ಬಿಬಿಎಂಪಿ ಚುನಾವಣೆಯಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ರಾಜಕೀಯ ಪ್ರಾತಿನಿಧ್ಯಕ್ಕೆ ಆಗ್ರಹ
Update: 2022-06-16 15:44 GMT
ಬೆಂಗಳೂರು, ಜೂ.16: ಮುಂದಿನ ಬಿಬಿಎಂಪಿ ಚುನಾವಣೆಯಲ್ಲಿ ಸರಕಾರದಿಂದ ನಾಮ ನಿರ್ದೇಶನ ಮಾಡುವ 25 ಸ್ಥಾನಗಳ ಪೈಕಿ 15 ಸ್ಥಾನಗಳನ್ನು ಪೌರಕಾರ್ಮಿಕರ ಮಕ್ಕಳಿಗೆ ಮೀಸಲಿಟ್ಟು ರಾಜಕೀಯ ಪ್ರಾತಿನಿಧ್ಯ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಪೌರಕಾರ್ಮಿಕರ ಪರಿವರ್ತನ ಸಂಘವು ಆಗ್ರಹಿಸಿದೆ.
ಈ ಕುರಿತು ಸಂಘದ ಅಧ್ಯಕ್ಷ ಸಿ.ಎನ್. ಆನಂದ್ ಪ್ರಕಟನೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸುಮಾರು ವರ್ಷಗಳಿಂದ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ರಾಜಕೀಯ ಪ್ರಾತಿನಿಧ್ಯ ಇಲ್ಲಿಯವರೆಗೂ ಸಿಕ್ಕಿರುವುದಿಲ್ಲ. ಪಾಲಿಕೆಯ ಸಾವಿರಾರು ಪೌರಕಾರ್ಮಿಕರು ನಗರದ ಸ್ವಚ್ಛತಾ ಕಾರ್ಯದ ಜೊತೆಗೆ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿರುತ್ತಾರೆ. ತುಳಿತಕ್ಕೆ ಒಳಗಾದ ಕಟ್ಟಕಡೆಯ ಶೋಷಿತರ ವರ್ಗಕ್ಕೆ ನ್ಯಾಯ ಒದಗಿಸಲು ಸರಕಾರ ಸಹಕರಿಸಿ ರಾಜಕೀಯವಾಗಿ ಸ್ಥಾನಮಾನವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.