ಕೊಲ್ಲೂರು: ನೂತನ ಪ್ರವಾಸಿ ಮಂದಿರ ಉದ್ಘಾಟನೆ

Update: 2022-05-16 16:16 GMT

ಕೊಲ್ಲೂರು : ನಾಡಿನ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿಗೆ ಆಗಮಿಸುವ ಭಕ್ತರು ಹಾಗೂ ಪ್ರವಾಸಿ ಗರಿಗೆ ಅನುಕೂಲ ವಾಗುವಂತೆ  ಲೋಕೋಪಯೋಗಿ ಇಲಾಖೆ ಸುಮಾರು ಒಂದೂವರೆ ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ನೂತನ, ಸುಸಜ್ಜಿತ ಪ್ರವಾಸಿ ಮಂದಿರವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೋಮವಾರ ಇಲ್ಲಿ ಉದ್ಘಾಟಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರ್ವಜನಿಕರ ಅನುಕೂಲಕ್ಕಾಗಿ ದೂರದೃಷ್ಟಿಯನ್ನಿಟ್ಟುಕೊಂಡು ಯಾವುದೇ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಗೊಳಿಸಿದಲ್ಲಿ ಸಾರ್ವಜನಿಕರಿಗೆ ಇದರಿಂದ ಹೆಚ್ಚಿನ ಅನುಕೂಲ ವಾಗಲಿದೆ. ಗ್ರಾಮೀಣ ರಸ್ತೆಗಳ ನಿರ್ಮಾಣ, ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ, ಕಿಂಡಿ ಅಣೆಕಟ್ಟುಗಳ ನಿರ್ಮಾಣದಂತಹ ಯೋಜನೆಗಳಿಂದ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಕೊಲ್ಲೂರು ಶ್ರೀಮೂಕಾಂಬಿಕೆಯ ದರ್ಶನಕ್ಕಾಗಿ ದೇಶಾದ್ಯಂತದಿಂದ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಕೊಲ್ಲೂರಿನಲ್ಲಿ ಕುಡಿಯುವ ನೀರಿನ ಸೌಲಭ್ಯ ಹಾಗೂ ಒಳಚರಂಡಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು. 

ಮೀನುಗಾರಿಕೆಯನ್ನು ಲಾಭದಾಯಕವನ್ನಾಗಿ ಮಾಡಲು ಮೀನುಗಾರರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಮೀನಿನ ಗುಣಮಟ್ಟ ಕಾಪಾಡಲು ಅಗತ್ಯವಿರುವ ಶೀತಲೀಕರಣ ವ್ಯವಸ್ಥೆ ಯೊಂದಿಗೆ, ಮೀನುಗಳು ಸಾಗಾಟಕ್ಕೆ ಶೀತಲೀಕೃತ ವಾಹನಗಳನ್ನು ಒದಗಿಸಲಾಗುತ್ತಿದೆ ಎಂದು ಅಂಗಾರ ತಿಳಿಸಿದರು. 

ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ,  ಕೊಲ್ಲೂರಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕ ಗೊಳ್ಳುತಿದ್ದು, ಭಕ್ತಾಧಿಗಳಿಗೆ ಹೆಚ್ಚಿನ ಸಂಖ್ಯೆಯ ವಸತಿ ಸೌಲಭ್ಯ ಒದಗಿಸಲು ಪ್ರಸ್ತುತ ನಿರ್ಮಿಸಿರುವ ಹೊಸ ಪ್ರವಾಸಿ ಮಂದಿರದ ಜೊತೆಗೆ, ಈಗಾಗಲೇ  ಇರುವ ಹಳೆಯ ಪ್ರವಾಸಿ ಮಂದಿರವನ್ನು ತೆರವುಗೊಳಿಸಿ ಆ ಪ್ರದೇಶದಲ್ಲಿ ಸುಸಜ್ಜಿತ ಹೊಸ ಪ್ರವಾಸಿ ಮಂದಿರ ನಿರ್ಮಾಣ ಮಾಡಲು ಈಗಾಗಲೇ ೯.೮೦ ಕೋಟಿ ರೂ ಮಂಜೂರಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಅರಂಭಗೊಳ್ಳಲಿದೆ ಎಂದರು.

ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ  ಗುಣಮಟ್ಟದ ಕಾಮಗಾರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು, ಕಳೆಪ ಕಾಮಗಾರಿ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕುಡಿಯುವ ನೀರಿನ ಯೋಜನೆಯೂ ಶೀಘ್ರದಲ್ಲಿ ಪೂರ್ಣ ಗೊಳ್ಳಲಿದೆ ಎಂದರು.

ಕೊಲ್ಲೂರು ಗ್ರಾಪಂ ಅಧ್ಯಕ್ಷ ಶಿವರಾಮಕೃಷ್ಣ ಭಟ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ,, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ವಿ. ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕುಂದಾಪುರ ಲೋಕೋಪಯೋಗಿ ಇಲಾಖೆಯ ವಿಜೇತ್‌ಕುಮಾರ್ ಅತಿಥಿ ಗಳನ್ನು ಸ್ವಾಗತಿಸಿದರೆ, ಕುಂದಾಪುರ ಪಿಡಬ್ಲ್ಯುಡಿ ಇಲಾಖೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ದುರ್ಗಾದಾಸ್ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News