2,659.75 ಎಕರೆ ಜಮೀನು ಪಡೆದಿದ್ದ ಆರ್ಸೆಲರ್ ಮಿತ್ತಲ್ ಕಂಪೆನಿ ರಾಜ್ಯದಲ್ಲಿ ಯಾವುದೇ ಘಟಕವನ್ನೂ ಸ್ಥಾಪಿಸಿಲ್ಲ

Update: 2022-05-28 03:04 GMT

ಬೆಂಗಳೂರು: 12 ವರ್ಷಗಳ ಹಿಂದೆಯೇ ನಡೆದಿದ್ದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 30 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದ ಮಾಡಿಕೊಂಡು 2,659.75 ಎಕರೆ ಜಮೀನು ಹಂಚಿಕೆ ಮಾಡಿಸಿಕೊಂಡಿದ್ದ ಆರ್ಸೆಲರ್ ಮಿತ್ತಲ್ ಕಂಪೆನಿಯು ಇದುವರೆಗೂ ಒಂದೇ ಒಂದು ಘಟಕವನ್ನೂ ರಾಜ್ಯದಲ್ಲಿ ಸ್ಥಾಪಿಸಿಲ್ಲ.

ಆದರೀಗ ದಾವೋಸ್‌ನಲ್ಲಿ ನಡೆದ ಬಂಡವಾಳ ಆಕರ್ಷಿಸುವ ಸಮಾವೇಶದಲ್ಲಿ ಭಾಗವಹಿಸಿದ್ದ ಆರ್ಸೆಲರ್ ಮಿತ್ತಲ್ ಕಂಪೆನಿಯು ಸೌರ-ವಾಯು ಹೈಬ್ರಿಡ್ ಯೋಜನೆಗೆ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ 6,000 ಕೋಟಿ ರೂ. ಹೂಡಿಕ ಮಾಡಲಿದೆ ಎಂದು ಬಸವರಾಜ ಬೊಮ್ಮಾಯಿ ಮತ್ತು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಭರ್ಜರಿ ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ.

12 ವರ್ಷಗಳಾದರೂ ಕೈಗಾರಿಕೆ ಸ್ಥಾಪನೆ ಮಾಡದ ಮಿತ್ತೆಲ್ ಕಂಪೆನಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ನೋಟೀಸ್ ನೀಡಿತ್ತು. ಈ ಕಂಪೆನಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಸರಕಾರವು ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ 6,000 ಕೋಟಿ ರೂ. ಬಂಡವಾಳ ಹೂಡಲು ಇದೇ ಮಿತ್ತಲ್ ಕಂಪೆನಿಯೊಂದಿಗೆ ಮತ್ತೊಂದು ಒಪ್ಪಂದ ಮಾಡಿಕೊಂಡಿರುವುದು ಅಚ್ಚರಿ ಮೂಡಿಸಿದೆ.

2010ರಲ್ಲಿ ನಡೆದಿದ್ದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (ಜಿಮ್) ವೇಳೆ ಬಳ್ಳಾರಿಯಲ್ಲಿ 30 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಆರ್ಸೆಲರ್ ಮಿತ್ತಲ್ ಇಂಡಿಯಾ ಲಿಮಿಟೆಡ್ ಕಂಪೆನಿ ಸಹಿ ಮಾಡಿತ್ತು. 6 ಮಿಲಿಯನ್ ಟನ್ ಕಬ್ಬಿಣ ಉತ್ಪಾದಿಸುವ ಕೈಗಾರಿಕೆ ಸ್ಥಾಪನೆಗೆ ಒಪ್ಪಂದ ಮಾಡಿಕೊಂಡಿತ್ತು. ನಂತರ ಈ ಉದ್ದೇಶದಿಂದ ಹಿಂದೆ ಸರಿದಿದ್ದ ಈ ಕಂಪೆನಿಯು ಜಮೀನು ಹಂಚಿಕೆಯಾದ ನಂತರ ಕೆಲವು ಕಾರಣಗಳನ್ನು ಮುಂದಿಟ್ಟಿತ್ತು. ಸೋಲಾರ್ ಪ್ಲಾಂಟ್ ಸ್ಥಾಪನೆಗೆ ಅವಕಾಶ ನೀಡುವಂತೆ ರಾಜ್ಯ ಸರಕಾರಕ್ಕೆ ಕೋರಿತ್ತು. ಕಬ್ಬಿಣ ಉತ್ಪಾದಿಸುವ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಈ ಕಂಪೆನಿ ಇದ್ದಕ್ಕಿದ್ದಂತೆ ಹಿಂದಕ್ಕೆ ಸರಿದು ಸೋಲಾರ್ ಪವರ್ ಘಟಕಗಳನ್ನು ಉತ್ಪಾದಿಸಲು ಕೋರಿತ್ತಾದರೂ ಇದುವರೆಗೂ ಅನುಷ್ಠಾನಕ್ಕೆ ತಂದಿಲ್ಲ.

