯಕ ಪ್ರಾಧ್ಯಾಪಕ ರಾಗಿ ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸಾಹಿತ್ಯ, ರಂಗಭೂಮಿ, ಸಂಘಟನೆ, ಸಾಮಾಜಿಕ ಪರಿವರ್ತನೆಗಳತ್ತ ಒಲವು ಮೂಡಿಸಿಕೊಂಡು ಕ್ರಿಯಾಶೀಲರಾ ಗಿದ್ದಾರೆ. ಕತೆ ಮತ್ತು ಸಂಶೋಧನಾ ಲೇಖನಗಳ ಬರಹಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News