ತಪ್ಪುಗಳನ್ನು ಸರಿಪಡಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ: ಸಿಎಂಗೆ ಪತ್ರ ಬರೆದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

Update: 2022-06-01 15:21 GMT

ಬೆಂಗಳೂರು, ಜೂ.1: ಪರಿಷ್ಕøತ ಪಠ್ಯದಲ್ಲಿ ಆಗಿರುವ ಈ ಎಲ್ಲ ದೋಷಗಳನ್ನು ಸರಿಪಡಿಸಿ ಮುದ್ರಿಸಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರಕಾರಕ್ಕೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

ಬುಧವಾರ ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಒಕ್ಕೂಟದ ಅಧ್ಯಕ್ಷರೂ ಆದ ಬಾಲ್ಕಿ ಹಿರೇಮಠ ಸಂಸ್ಥಾನದ ಡಾ. ಬಸವಲಿಂಗ ಪಟ್ಟದ್ದೇವರು, ಪ್ರಸಕ್ತ ಸಾಲಿನ 9ನೇ ತರಗತಿಯ 'ಸಮಾಜ ವಿಜ್ಞಾನ' ಪಠ್ಯಪುಸ್ತಕದಲ್ಲಿ ಬಸವಣ್ಣ ಅವರ ಕುರಿತ ಪಾಠದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಪ್ರಕಟಿಸಿರುವುದು ಕುಚೋದ್ಯದ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಮುಖವಾಗಿ ಶೈವ-ಗುರುಗಳ ಸಾನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು ಎಂದು ಬರೆಯಲಾಗಿದೆ. ಇದು ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು. ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು. ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದುದು. ಅವರೇ ಇಷ್ಟಲಿಂಗದ ಜನಕರು. ಅಲ್ಲಮಪ್ರಭುದೇವರಾದಿಯಾಗಿ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. 

‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ' ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ‘ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಿಕೆ ನೀನೆ ರೂಪಾದೆ' ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ ಎಂದು ಪತ್ರದಲ್ಲಿ ಅವರು ವಿವರಿಸಿದ್ದಾರೆ.

ಅದೇ ರೀತಿ, ಬಸವಣ್ಣ ಅವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಈಗ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಕೂಡ ಶುದ್ಧ ತಪ್ಪು. ವೀರಶೈವ ಶೈವದ ಶಾಖೆ. ಅದು ಮತವಿರಬಹುದು, ಈಗ ಅದನ್ನು ಲಿಂಗಾಯತ ಧರ್ಮದ ಒಂದು ಪಂಗಡ ಎಂದು ಹೆಸರಿಸಲಾಗಿದೆ. 

ಸರಕಾರದ ದಾಖಲೆಗಳಲ್ಲಿ ಕ್ರಿ.ಶ.1871ರಿಂದಲೂ ಇದನ್ನು ಕಾಣಬಹುದು. ಆದರೆ ಬಸವಣ್ಣನವರು ಲಿಂಗಾಯತ ಧರ್ಮದ ಸ್ಥಾಪಕರು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಶೈವದಲ್ಲಿ ವರ್ಣಾಶ್ರಮದ ಆಚರಣೆ ಇದೆ. ಲಿಂಗಾಯತರಲ್ಲಿ ವರ್ಣಾಶ್ರಮ ಭೇದಗಳಿಲ್ಲ. ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂಬುದು ಶುದ್ಧ ಅನೈತಿಹಾಸಿಕ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ಪಠ್ಯದಲ್ಲಿದ್ದ ವೈದಿಕ ಧರ್ಮಗಳ ಆಚರಣೆ ನಿರಾಕರಣೆ, ಮಾನವೀಯ ಮೌಲ್ಯಗಳಿಂದ ಕೂಡಿದ ಸಿದ್ಧಾಂತದ ಪ್ರತಿಪಾದನೆ, ಅನಿಷ್ಟ ಪದ್ಧತಿಗಳ ವಿರುದ್ಧದ ಹೋರಾಟ, ಸ್ವಾವಲಂಬನೆ, ದೇಹವೇ ದೇಗುಲ ತತ್ವಗಳ ಬೋಧನೆ ಮುಂತಾದವುಗಳ ಜೊತೆಗೆ ಅವರು ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳುವಳಿಯನ್ನು ಜನಮುಖಿಯಾಗಿಸಿದರು ಎನ್ನುವಂತಹ ಸಾಲುಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಅಷ್ಟೇ ಅಲ್ಲದೆ, ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆಯಲಾಗಿದೆ. ಇದು ತಪ್ಪು. ಬಸವಣ್ಣ ಅವರು ತಮ್ಮ ಸಹೋದರಿ ಅಕ್ಕ ನಾಗಾಯಿಗೆ ಇಲ್ಲದ ಉಪನಯನ ನನಗೇಕೆ? ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋದುದು ಐತಿಹಾಸಿಕ ಸಂಗತಿ ಎಂದು ಪಟ್ಟದ್ದೇವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News