 ಉಕ್ಕು ಉತ್ಪಾದನಾ ಘಟಕ ಆರಂಭಿಸಲು ಬಳ್ಳಾರಿಯ ಸಂಡೂರು ತಾಲೂಕಿನ ಕುಡಿತಿನಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಆರ್ಸೆಲರ್ ಮಿತ್ತಲ್ ಇಂಡಿಯಾ ಲಿಮಿಟೆಡ್‌ಗೆ 2,659.75 ಎಕರೆ ಹಂಚಿಕೆಯಾಗಿತ್ತು. ಹಂಚಿಕೆಯಾದ 8 ವರ್ಷದ ಬಳಿಕ ಆರ್ಸೆಲರ್ ಮಿತ್ತಲ್ ಕಂಪೆನಿಯು 2018ರಲ್ಲಿ ಗುತ್ತಿಗೆ ಕರಾರು ಪತ್ರ ಮಾಡಿಕೊಂಡಿತ್ತು. ಆದರೂ ಉದ್ದೇಶಿತ ಯೋಜನೆ ಅನುಷ್ಠಾನಗೊಳಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.

ಮಿತ್ತಲ್ ಕಂಪೆನಿಯ ಧೋರಣೆಯಿಂದ 10 ಸಾವಿರ ಜನರ ಉದ್ಯೋಗದ ಕನಸು ಕಮರಿ ಹೋಗಿತ್ತು. ಆರ್ಸೆಲರ್ ಮಿತ್ತಲ್ ಉಕ್ಕಿನ ಕಾರ್ಖಾನೆಗೆ ವಶಪಡಿಸಿಕೊಂಡ ಜಮೀನಿನಲ್ಲಿ ಉಕ್ಕಿನ ಕಾರ್ಖಾನೆ ಸ್ಥಾಪನೆಯಾಗದೇ, ಈ ಜಮೀನುಗಳಲ್ಲಿ ಸೌರವಿದ್ಯುತ್ ಘಟಕ ಸ್ಥಾಪನೆ ಮಾಡಲು ಮಿತ್ತಲ್ ಸಂಸ್ಥೆ ಸರಕಾರದೊಡನೆ ನಡೆಸಿದ್ದ ಮಾತುಕತೆಗೆ ಭೂ ಸಂತ್ರಸ್ತರ ವಿರೋಧವಿತ್ತು.

50,000 ಕೋಟಿ ರೂ. ಮೊತ್ತದೊಂದಿಗೆ ಎಸ್ಸಾರ್ ಕಂಪೆನಿಯನ್ನು ಸ್ವಾಧೀನಪಡಿಸಿಕೊಂಡಿದ್ದ ಜಾಗತಿಕ ದೈತ್ಯ ಉಕ್ಕಿನ ಕಂಪೆನಿ ಆರ್ಸೆಲರ್ ಮಿತ್ತಲ್, ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಉಕ್ಕು ಯೋಜ ನೆಗಳನ್ನು ವಿಸ್ತರಿಸಲು ಯೋಜಿಸಿತ್ತು. ಆದರೆ ಕರ್ನಾಟಕದಲ್ಲಿ ಉದ್ದೇಶಿತ ಕೈಗಾರಿಕೆಯನ್ನು ಈವರೆವಿಗೂ ಸ್ಥಾಪಿಸಲು ಯಾವುದೇ ಕ್ರಮಕೈಗೊಂಡಿಲ್ಲ ಎಂದುಗೊತ್ತಾಗಿದೆ.

ಇದಲ್ಲದೇ ಉತ್ತಮ್ ಗಾಲ್ವಾ ಫೆರೋಸ್ ಲಿಮಿಟೆಡ್‌ಗೆ 4,877.81 ಎಕರೆ ಜಮೀನನ್ನು ಕೈಗಾರಿಕೆ ನಿರ್ಮಾಣ ಉದ್ಧೇಶಕ್ಕೆ ಜಮೀನು ಹಂಚಿಕೆ ಮಾಡಿತ್ತು. ಉತ್ತಮ್ ಗಾಲ್ವಾ ಫೆರೋಸ್ ಲಿಮಿಟೆಡ್ 2017ರಲ್ಲಿ ಗುತ್ತಿಗೆ ಕರಾರು ಪ್ರಕ್ರಿಯೆ ಪೂರ್ಣಗೊಳಿಸಿತ್ತು. ಈ ಪ್ರಕ್ರಿಯೆ ನಡೆದು 5 ವರ್ಷಗಳಾದರೂ ಯೋಜನೆಯನ್ನು ಅನುಷ್ಠಾನಗೊಳಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.

