ಎನ್.ಡಿ.ಆರ್.ಎಫ್. ನಿಯಮ ತಿದ್ದುಪಡಿ ಮಾಡಿ, ಪ್ರಕೃತಿ ವಿಕೋಪದ ಹಾನಿಗೆ ಕೂಡಲೇ ಪರಿಹಾರ ನೀಡಿ: ಸಿದ್ದರಾಮಯ್ಯ ಒತ್ತಾಯ

Update: 2022-06-21 06:13 GMT

ಬೆಂಗಳೂರು, ಜೂ.21: ಎನ್ ಡಿ ಆರ್ ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ, ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡುವಂತೆ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಕೇಂದ್ರ ಸರಕಾರ ರಾಜ್ಯಗಳಿಗೆ ಬಿಡುಗಡೆ ಮಾಡುತ್ತದೆ. ಪ್ರತಿ 5 ವರ್ಷಗಳಿಗೆ ಒಮ್ಮೆ  ಎನ್‍ಡಿಆರ್‍ಎಫ್ ನಿಯಮಗಳನ್ನು ತಿದ್ದುಪಡಿ ಮಾಡಿ ರೈತರ ಬೆಳೆಗಳಿಗೆ ಇನ್‍ಪುಟ್ ಸಬ್ಸಿಡಿಯ ಮೊತ್ತ, ಮೀನುಗಾರರ ದೋಣಿಗಳಿಗೆ ಆದ ಹಾನಿ, ಜನ ಜಾನುವಾರಿಗಳಿಗೆ ಉಂಟಾದ ತೊಂದರೆ, ಮನೆ ಹಾನಿ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಆದ ನಷ್ಟಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಿಸಲಾಗುತ್ತದೆ. ಆದರೆ 2015-20ಕ್ಕೆ ಅನ್ವಯವಾಗುವಂತೆ ರೂಪಿಸಿದ ನಿಯಮಗಳನ್ನು 2015ರಲ್ಲಿ ಪರಿಷ್ಕರಿಸಲಾಗಿತ್ತು. ಸಹಜವಾಗಿ ಇದು 2020ರಲ್ಲಿ ಮತ್ತೆ ಪರಿಷ್ಕರಿಸಬೇಕಾಗಿತ್ತು. ಇದುವರೆಗೂ ಪರಿಷ್ಕರಣೆ ಮಾಡಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಎಲ್ಲ ಉತ್ಪನ್ನಗಳ ಬೆಲೆ ದುಪ್ಪಟ್ಟಾಗಿವೆ. ಹಣದುಬ್ಬರ ದಾಖಲೆ ಮಟ್ಟಕ್ಕೆ ತಲುಪಿದೆ. ಇಷ್ಟಾದರೂ ಕೇಂದ್ರ ಸರ್ಕಾರ ಎನ್‍ಡಿಆರ್‍ಎಫ್ ನಿಯಮಗಳನ್ನು ಪರಿಷ್ಕರಿಸಿಲ್ಲ. ಪ್ರಸಕ್ತ ಒಂದು ಎಕರೆ ಮಳೆಯಾಶ್ರಿತ ಪ್ರದೇಶದಲ್ಲಿ ರೈತರು ಬೆಳೆದ ಬೆಳೆ ಶೇ.33ಕ್ಕಿಂತ ಹೆಚ್ಚು  ಹಾನಿಯಾದರೆ  ಸಿಗುವ ಪರಿಹಾರ ಕೇವಲ 2,720 ರೂ. ಮಾತ್ರ. ಅದರಲ್ಲೂ ಗರಿಷ್ಠ 2.5 ಹೆಕ್ಟೇರ್‍ಗೆ ಅಂದರೆ 6,800 ರೂ. ಮಾತ್ರ. ಅಂದರೆ ಪ್ರತಿ ಗುಂಟೆ ಗೆ ಕೇವಲ 68 ರೂ. ಸಿಗುತ್ತದೆ.  ಆದರೆ ಒಂದು ಎಕರೆ ರಾಗಿ, ಜೋಳ ಬೆಳೆಯಲು ಕನಿಷ್ಠ 25,000 ರೂ. ಖರ್ಚು ತಗಲುತ್ತದೆ. ಈ ಮೊತ್ತ ಪರಿಷ್ಕರಣೆಯಾಗಲೇಬೇಕಾಗಿದೆ. ನಾನು ವಿಧಾನಸಭೆಯ ಅಧಿವೇಶನಗಳಲ್ಲಿ ಕನಿಷ್ಠ 25,000 ರೂ ಕೊಡಿ ಎಂದು ಒತ್ತಾಯಿಸಿದ್ದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಈ ಮೊತ್ತವನ್ನು ಪರಿಷ್ಕರಣೆ ಮಾಡದ ಕಾರಣದಿಂದ ಕಳೆದ 2 ವರ್ಷಗಳಿಂದ ರೈತರಿಗೆ ವಿಪರೀತ ನಷ್ಟ ಉಂಟಾಗಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಸಂಭವಿಸಿರುವ ನಷ್ಟದ ಪ್ರಮಾಣ ಒಂದು ಅಂದಾಜಿನ ಪ್ರಕಾರ 2 ಲಕ್ಷ ಕೋಟಿ ರೂಗಳಷ್ಟಾಗಬಹುದು. ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಮೊತ್ತ  ಕೇವಲ 3,965 ಕೋಟಿ ರೂ ಮಾತ್ರ ಎಂದು ಅವರು ವಿವರಿಸಿದ್ದಾರೆ.

