ಹೆಬ್ಬಾಳ | ಬಸ್ ನಿಲ್ದಾಣದಲ್ಲಿ ಜಾಹೀರಾತು ಫಲಕಕ್ಕೆ ಅಳವಡಿಸಿದ್ದ ವಿದ್ಯುತ್ ವೈರ್ ತಗಲಿ ಯುವಕ ಮೃತ್ಯು

Update: 2022-05-15 07:54 GMT

ಬೆಂಗಳೂರು, ಮೇ 15: ಬಸ್ ನಿಲ್ದಾಣಕ್ಕೆ ಅಳವಡಿಸಿದ್ದ ಜಾಹೀರಾತು ಫಲಕದ ಮೆಟಲ್ ಬೋರ್ಡ್ ಗೆ ವಿದ್ಯುತ್ ತಂತಿ ತಗಲಿದ್ದು, ಅದನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ ಯುವಕನೋರ್ವ ಮೃತಪಟ್ಟ ಘಟನೆ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಈ ಕುರಿತು ಹೆಬ್ಬಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸುಮಾರು 30 ವರ್ಷ ವಯಸ್ಸಿನ ವ್ಯಕ್ತಿ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದು, ನಿನ್ನೆ ರಾತ್ರಿ ಸುಮಾರು 9:30ರ ಸುಮಾರಿಗೆ ಬಸ್ ನಿಲ್ದಾಣದಲ್ಲಿ   ಕುಳಿತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಟೈಮ್ಸ್ ಇನೋವೇಟಿವ್ ಮೀಡಿಯಾ ಹೆಸರಿನ ಖಾಸಗಿ ಜಾಹೀರಾತು ಕಂಪೆನಿಯೊಂದು ಬಸ್ ನಿಲ್ದಾಣದ ಸಮೀಪದ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಜಾಹೀರಾತು ಫಲಕ ಅಳವಡಿಸಿದೆ. ಇಂತಹ ಜಾಹೀರಾತು ಫಲಕದ ಮೆಟಲ್ ವೈರ್ ಸಂಪರ್ಕಕ್ಕೆ ಬಂದು ಯುವಕ ಮೃತಪಟ್ಟಿದ್ದಾನೆ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು ಫಲಕಕ್ಕೆ ನೀಡಿದ್ದ ವಿದ್ಯುತ್  ಸಂಪರ್ಕವನ್ನು ಡಿಸೆಂಬರ್ 2020ರಲ್ಲಿ ಸ್ಥಗಿತಗೊಳಿಸಲಾಗಿತ್ತು. ಆದರೆ ಇತ್ತೀಚೆಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದು ಜಾಹೀರಾತು ಫಲಕವನ್ನು ಸಂಸ್ಥೆ ಅಳವಡಿಸಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಬೆಸ್ಕಾಂ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿದ್ಯುತ್ ಅವಘಡ ಬೆಸ್ಕಾಂ ನಿರ್ಲಕ್ಷ್ಯದಿಂದ ಆಗಿಲ್ಲ. ಅಕ್ರಮ ವಿದ್ಯುತ್ ಸಂಪರ್ಕ ಪಡೆದಿರುವ ಖಾಸಗಿ ಜಾಹೀರಾತು ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು  ಹೆಬ್ಬಾಳ ವಿಭಾಗದ ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಬೆಸ್ಕಾಂನ ವಿಚಕ್ಷಣ ದಳದ ಅಧಿಕಾರಿಗಳು ಖಾಸಗಿ ಜಾಹೀರಾತು ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಿದ್ದಾರೆ ಎಂದು ಬೆಸ್ಕಾಂ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News