ಸಾವಿರಾರು ಎಕರೆ ಜಮೀನಿನಲ್ಲಿ ಉದ್ದೇಶಿತ ಯೋಜನೆಯನ್ನು ಅನುಷ್ಠಾನಗೊಳಿಸಲು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಈ ಎರಡೂ ಕಂಪೆನಿಗಳಿಗೆ 2020ರ ನವೆಂಬರ್ 27ರಂದು ತಿಳಿವಳಿಕೆ ನೋಟಿಸ್ ಜಾರಿಗೊಳಿಸಿತ್ತು.

 2010ರ ಸಮಾವೇಶದಲ್ಲಿ 36 ಸಾವಿರ ಕೋಟಿ ರೂ. ಬಂಡವಾಳ ಹೂಡುವುದಾಗಿ ಘೋಷಿಸಿದ್ದ ರೆಡ್ಡಿ ಸೋದರರ ಒಡೆತನದ ಬ್ರಹ್ಮಿನಿ ಇಂಡಸ್ಟ್ರೀಸ್ ಕರ್ನಾಟಕ ಲಿಮಿಟೆಡ್ ಕಂಪೆನಿಯು ಹಂಚಿಕೆ ಮಾಡಿಸಿಕೊಂಡಿದ್ದ ಜಮೀನನ್ನು ಉತ್ತಮ್ ಗಾಲ್ವಾ ಫೆರೋಸ್ ಲಿಮಿಟೆಡ್‌ಗೆ ಅಕ್ರಮವಾಗಿ ಮಾರಾಟ ಮಾಡಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಆ ಕಂಪೆನಿಯು ಕೂಡ ಕಾರ್ಖಾನೆ ಸ್ಥಾಪನೆ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಶೆಟ್ಟರ್ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

6 ಮಿಲಿಯನ್ ಟನ್ ಕಬ್ಬಿಣ ಉತ್ಪಾದನೆ ಗುರಿ ಮತ್ತು 25 ಸಾವಿರ ಜನರಿಗೆ ಉದ್ಯೋಗ ನೀಡಲು ಒಪ್ಪಂದ ಮಾಡಿಕೊಂಡಿದ್ದ ಬ್ರಹ್ಮಿನಿ ಇಂಡಸ್ಟ್ರೀಸ್ ಕೈಗಾರಿಕೆಯನ್ನೇ ಆರಂಭಿ ಸದೆಯೇ ಉತ್ತಮ್ ಗಾಲ್ವಾ ಕಂಪೆನಿಗೆ ಭೂಮಿಯನ್ನು ಮಾರಾಟ ಮಾಡಿತ್ತು.

ಭೂಸ್ವಾಧೀನ ಕಾಯ್ದೆ-2013ರ ಅನ್ವಯ ಒಂದು ಜಮೀನನ್ನು ವಶಪಡಿಸಿಕೊಂಡ ಐದು ವರ್ಷಗಳಲ್ಲಿ ಉದ್ದೇಶಿತ ಕಾರ್ಖಾನೆ ಸ್ಥಾಪಿಸದೇ ಹೋದಲ್ಲಿ ಅಂತಹ ಜಮೀನನ್ನು ಸಂತ್ರಸ್ತರಿಗೆ ಮರಳಿಸಬೇಕೆಂಬ ನಿಯಮವಿದೆ. ಈಗಾಗಲೇ ಬ್ರಹ್ಮಿನಿ ಮೂಲಕ ಜಮೀನು ವರ್ಗಾವಣೆ ಮಾಡಿಸಿಕೊಂಡಿರುವ ಉತ್ತಮ್ ಗಾಲ್ವಾ ಹಾಗೂ ಆರ್ಸೆಲರ್ ಮಿತ್ತಲ್ ಕಂಪೆನಿಗಳಿಗೆ ಜಮೀನು ವಶಪಡಿಸಿಕೊಂಡು 10 ವರ್ಷಗಳಿಗೂ ಅಧಿಕ ಸಮಯ ಮುಗಿದಿದೆ. ಈವರೆವಿಗೂ ಜಮೀನುಗಳಲ್ಲಿ ಕಾರ್ಖಾನೆ ಸ್ಥಾಪನೆಯಾಗುವ ಲಕ್ಷಣ ಕಂಡುಬರುತ್ತಿಲ್ಲ.