ರಾಜ್ಯದಲ್ಲಿ ಮೇ ತಿಂಗಳಿಂದ ನವೆಂಬರ್‍ವರೆಗೆ ಸಂಭವಿಸಿದ ಪ್ರವಾಹದ ಹಾನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾರ್ಚ್-2022 ರಲ್ಲಿ ಕೇವಲ 492 ಕೋಟಿ ರೂ. ಬಿಡುಗಡೆ ಮಾಡಿದೆ. ಇದು ಮೋದಿ ಸರ್ಕಾರದ ವೇಗ ಮತ್ತು ರೈತ ಪರ ಕಾಳಜಿ ಎಂದು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಟೀಕಿಸಿದ ಮಾಜಿ ಮುಖ್ಯಮಂತ್ರಿ,

ಜನರು ಮತ್ತು ವಿರೋಧ ಪಕ್ಷಗಳು ಪರಿಹಾರಕ್ಕಾಗಿ ಒತ್ತಡಗಳನ್ನು ತಂದಾಗ ರಾಜ್ಯ ಸರ್ಕಾರ 2,391 ಕೋಟಿ ರೂಪಾಯಿಗಳಷ್ಟು ಪರಿಹಾರವನ್ನು ರೈತರಿಗೆ ನೀಡಿತು.  ಕೇಂದ್ರ ಸರ್ಕಾರ ನೀಡಬೇಕಾದ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ನೀಡಬೇಕಾಯಿತು. ಆ ಮೂಲಕ ಕೇಂದ್ರವು ರಾಜ್ಯವನ್ನು ಇನ್ನಷ್ಟು ಶೋಷಣೆ ಮಾಡಿತು. ಕಳೆದ 3 ವರ್ಷಗಳಿಂದ ರಾಜ್ಯ ಸರ್ಕಾರ 3,890 ಕೋಟಿ ರೂಗಳನ್ನು ರೈತರಿಗೆ, ವಸತಿ ಹಾನಿಯಾದವರಿಗೆ ನೀಡಿದೆ. ಇದಿಷ್ಟೂ ಸೇರಿದಂತೆ ಹೆಚ್ಚುವರಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕಾಗಿತ್ತು. ಯಾಕೆಂದರೆ ಪರಿಹಾರ ನೀಡುವುದಕ್ಕೋಸ್ಕರವೆ ಕೇಂದ್ರದ ಬಜೆಟ್‍ನಲ್ಲಿ ಹಣ ಮೀಸಲಿರಿಸಲಾಗುತ್ತದೆ. ಆದರೆ ಕರ್ನಾಟಕಕ್ಕೆ ಕೊಡಬೇಕಾದಷ್ಟು ಪರಿಹಾರವನ್ನು ನೀಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಆದ್ದರಿಂದ ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದೇನೆಂದರೆ,  ಮೊದಲು ಎನ್‍ಡಿಆರ್‍ಎಫ್ ನಿಯಮಗಳಿಗೆ 2020ರಿಂದಲೇ ಪೂರ್ವಾನ್ವಯವಾಗುವಂತೆ ತಿದ್ದುಪಡಿ ಮಾಡಿ ಬಾಕಿ ಪರಿಹಾರವನ್ನು ಬಿಡುಗಡೆ ಮಾಡಬೇಕು. ರೈತರಿಗೆ ನಷ್ಟವಾದ ಅಷ್ಟೂ ಹಣವನ್ನು ನಷ್ಟವಾದ ಅಷ್ಟೂ ಎಕರೆಗೆ ಪರಿಹಾರ ನೀಡುವ ಹಾಗೆ ತಿದ್ದುಪಡಿ ತರಬೇಕು. ಮನೆ ಕಳೆದುಕೊಂಡವರಿಗೆ, ಮೀನುಗಾರರಿಗೆ ಹಾಗೂ ಇತರ ಎಲ್ಲ ಬಾಧಿತರಿಗೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಪರಿಹಾರ ನೀಡುವಂತಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

