ಉಜಿರೆ | ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ನಿಧನ

Update: 2022-05-23 04:55 GMT

ಬೆಳ್ತಂಗಡಿ, ಮೇ 23: ಉಜಿರೆಯ ಎಸ್.ಡಿ.ಎಂ. ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ(66) ಅನಾರೋಗ್ಯದಿಂದ ರವಿವಾರ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಬಿ.ಯಶೋವರ್ಮ ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ತೆರಳಿದ್ದರು. ಚಿಕಿತ್ಸೆ ಫಲಿಸದೆ ಅಲ್ಲಿನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ.ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.

ನಳಿನ್‍ಕುಮಾರ್ ಕಟೀಲು ಸಂತಾಪ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಡಾ.ಯಶೋವರ್ಮ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲು ತೀವ್ರ ಸಂತಾಪ ಸೂಚಿಸಿದ್ದಾರೆ.

ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷ ಅವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ. ದುಃಖತಪ್ತ ಕುಟುಂಬ, ಶಿಷ್ಯರು ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News