×
Ad

ಸಫಾಯಿ ಕರ್ಮಚಾರಿಗಳಿಗೆ ಎಲ್ಲಾ ಸೌಲಭ್ಯ ಒದಗಿಸಿ: ಉಡುಪಿ ಜಿಲ್ಲಾಧಿಕಾರಿ

Update: 2022-06-22 20:42 IST

ಉಡುಪಿ : ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ದಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರಕಾರ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಪದ್ದತಿಯನ್ನು ಸಂಪೂರ್ಣವಾಗಿ ನಿಷೇಧಿಸಿ, ಕಾಯಿದೆ ಹಾಗೂ ನಿಯಮ ಗಳನ್ನು ಜಾರಿಗೆ ತರುವುದರೊಂದಿಗೆ  ಈ ವೃತ್ತಿಯನ್ನು ತೊಲಗಿಸಲು ಕಟಿಬದ್ಧವಾಗಿದೆ. ಒಂದೊಮ್ಮೆ ಕಾಯ್ದೆಯನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ದ ಕಾನೂನಿನಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಿಂದ ಹೊರ ಬಂದಿರುವವರಿಗೆ ಸೂಕ್ತ ಪುರ್ನವಸತಿ ಒದಗಿಸಬೇಕು. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಮಂಜೂರಾತಿ ಯನ್ನು  ಪ್ರಥಮಾದ್ಯತೆಯ ಮೇಲೆ ನೀಡಬೇಕು ಎಂದು ಸೂಚಿಸಿದರು. ಅದೇ ರೀತಿ ಮೃತಪಟ್ಟ ಕಾರ್ಮಿಕರ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ಗುರುತಿನ ಚೀಟಿ ಹಾಗೂ ಪುರ್ನವಸತಿ ಕಲ್ಪಿಸುವ ಕಾರ್ಯವಾಗಬೇಕು ಎಂದರು.

ಸಕ್ಕಿಂಗ್ ಹಾಗೂ ಜಟ್ಟಿಂಗ್ ಯಂತ್ರಗಳನ್ನು, ವೈಯಕ್ತಿಕವಾಗಿ ಸಫಾಯಿ ಕರ್ಮಚಾರಿಗಳ ಸ್ವಸಹಾಯ ಗುಂಪುಗಳಿಂ, ಖಾಸಗಿ ಏಜೆನ್ಸಿ ಗುತ್ತಿಗೆದಾರರಿಂದ ಹೊಸ ಯಂತ್ರಗಳನ್ನು ಖರೀದಿ ಮಾಡಲು ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುವುದು. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನುಡಿದರು.

ಪೌರಕಾರ್ಮಿಕರ ಆರೋಗ್ಯವನ್ನು ಪ್ರತಿ ೩ ತಿಂಗಳಿಗೊಮ್ಮೆಸಾಮಾನ್ಯ ಅರೋಗ್ಯ ತಪಾಸಣೆ ಹಾಗೂ ವಾರ್ಷಿಕವಾಗಿ ಎರಡು ಬಾರಿ ಸಂಪೂರ್ಣ ದೇಹ ಪರೀಕ್ಷೆಯನ್ನು ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಮಾಡಿಸಿ, ವರದಿಯನ್ನು ಜಿಲ್ಲಾ ಜಾಗೃತಿ ಸಮಿತಿಗೆ ನೀಡಬೇಕು ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಲೋಡರ್ಸ್‌ ಹಾಗೂ ಕ್ಲೀನರ್‌ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವ್ಯಕ್ತಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಜಾಗೃತ ಸಮಿತಿ ಸದಸ್ಯರಾದ ವೈ.ಲಕ್ಷ್ಮಣ್  ಗಣೇಶ್, ಅನಿತಾ ಹಾಗೂ ಎಲ್ಲಾ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News