ಲಾಲು ಪ್ರಸಾದ್ ಯಾದವ್ ವಿರುದ್ಧ ಹೊಸ ಭ್ರಷ್ಟಾಚಾರ ಪ್ರಕರಣ ದಾಖಲು; 17 ಸ್ಥಳಗಳಲ್ಲಿ ಸಿಬಿಐ ದಾಳಿ
Update: 2022-05-20 04:55 GMT
ಹೊಸದಿಲ್ಲಿ: ಮೇವು ಹಗರಣದಲ್ಲಿ ಇತ್ತೀಚೆಗಷ್ಟೇ ಜಾಮೀನು ಪಡೆದಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದ್ದು, ಅವರಿಗೆ ಸಂಬಂಧಿಸಿದ 17ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಸಂದರ್ಭ ಲಾಲು ಪ್ರಸಾದ್ ಭ್ರಷ್ಟಾಚಾರ ಎಸೆಗಿದ್ದಾರೆ ಎಂದು ಆರೋಪಿಸಲಾಗಿದೆ. ರೈಲ್ವೆ ಇಲಾಖೆಯ ಉದ್ಯೋಗಕ್ಕಾಗಿ ಆಕಾಂಕ್ಷಿಗಳಿಂದ ನಿರ್ದಿಷ್ಟ ಭೂಮಿ ಅಥವಾ ನಿವೇಶನಗಳನ್ನು ಪಡೆಯಲಾಗಿದೆ ಎಂಬ ಆರೋಪದಲ್ಲಿ ಲಾಲು ಪ್ರಸಾದ್ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ.
ಶುಕ್ರವಾರ ಲಾಲು ಪ್ರಸಾದ್ ಹಾಗೂ ಕುಟುಂಬಸ್ಥರಿಗೆ ಸಂಬಂಧಿಸಿದ ಬಿಹಾರ, ದಿಲ್ಲಿಯ ವಿವಿಧ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.