ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದಿಂದ ಪುಸ್ತಕ ವಿತರಣೆ
ಮಂಗಳೂರು: ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದರಿಂದ ಮನುಷ್ಯನ ಮುಂದಿನ ಜೀವನಕ್ಕೆ ದಾರಿ ತೋರಿದಂತಾಗು ತ್ತದೆ, ಹಾಗಾಗಿ ಅನ್ನದಾನಕ್ಕಿಂತಲೂ ವಿದ್ಯಾದಾನ ಮಹತ್ವದ್ದಾಗಿದೆ ಎಂದು ರಾಜ್ಯ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್ ಹೇಳಿದರು.
ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ವತಿಯಿಂದ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇತರ ಮೀನುಗಾರಿಕಾ ಸಂಘಗಳಿಗಿಂತಲೂ ವೇಗವಾಗಿ ಅಭಿವೃದ್ಧಿ ಕಂಡಿರುವ ಅಲ್ಪಸಂಖ್ಯಾತ ಮೀನುಗಾರರ ಸಂಘ ದ.ಕ. ಜಿಲ್ಲೆಯಲ್ಲಿ ಮೀನು ರಫ್ತು ಘಟಕ ಸ್ಥಾಪನೆಗೆ ಯೋಜನೆ ರೂಪಿಸಿದರೆ ಕರಾವಳಿ ಮೀನುಗಾರರಿಗೆ ಅನುಕೂಲವಾಗುತ್ತದೆ ಎಂದು ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.
ಸಂಘದ ಅಧ್ಯಕ್ಷ ಜೆ.ಮಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ತಾಪಂ ಮಾಜಿ ಸದಸ್ಯ ಮುಹಮ್ಮದ್ ಮುಸ್ತಫಾ ಮಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭ ಸಂಘದ ಉಪಾಧ್ಯಕ್ಷ ಅಹ್ಮದ್ ಬಾವಾ ಬಜಾಲ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಬ್ದುಲ್ಲತೀಫ್, ನಿರ್ದೇಶಕರಾದ ಯು.ಟಿ.ಅಹ್ಮದ್ ಶರೀಫ್, ಬಿ.ಇಬ್ರಾಹಿಂ, ಮುಹಮ್ಮದ್ ಅಶ್ರಫ್, ಎಂ.ಎ. ಗಫೂರ್, ಎಸ್.ಕೆ.ಇಸ್ಮಾಯಿಲ್, ಎಸ್.ಎಂ.ಇಬ್ರಾಹಿಂ, ಟಿ.ಎಚ್.ಹಮೀದ್, ಸೂದತ್, ಬಿ.ಮುಹಮ್ಮದ್ ಶಾಲಿ, ಎ.ಎಂ.ಕೆ.ಮುಹಮ್ಮದ್ ಇಬ್ರಾಹಿಂ, ಬಿ.ಕೆ.ರಝಿಯಾ ಉಪಸ್ಥಿತರಿದ್ದರು.