ಪ್ರವಾದಿ ನಿಂದನೆ ವಿರೋಧಿ ಪ್ರತಿಭಟನಾಕಾರರಿಗೆ ಕಸ್ಟಡಿ ದೌರ್ಜನ್ಯ: ಪೊಲೀಸರ ಪ್ರತಿಕ್ರಿಯೆ ಕೇಳಿದ ಮಾನವ ಹಕ್ಕು ಆಯೋಗ

Update: 2022-06-22 15:04 GMT
Photo: Twitter/screengrab

ಲಖ್ನೋ: ಉತ್ತರಪ್ರದೇಶದಲ್ಲಿ ಪ್ರವಾದಿ ನಿಂದನೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ವಿರುದ್ಧ ಪೊಲೀಸ್ ದೌರ್ಜನ್ಯ ಮತ್ತು ಅಮಾನವೀಯ ವರ್ತನೆಯ ಆರೋಪಗಳ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಸಹರಾನ್‌ಪುರದ ಎಸ್‌ಎಸ್‌ಪಿಯಿಂದ ಪ್ರತಿಕ್ರಿಯೆ ಕೇಳಿದೆ. ಅಲ್ಲದೆ, ಅಗತ್ಯ ಕ್ರಮ ಕೈಗೊಂಡಿರುವ ಬಗ್ಗೆ ನಾಲ್ಕು ವಾರಗಳಲ್ಲಿ ವರದಿಯನ್ನು ನೀಡುವಂತೆ ಪೊಲೀಸರಿಗೆ ಆಯೋಗವು ಕೇಳಿದೆ ಎಂದು indiatoday ವರದಿ ಮಾಡಿದೆ.

ಜೂನ್ 10 ರಂದು ಸಹರಾನ್‌ಪುರದ ಠಾಣಾ ಕೊತ್ವಾಲಿ ನಗರದ ಪೊಲೀಸ್ ಅಧಿಕಾರಿಗಳ ತಂಡವು ಕೆಲವು ಪ್ರತಿಭಟನಾಕಾರರನ್ನು ಬಂಧಿಸಿತು, ನಂತರ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ನಿರ್ದಯ, ಅಮಾನವೀಯ ದೌರ್ಜನ್ಯಕ್ಕೆ ಒಳಪಡಿಸಲಾಗಿದೆ ಎಂದು ವಕೀಲ ಮರೂಫ್ ಅನ್ಸಾರಿ ಅವರು ಸಲ್ಲಿಸಿದ ದೂರಿನಲ್ಲಿ ಆರೋಪಿಸಲಾಗಿದೆ. ಪೊಲೀಸರ ಕ್ರಮ/ ಕ್ರೌರ್ಯದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.  

"ಪೊಲೀಸ್ ದೌರ್ಜನ್ಯದ ಬಗ್ಗೆ ಸ್ವತಂತ್ರ ತನಿಖೆ ಮತ್ತು ಸಂತ್ರಸ್ತರ ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ತೊಡಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕಾಗಿ ದೂರುದಾರರು ಈ ವಿಷಯದಲ್ಲಿ ಆಯೋಗದ ಮಧ್ಯಪ್ರವೇಶವನ್ನು ಕೋರಿದ್ದಾರೆ. ಅಗತ್ಯ ಕ್ರಮ ಕೈಗೊಂಡ ವರದಿಯನ್ನು ನಾಲ್ಕು ವಾರಗಳಲ್ಲಿ ಸಲ್ಲಿಸಲಿ. " ಎಂದು ಮಾನವ ಹಕ್ಕುಗಳ ಆಯೋಗ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News