 ಜೊತೆಗೆ, ಹವಾಮಾನ ವೈಪರೀತ್ಯವು ರೈತರನ್ನು ತೀವ್ರವಾಗಿ ಬಾಧಿಸುವ ಸಂಗತಿಯಾದ ಕಾರಣ ಮುಂದಿನ ದಿನಗಳಲ್ಲಿ ಈ ಸಮಸ್ಯೆ ಇನ್ನೂ ಹೆಚ್ಚಾಗುತ್ತದೆ, ರೈತರು ಇನ್ನಷ್ಟು ಹೆಚ್ಚು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ವಿಜ್ಞಾನಿಗಳು ತಜ್ಞರು ರಾಜ್ಯ ಸರ್ಕಾರಕ್ಕೆ ಹಿಂದಿನ ವರ್ಷ ವರದಿ ನೀಡಿದ್ದಾರೆ. ಸದರಿ ವರದಿಯನ್ನು ಆಧರಿಸಿ ಸರ್ಕಾರ ಸಮಗ್ರವಾದ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಬೇಕಾಗಿತ್ತು. ಆದರೆ ಭ್ರಷ್ಟಾಚಾರದ ಕೂಪದಲ್ಲಿ ಮುಳುಗೇಳುತ್ತಿರುವ ಸರ್ಕಾರಕ್ಕೆ ಇದನ್ನೆಲ್ಲ ಮಾಡಲು ಪುರುಸೊತ್ತು ಇಲ್ಲವಾಗಿದೆ. ಪ್ರವಾಹ, ಬರ ಬಂದು ಜನರು ಸಂಕಷ್ಟದಲ್ಲಿದ್ದಾಗಲೂ ಸರ್ಕಾರ ನಿದ್ರೆಯಲ್ಲಿದ್ದಂತೆ ನಟಿಸಿಕೊಂಡು ಕಾಲ ಕಳೆದಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳಲ್ಲಿ ಬಹುಪಾಲು ಜನರು  ಜಿಲ್ಲೆಗಳಿಗೆ ಭೇಟಿ ಮಾಡದೆ ನಿರ್ಲಕ್ಷ್ಯ ಮಾಡಿದರು. ಹಾಗಾಗಿ ಸರ್ಕಾರ ಜಡತೆಯಿಂದ, ಮನುಷ್ಯರನ್ನು ದ್ವೇಷದಿಂದ ಒಡೆದು ಹಾಕುವ ಕೆಟ್ಟತನದಿಂದ ಹೊರಬಂದು ಬರ ಪ್ರವಾಹಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿಭಾಯಿಸುವಂತಹ ವ್ಯವಸ್ಥೆ ರೂಪಿಸಬೇಕು.

ಇತ್ತೀಚೆಗೆ ಅಸಾನಿ ಚಂಡಮಾರುತದಿಂದ ತೊಂದರೆಗಳಿಗೆ ಒಳಗಾದವರಿಗೆ ತುರ್ತಾಗಿ ಪರಿಹಾರ ನೀಡಬೇಕು. ಕಳೆದ ಮೂರು ವರ್ಷಗಳಿಂದ ಹಾನಿಯಾಗಿರುವ ಸಾವಿರಾರು ಮನೆಗಳಿಗೆ ಈಗಲೂ ಸಮರ್ಪಕ ಪರಿಹಾರ ನೀಡಿಲ್ಲ.  ಶಾಶ್ವತ ನೆಲೆ ಕಲ್ಪಿಸಿಲ್ಲ. ಈ ವ್ಯವಸ್ಥೆಯನ್ನು ತುರ್ತಾಗಿ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News