ಮಳಲಿ ವಿವಾದ; ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡಲ್ಲ: ಎಡಿಜಿಪಿ ಅಲೋಕ್ ಕುಮಾರ್

Update: 2022-05-26 05:03 GMT

ಮಂಗಳೂರು, ಮೇ 26: ಮಳಲಿಯಲ್ಲಿ ಹುಟ್ಟಿಕೊಂಡಿರುವ ವಿವಾದಕ್ಕೆ ಸಂಬಂಧಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡುವುದಿಲ್ಲ ಎಂದು ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಹೇಳಿದ್ದಾರೆ.

ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿ ಮಂಗಳೂರಿಗೆ ಆಗಮಿಸಿರುವ ಅವರು ಇಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆಗೆ ಮುನ್ನ ಸುದ್ದಿಗಾರರ ಜತೆ ಮಾತನಾಡಿದರು.

ಮಳಲಿ ವಿಚಾರ ಸದ್ಯ ನ್ಯಾಯಾಲಯದಲ್ಲಿದೆ. ಜೂನ್ 3ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯ ಆದೇಶಿಸಿದೆ . ಆ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗಿದೆ ಎಂದವರು ಹೇಳಿದರು.

ಮಂಗಳೂರು ಸೂಕ್ಷ್ಮ ಪ್ರದೇಶ. ಒಂದು ವರ್ಷದಲ್ಲಿ ಚುನಾವಣೆಯೂ ಇದೆ. ಈ ಬಗ್ಗೆ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು ಮಂಗಳೂರು ಪೊಲೀಸರು ಅಗತ್ಯ ಕ್ರಮ ವಹಿಸಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜತೆಗೆ ಕರಾವಳಿಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿಗಳಾದ ಹರಿರಾಂ ಶಂಕರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News