ಬೆಂಗಳೂರು; ಪ್ರಮುಖ ಪ್ರದೇಶಗಳಲ್ಲಿನ ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

Update: 2022-06-25 16:36 GMT

ಬೆಂಗಳೂರು, ಜೂ.25: ಬೆಂಗಳೂರಿನ ಹೆಬ್ಬಾಳ, ಮಹದೇವಪುರ ಹೊರವರ್ತುಲ ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್, ಸೆಂಟ್ ಜಾನ್ಸ್ ಆಸ್ಪತ್ರೆ, ಭಟ್ಟರಹಳ್ಳಿ ಜಂಕ್ಷನ್, ವೈಟ್‍ಫೀಲ್ಡ್ ರಸ್ತೆಗಳು ಸೇರಿದಂತೆ 10 ಪ್ರಮುಖ ಪ್ರದೇಶಗಳಲ್ಲಿನ ವಾಹನ ಸಂಚಾರ ದಟ್ಟಣೆ ನಿವಾರಿಸುವುದರ ಜೊತೆಗೆ ಟ್ರಾಫಿಕ್ ಸಿಗ್ನಲ್‍ಗಳನ್ನು ಸಿಂಕ್ರೋನೈಜ್ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರದ ಸಂಚಾರ ಸುವ್ಯವಸ್ಥೆ ಕುರಿತು ಬಿಬಿಎಂಪಿ, ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಹಾಗೂ ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಈ ಕೆಲಸದ ಮೇಲುಸ್ತುವಾರಿಯನ್ನು ಖುದ್ದು ಡಿಸಿಪಿಗಳೇ ವಹಿಸಿಕೊಳ್ಳಬೇಕೆಂದು ಸೂಚಿಸಿದರು.

ಸಂಚಾರ ದಟ್ಟಣೆ ನಿವಾರಣೆಗೆ, ನಗರಾಭಿವೃದ್ಧಿ ಮತ್ತು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು, ಪೊಲೀಸ್ ಆಯುಕ್ತರು, ಬಿಎಂಆರ್‍ಸಿಎಲ್, ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧಿಕಾರಿಗಳು ಒಟ್ಟಾಗಿ ಪರಿಹಾರ ಕ್ರಮಗಳನ್ನು ರೂಪಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು. 

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿನ ಗುಂಡಿ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಕ್ರಮ ವಹಿಸಬೇಕು. ಮಳೆಯಾದಾಗ ನೀರು ನುಗ್ಗಿ ಸಂಚಾರ ದಟ್ಟಣೆಯಾಗುತ್ತಿರುವ 50 ಸ್ಥಳಗಳನ್ನು ತಕ್ಷಣ ದುರಸ್ತಿ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸಿಗ್ನಲ್ ಸಿಂಕ್ರೋನೈಸೇಷನ್: ಸಿಬಿಡಿ, ಹೈಡೆನ್ಸಿಟಿ ಕಾರಿಡಾರ್‍ನಲ್ಲಿ 48 ಕೋಟಿ ರೂ.ವೆಚ್ಚದಲ್ಲಿ ಸಿಗ್ನಲ್‍ಗಳ ಸಿಂಕ್ರೊನೈಸೇಷನ್ ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸಬೇಕು. ಇದರಿಂದ ಜನರಿಗೆ ಅನುಕೂಲ ಆಗುತ್ತದೆ. ರಸ್ತೆ ಗುಂಡಿಗಳನ್ನು ಆದ್ಯತೆಯ ಮೇರೆಗೆ ಮುಚ್ಚಲು ಕ್ರಮ ಕೈಗೊಳ್ಳಿ. ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಹಾಗೂ ಬಿಎಂಆರ್‍ಸಿಎಲ್‍ನವರು ಕಾಮಗಾರಿಗಾಗಿ ಅಗೆದ ರಸ್ತೆ ಹಾಗೆಯೆ ಇವೆ. ಈ ಕಾಮಗಾರಿ ಪೂರ್ಣಗೊಂಡ ತಕ್ಷಣವೇ ಆ ರಸ್ತೆಗಳ ದುರಸ್ತಿ ಕಾರ್ಯ ನಡೆಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. 

ಸಂಚಾರ ಪೊಲೀಸರ ಸಂಖ್ಯಾಬಲ ಹೆಚ್ಚಿಸಿ. ವಾಹನ ದಟ್ಟಣೆ ನಿಯಂತ್ರಣಕ್ಕೆ ಆದ್ಯತೆ ನೀಡಿ. ರಾಷ್ಟ್ರೀಯ ಹೆದ್ದಾರಿಯಿಂದ ನಗರ ಪ್ರವೇಶಿಸುವ ಪ್ರಮುಖ ರಸ್ತೆಗಳಲ್ಲಿ ಸುಗಮ ಸಂಚಾರ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಮುಖ್ಯಮಂತ್ರಿ ಸೂಚಿಸಿದರು.

ನಿರ್ಭಯಾ ಯೋಜನೆಯಲ್ಲಿ ಅಳವಡಿಸುವ ಕ್ಯಾಮರಾಗಳಲ್ಲಿ ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಆದ್ಯತೆ ಮೇರೆಗೆ ಕ್ಯಾಮರಾ ಅಳವಡಿಸಿ. ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಮತ್ತು ಹೈಡೆನ್ಸಿಟಿ ರಸ್ತೆಗಳ ಒತ್ತುವರಿ, ಅಡೆತಡೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಿ. ನಗರ ಪ್ರದೇಶದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಈ ಕುರಿತು ಕೈಗೊಂಡ ಕ್ರಮಗಳ ಕುರಿತು ತಮಗೆ ವರದಿ ಸಲ್ಲಿಸುವಂತೆ ಸೂಚಿಸಿದ ಮುಖ್ಯಮಂತ್ರಿ, ತಾವೇ ಖುದ್ದು ವಲಯವಾರು ಸಭೆ ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಜಂಟಿ ಆಯುಕ್ತ ಬಿ.ಆರ್.ರವಿಕಾಂತೇಗೌಡ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News