ಅಗ್ನಿಪತ್ ಯೋಜನೆ ಖಂಡಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

Update: 2022-06-25 09:55 GMT

ಬೆಂಗಳೂರು: 'ಅಗ್ನಿಪತ್ ಯೋಜನೆ ಖಂಡಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಬೇಕು ಎಂದು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಯುವಕರಿಗೆ ದೊಡ್ಡ ಅನ್ಯಾಯವಾಗುತ್ತಿದ್ದು, ಪ್ರತಿಭಟನೆ ಅನಿವಾರ್ಯ. ಎಷ್ಟು ಸಾಧ್ಯವೋ ಅಷ್ಟು ಜನರನ್ನು ಸೇರಿಸಿ ಈ ಅನ್ಯಾಯ ವಿಚಾರವನ್ನು ಜನರಿಗೆ ಮುಟ್ಟಿಸಬೇಕು ಎಂದರು.

ಯೋಜನೆ ಕೈಬಿಡುವ ಚಿಂತನೆ ಇಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ' ಸರ್ಕಾರ ಏನಾದರೂ ಹೇಳಲಿ. ನಾವು ನಮ್ಮ ವಿಚಾರವನ್ನು ವ್ಯಕ್ತಪಡಿಸುತ್ತೇವೆ. ನಮ್ಮ ಮಕ್ಕಳು ನಾಲ್ಕು ವರ್ಷ ಸೇನೆಯಲ್ಲಿ ಸೇವೆಯಲ್ಲಿ ಸಲ್ಲಿಸಿ ನಂತರ ಬೇರೆಯವರಿಗೆ ಸೆಕ್ಯುರಿಟಿ ಗಾರ್ಡ್ ಆಗಲು ಬಿಡುವುದಿಲ್ಲ. ಬೇಕಿದ್ದರೆ ಬಿಜೆಪಿ ನಾಯಕರ ಮಕ್ಕಳು ಆಗ್ನಿಪತ್ ಮೂಲಕ ಸೇನೆ ಸೇರಲಿ. ಅವರ ಮಕ್ಕಳು ಮಾತ್ರ ವೈದ್ಯರು, ಇಂಜಿನಿಯರ್, ಪ್ರೊಫೆಸರ್ ಆಗಬೇಕು, ಬಡವರ ಮಕ್ಕಳು ಸೆಕ್ಯೂರಿಟಿ ಗಾರ್ಡ್ ಆಗಬೇಕಾ? ಇದು ಸರಿಯಿಲ್ಲ. ಸೇನೆಗೆ ಯುವಕರನ್ನು ತೆಗೆದುಕೊಳ್ಳಲಿ. ಆದರೆ ಪೂರ್ಣಾವಧಿಗೆ ತೆಗೆದುಕೊಂಡು ಅವರು ನಿವೃತ್ತಿಯಾಗುವವರೆಗೂ ಸೇವೆಗೆ ಅವಕಾಶ ನೀಡಲಿ. ಇಷ್ಟು ದಿನ ಹೇಗಿತ್ತೋ ಹಾಗೆಯೇ ನೇಮಕ ಮಾಡಲಿ. ಯೋಧರ ವೇತನ ಹಾಗೂ ಪಿಂಚಣಿಗೆ ಸಮಸ್ಯೆ ಇದ್ದರೆ, ಸರ್ಕಾರ ಬೇರೆ ವಿಚಾರಗಳಿಗೆ ಸೆಸ್ ಹಾಕುತ್ತಿರುವಂತೆ ಸೆಸ್ ಹಾಕಲಿ' ಎಂದು ತಿಳಿಸಿದರು.

ಮಾಜಿ ಸಚಿವ ಸೀತಾರಾಮ್ ಅವರ ಹೇಳಿಕೆ ಕುರಿತ ಪ್ರಶ್ನೆಗೆ, ' ಅವರು ಪಕ್ಷದ ಹಿರಿಯ ನಾಯಕರು. ಅವರು ಶಾಸಕರಾಗಿದ್ದು, ಮಂತ್ರಿಯಾಗಿದ್ದರು. ಸದನದಲ್ಲಿ ಆಡಳಿತ ಪಕ್ಷದ ನಾಯಕರಾಗಿದ್ದರು. ಪಕ್ಷ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಟ್ಟಿತ್ತು. ಆದರೆ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಕಳೆದ ಬಾರಿ ವಿಧಾನ ಪರಿಷತ್ 2 ಸ್ಥಾನಗಳ ಪೈಕಿ ಹಿರಿಯರಾದ ನಾಸಿರ್ ಹಾಗೂ ಬಿ.ಕೆ ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿದ್ದೆವು. ಈ ಬಾರಿ ಜೈರಾಮ್ ರಮೇಶ್ ಅವರಿಗೆ ನೀಡಿದ್ದೇವೆ. ಇದರಲ್ಲಿ ಏನಾದರೂ ತಪ್ಪಿದ್ದರೆ ಹೇಳಲಿ ' ಎಂದು ತಿಳಿಸಿದರು.

ಈ ಅಸಮಾಧಾನಿತರ ಸಭೆ ಶಿಸ್ತು ಉಲ್ಲಂಘನೆ ಆಗುವುದಿಲ್ಲವೇ ಎಂಬ ಪ್ರಶ್ನೆಗೆ, ' ಆ ವಿಚಾರವಾಗಿ ಪಕ್ಷದ ಶಿಸ್ತು ಸಮಿತಿ ನೋಡಿಕೊಳ್ಳುತ್ತದೆ. ನಮ್ಮ ಪಕ್ಷ ಅವರನ್ನು ಗುರುತಿಸಿ ಶಾಸಕ, ಮಂತ್ರಿ ಹಾಗೂ ಪರಿಷತ್ ಸದಸ್ಯರನ್ನಾಗಿ ಮಾಡಿದೆ. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಟ್ಟು ಒಳ್ಳೆಯದು ಮಾಡಲಿ ' ಎಂದರು.

ಅವರಿಗೆ ಬಿಜೆಪಿ ಮೋಹವಿದೆಯೆ ಎಂಬ ಪ್ರಶ್ನೆಗೆ, '   ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಹೆಸರು ಮಾಡಿದ್ದಾರೆ. ಬಿಜೆಪಿಯವರು ಯಾರನ್ನೂ ಬಿಡುವುದಿಲ್ಲ. ಬಿಜೆಪಿಯವರು ಯಾವ ರೀತಿ ಪ್ರಯತ್ನಿಸುತ್ತಿದ್ದಾರೆ, ಚಿಕ್ಕಬಳ್ಳಾಪುರದಿಂದ ಯಾರನ್ನು ಕಳುಹಿಸಿದ್ದರು ಎಂಬ ಮಾಹಿತಿ ನನ್ನ ಬಳಿ ಇದೆ. ಅವರದು ಬಹಳ ಗೌರವಯುತ ಕುಟುಂಬ ಅವರು ಈ ರೀತಿ ಮಾಡುವುದಿಲ್ಲ' ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News