ಜಮೀನು ವಶಪಡಿಸಿಕೊಂಡಿರುವ ಕೆಐಎಡಿಬಿಯು ಜಮೀನುಗಳನ್ನು ತನ್ನ ವಶದಲ್ಲಿಯೇ ಇರಿಸಿಕೊಳ್ಳಲು ಇಚ್ಛಿಸಿದರೆ ಅಂತಹ ಸಂತ್ರಸ್ತ ಕುಟುಂಬಗಳಿಗೆ ನ್ಯಾಯಾಲಯ ನಿಗದಿಪಡಿಸಿದ ಹೆಚ್ಚುವರಿ ಮೊತ್ತವನ್ನು ಸರಕಾರ ನೀಡಬೇಕು. ಒಂದು ವೇಳೆ ವಶಪಡಿಸಿಕೊಂಡ ಜಮೀನುಗಳಲ್ಲಿ ಕಾರ್ಖಾನೆ ಸ್ಥಾಪಿಸಲು ಯಾವುದೇ ಸಂಸ್ಥೆ ಮುಂದಾದರೆ, ಅಲ್ಲಿ ಉದ್ಯಮ ಸ್ಥಾಪನೆಯಾಗಿ, ಸಂತ್ರಸ್ತರ ಕುಟುಂಬಗಳ ಸದಸ್ಯರಿಗೆ ಉದ್ಯೋಗ ದೊರೆಯುವವರೆಗೂ ಮಾಸಿಕ 20 ಸಾವಿರ ರೂ. ಗಳ ನಿರುದ್ಯೋಗ ಭತ್ಯೆ ನೀಡಬೇಕು. ಆದರೆ ಸರಕಾರ ಈ ಬಗ್ಗೆಯೂ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

ಉಕ್ಕು ಕೈಗಾರಿಕೆಗಳ ಸ್ಥಾಪನೆ ಹಾಗೂ ಭೂ ಸಂತ್ರಸ್ತರಿಗೆ ಮತ್ತು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಮಿತ್ತಲ್, ಬ್ರಹ್ಮಿಣಿ ಕಂಪೆನಿಗಳಿಗೆ ಕುಡಿತಿನಿ, ಹರಗಿನಡೋಣಿ, ವೇಣಿವೀರಾಪುರ, ಕೊಳಗಲ್ಲು ಗ್ರಾಮಗಳ 10,500 ಎಕರೆ ಜಮೀನು ನೀಡಿದ ಭೂ ಮಾಲಕರಿಗೆ ನ್ಯಾಯಯುತವಾದ ಪರಿಹಾರ ನೀಡಿರಲಿಲ್ಲ. ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಕಂಪೆನಿಗಳೊಂದಿಗೆ ಶಾಮೀಲಾಗಿ ಭೂ ಬೆಲೆ ನಿಗದಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿತ್ತು ಎಂಬ ಬಲವಾದ ಆರೋಪಗಳಿವೆ.

ಭೂಮಾಲಕರಿಗೆ ವಂಚನೆ

ಬ್ರಹ್ಮಿಣಿ ಕಂಪೆನಿ ಸ್ಥಾಪಿಸಲು ಎಕರೆಗೆ 5ರಿಂದ 8 ಲಕ್ಷ ರೂ.ನಂತೆ ನಿಗದಿಪಡಿಸಿದ್ದರೆ ಮಿತ್ತಲ್ ಕಂಪೆನಿಗೆ ಎಕರೆಗೆ 8ರಿಂದ 12 ಲಕ್ಷ ರೂ.ವರೆಗೂ ನಿಗದಿಪಡಿಸಿ ಭೂಮಾಲಕರನ್ನು ವಂಚಿಸಲಾಗಿತ್ತು. ಒಂದೇ ಕೈಗಾರಿಕೆಗೆ ರಾಜ್ಯದಲ್ಲಿ ಮೊದಲ ಬಾರಿಗೆ 3 ರೀತಿಯ ದರ ನಿಗದಿಪಡಿಸಿ ಭೂಮಾಲಕರನ್ನು ವಂಚಿಸಲಾಗಿತ್ತು.

Writer - ಜಿ.ಮಹಾಂತೇಶ್

contributor

Editor - ಜಿ.ಮಹಾಂತೇಶ್

contributor

Similar News