ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ; ವಿದ್ಯಾರ್ಥಿನಿ ಆತ್ಮಹತ್ಯೆ
Update: 2022-06-18 12:39 GMT
ಮಡಿಕೇರಿ ಜೂ.18 : 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಡಿಮೆ ಅಂಕ ಬಂದ ಹಿನ್ನೆಲೆ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ನಡೆದಿದೆ.
ಹೆರೂರು ನಿವಾಸಿ ನಿವೃತ್ತ ಯೋಧ ಸುಭಾಷ್ ಅವರ ಪುತ್ರಿ ಸಂಧ್ಯಾ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಸಂಧ್ಯಾ ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಈ ಸಾಲಿನ ಪರೀಕ್ಷೆ ಬರೆದಿದ್ದಳು. ಫಲಿತಾಂಶದ ನಿರೀಕ್ಷೆಯಲ್ಲಿ ಆತಂಕದ ನಡುವೆ ಶನಿವಾರ ಮಧ್ಯಾಹ್ನ ಫಲಿತಾಂಶ ಬರುವ ಮುನ್ನವೇ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.