ಕಾಮೆಡ್-ಕೆ ರದ್ದತಿಗೆ ಖಾಸಗಿ ಕಾಲೇಜುಗಳ ಒಲವು, ಎಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಹೆಚ್ಚಳ: ಸಚಿವ ಡಾ.ಅಶ್ವತ್ಥ ನಾರಾಯಣ

Update: 2022-06-22 14:04 GMT
 ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಜೂ. 22: ‘ತಾನು ಈಗ ಪ್ರತ್ಯೇಕವಾಗಿ ನಡೆಸುತ್ತಿರುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಿ, ಸರಕಾರದ ಸಿಇಟಿ ವ್ಯವಸ್ಥೆಯಡಿಗೆ ಹಿಂದಿರುಗಲು ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟ(ಕ್ಯುಪೇಕಾ) ಆಸಕ್ತಿ ತೋರಿದೆ. ಈ ಸಂಬಂಧ ಒಪ್ಪಂದ ಆದ ಮೇಲೆ ಮುಂದಿನ ವರ್ಷದಿಂದ ಒಂದೇ ಸಿಇಟಿ ಮಾಡಲಾಗುವುದು' ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಕಾಮೆಡ್-ಕೆ ಪ್ರತಿನಿಧಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಎರಡು ವರ್ಷದಿಂದ ಯಥಾಸ್ಥಿತಿಯಲ್ಲಿದ್ದ ಎಂಜಿನಿಯರಿಂಗ್ ಶಿಕ್ಷಣ ಶುಲ್ಕವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹೊರೆಯಾಗದಂತೆ ಕೇವಲ ಶೇ.10ರಷ್ಟು ಮಾತ್ರ ಹೆಚ್ಚಿಸಲು ನಿರ್ಧರಿಸಲಾಗಿದೆ. ಶೇ.25ರಷ್ಟು ಶುಲ್ಕ ಏರಿಕೆ ಮಾಡಬೇಕೆಂಬ ಕ್ಯುಪೇಕಾ ಬೇಡಿಕೆ ಕಾರ್ಯಸಾಧುವಲ್ಲ ಎನ್ನುವುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ' ಎಂದು ಸ್ಪಷ್ಟಪಡಿಸಿದರು.

‘ಶುಲ್ಕ ಹೆಚ್ಚಳವು ಖಾಸಗಿ ಕಾಲೇಜುಗಳಲ್ಲಿ ಇರುವ ಸರಕಾರಿ ಎಂಜಿನಿಯರಿಂಗ್ ಸೀಟುಗಳಿಗೆ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇದನ್ನು ಮೀರಿ ಹೆಚ್ಚಿನ ಶುಲ್ಕ ವಸೂಲು ಮಾಡಿದರೆ ಅಂತಹ ಕಾಲೇಜುಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕೆ ಕ್ಯುಪೇಕಾ ಪ್ರತಿನಿಧಿಗಳು ಒಪ್ಪಿಕೊಂಡಿದ್ದಾರೆ' ಎಂದು ಅವರು ಹೇಳಿದರು.

‘ಖಾಸಗಿ ಕಾಲೇಜುಗಳು ದುಬಾರಿ ಶುಲ್ಕದ ಆಡಳಿತ ಮಂಡಳಿ ಸೀಟುಗಳಿಗಾಗಿ ತಾವೇ ನಡೆಸುತ್ತಿರುವ ಕಾಮೆಡ್-ಕೆ ಪರೀಕ್ಷೆಯನ್ನು ನಿಲ್ಲಿಸುವ ಸುಳಿವು ನೀಡಿವೆ. ಇದರ ಸಾಧ್ಯತೆಗಳನ್ನು ಪರಿಶೀಲಿಸಲು ಉನ್ನತ ಸಮಿತಿ ರಚಿಸಲಾಗುವುದು. ಇದನ್ನು ಆಧರಿಸಿ, ಕ್ಯುಪೇಕಾ ಜತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು' ಎಂದು ಅವರು ವಿವರಿಸಿದರು.

ಕಾಮೆಡ್-ಕೆ ಸ್ಥಗಿತಗೊಂಡರೆ, ಸರಕಾರವು ಸಿಇಟಿಯನ್ನು ಅಖಿಲ ಭಾರತ ವ್ಯಾಪ್ತಿಯಲ್ಲಿ ನಡೆಸಲಿದೆ. ಇದರಲ್ಲಿ ವಿದ್ಯಾರ್ಥಿಗಳು ಪಡೆಯುವ ರ್ಯಾಂಕಿಂಗ್ ಆಧರಿಸಿ, ಈಗಿನಂತೆಯೇ ಸೀಟು ಹಂಚಲಾಗುವುದು. ಇದರಿಂದ ಈಗ ಆಗುತ್ತಿರುವ ಗೊಂದಲ ಮತ್ತು ಅಪವ್ಯಯ ಎರಡೂ ನಿವಾರಣೆ ಆಗಲಿವೆ ಎಂದು ಅಶ್ವತ್ಥ ನಾರಾಯಣ ನುಡಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕ್ಯುಪೇಕಾ ಅಧ್ಯಕ್ಷ, ಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಸೇರಿದಂತೆ ಇತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News