ದಿಲ್ಲಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅನಾಹುತ: ಮೃತರ ಸಂಖ್ಯೆ 27ಕ್ಕೇರಿಕೆ, ಇಬ್ಬರ ಬಂಧನ

Update: 2022-05-14 05:28 GMT
Photo: PTI

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಮುಂಡ್ಕಾ ಪ್ರದೇಶದಲ್ಲಿರುವ  ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ  ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಹಾಗೂ  12 ಮಂದಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದ್ದು ಕಟ್ಟಡದ ಮಾಲಿಕ ಪರಾರಿಯಾಗಿದ್ದಾನೆ ಎಂದು NDTV ವರದಿ ಮಾಡಿದೆ.

ಕಂಪನಿಯ ಮಾಲಿಕರಾದ ಹರೀಶ್ ಗೋಯೆಲ್  ಹಾಗೂ  ವರುಣ್ ಗೋಯೆಲ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರಲ್ಲಿ ಈ ಇಬ್ಬರ  ತಂದೆ ಅಮರನಾಥ್ ಗೋಯೆಲ್ ಕೂಡ ಸೇರಿದ್ದಾರೆ. ಅಗ್ನಿಶಾಮಕ ಇಲಾಖೆಯಿಂದ ಸುರಕ್ಷತಾ ಅನುಮತಿ ಪಡೆಯದ ಕಟ್ಟಡದ ಮಾಲಿಕರನ್ನು ಮನೀಶ್ ಲಾಕ್ರಾ ಎಂದು ಗುರುತಿಸಲಾಗಿದ್ದು, ಲಾಕ್ರಾ  ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರ ಗುರುತಿನ ಬಗ್ಗೆ ಪೊಲೀಸರು ಇನ್ನಷ್ಟೇ  ವಿವರಗಳನ್ನು ಹಂಚಿಕೊಳ್ಳಬೇಕಾಗಿದೆ. ಗಾಯಾಳುಗಳನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಿಂದ ಕನಿಷ್ಠ 50 ಜನರನ್ನು ರಕ್ಷಿಸಲಾಗಿದೆ ಹಾಗೂ  ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಈಗ ನಡೆಯುತ್ತಿರುವ ಶೋಧ ಕಾರ್ಯಾಚರಣೆಯು ಮುಂದಿನ 3 ರಿಂದ 4 ಗಂಟೆಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News